ಹಾಸನ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸುವಂತೆ ಪ್ರತಿಭಟನೆ

| Published : Aug 13 2025, 12:30 AM IST

ಹಾಸನ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸುವಂತೆ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಭಾರತೀಯ ಸಾರ್ವಜನಿಕ ಆರೋಗ್ಯ ಮಾನದಂಡಗಳಿಗೆ (ಐಪಿಎಚ್ಎಸ್) ಅನುಗುಣವಾಗಿ ಸೌಲಭ್ಯಗಳನ್ನು ನೀಡಿ ಉನ್ನತೀಕರಿಸಿ ಸಬಲೀಕರಿಸುವಂತೆ ಆಗ್ರಹಿಸಿ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದ ನೇತೃತ್ವದಲ್ಲಿ ಜನಾರೋಗ್ಯಕ್ಕಾಗಿ ಜನಾಂದೋಲನ ಆರಂಭಿಸಲಾಗಿದೆ.

ಕನ್ನಡಪ್ರಭ ವಾರ್ತೆ ಹಾಸನ

ನಗರದ ಗಂಧದ ಕೋಠಿ ಆವರಣದಲ್ಲಿ ನಿರ್ಮಾಣ ಮಾಡಲಾಗಿರುವ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಶೀಘ್ರವೇ ಕಾರ್ಯಾರಂಭ ಮಾಡುವ ಮೂಲಕ ಜಿಲ್ಲೆಯ ಸಾರ್ವಜನಿಕರ ಆರೋಗ್ಯ ಸಬಲೀಕರಣಕ್ಕೆ ಒತ್ತಾಯಿಸಿ ಜಿಲ್ಲಾ ದಲಿತ ಮತ್ತು ಮಾದಿಗ ದಂಡೋರ ಹಾಗೂ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು. ಇದೇ ವೇಳೆ ದಲಿತ ಸಂಘಟನೆಯ ಹಿರಿಯ ಮುಖಂಡ ಎಚ್.ಕೆ. ಸಂದೇಶ್ ಮಾತನಾಡಿ, ಭಾರತೀಯ ಸಾರ್ವಜನಿಕ ಆರೋಗ್ಯ ಮಾನದಂಡಗಳಿಗೆ (ಐಪಿಎಚ್ಎಸ್) ಅನುಗುಣವಾಗಿ ಸೌಲಭ್ಯಗಳನ್ನು ನೀಡಿ ಉನ್ನತೀಕರಿಸಿ ಸಬಲೀಕರಿಸುವಂತೆ ಆಗ್ರಹಿಸಿ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದ ನೇತೃತ್ವದಲ್ಲಿ ಜನಾರೋಗ್ಯಕ್ಕಾಗಿ ಜನಾಂದೋಲನ ಆರಂಭಿಸಲಾಗಿದೆ. ಜಿಲ್ಲೆಯ ದಲಿತ ಸಂಘಟನೆಗಳೂ ಇದರ ಭಾಗವಾಗಿದ್ದು, ಆಗಸ್ಟ್ 15ರ ಸ್ವಾತಂತ್ರ್ಯ ದಿನದಂದು ಹಾಸನದ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟದ ಮುಂದೆ ಜನಾರೋಗ್ಯದ ಸ್ವಾತಂತ್ರ್ಯಕ್ಕಾಗಿ ಸಾಮೂಹಿಕ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಜನಾರೋಗ್ಯದ ಪರಿಸ್ಥಿತಿ ಎಷ್ಟು ತೀವ್ರವಾಗಿ ಉಲ್ಬಣಗೊಂಡಿದೆ ಎಂದರೆ, ಲಿಂಗಭೇದವಿಲ್ಲದೇ ಎಲ್ಲಾ ವಯಸ್ಸಿನವರಲ್ಲಿ ಹೃದಯಾಘಾತ, ಹೃದಯ ಸ್ತಂಭನ ಮತ್ತು ಹಠಾತ್ ಮರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಇಂದಿನ ಜನಾರೋಗ್ಯ ತುರ್ತುಸ್ಥಿತಿಯಲ್ಲಿರುವುದರ ಮುನ್ಸೂಚನೆಯಾಗಿದೆ. ರಕ್ತದೊತ್ತಡ, ಮಧುಮೇಹ, ಥೈರಾಯ್ಡ್, ಸ್ಥೂಲಕಾಯತೆ ಮುಂತಾದ ದೈಹಿಕ ವ್ಯತ್ಯಾಸಗಳು ತೀವ್ರವಾಗಿ ಮತ್ತು ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿವೆ. ಇದರಿಂದಾಗಿ ಹೃದ್ರೋಗ, ಪಾರ್ಶ್ವವಾಯು, ಕಿಡ್ನಿ ಸಮಸ್ಯೆ, ಮೆದುಳು ಮತ್ತು ನರರೋಗ, ಕ್ಯಾನ್ಸರ್ ಮತ್ತಿತರೆ ಮಾರಣಾಂತಿಕ ಖಾಯಿಲೆಗಳು ಎಲ್ಲಾ ವಯೋಮಾನದ ಜನರಲ್ಲಿ ಹೆಚ್ಚಾಗುತ್ತಿವೆ.

ಜಿಲ್ಲೆಯ ಜನಾರೋಗ್ಯದ ಸ್ಥಿತಿ ಹಾಗೂ ಜಿಲ್ಲೆಯ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ನಡುವಿನ ಅಂತರಗಳು ಹೆಚ್ಚಾಗಿವೆ. ಹೀಗಾಗಿ ಸೂಕ್ತ ಸಮಯದಲ್ಲಿ ಖಾಯಿಲೆಗಳ ಪತ್ತೆ, ಸೂಕ್ತ ತಪಾಸಣೆ ಮತ್ತು ಸೂಕ್ತ ಚಿಕಿತ್ಸೆ ದೊರೆಯದೆ ಮರಣಗಳು ಹೆಚ್ಚಾಗುತ್ತಿವೆ. ಜೊತೆಗೆ ಖಾಸಗಿಯಲ್ಲಿ ದುಬಾರಿಯಾದ ತಪಾಸಣೆ ಮತ್ತು ಚಿಕೆತ್ಸೆಗೆ ಒಳಗಾದವರು ಅತ್ಯಂತ ಆರ್ಥಿಕ ದುಸ್ಥಿತಿಗೆ ತಳ್ಳಲ್ಪಟ್ಟಿರುವ ಉದಾಹರಣೆಗಳು ಸಾಕಷ್ಟಿವೆ. ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯಕ್ಕಾಗಿ ಜನರು ಖಾಸಗಿ ವ್ಯವಸ್ಥೆಯನ್ನು ಅವಲಂಭಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು. ಈ ಎಲ್ಲ ಸಮಸ್ಯೆಗಳ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಡಲಿತ ಹಾಗೂ ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯಗಳನ್ನು ಮಂಡಿಸುತ್ತಿದ್ದೇವೆ. ಪ್ರಮುಖವಾಗಿ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ(ಹಿಮ್ಸ್) ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗೆ ಬಾಕಿ ತುರ್ತು ಕಾಮಗಾರಿ, ವೈದ್ಯಕೀಯ ಯಂತ್ರೋಪಕರಣ, ತಜ್ಞ ವೈದ್ಯರು, ವೈದ್ಯಕೀಯ ಮತ್ತು ವೈದ್ಯಕೀಯೇತರ ಸಿಬ್ಬಂದಿ ನೇಮಕಾತಿಗಾಗಿ ಸದ್ಯದ ಅಂದಾಜಿನ ಪ್ರಕಾರ ಕನಿಷ್ಠ 60 ಕೋಟಿ ರೂಪಾಯಿಗಳ ಅನುದಾನದ ಅಗತ್ಯವಿದೆ.

ಹೃದ್ರೋಗ ಶಸ್ತ್ರಚಿಕಿತ್ಸೆ, ನರರೋಗ, ನರರೋಗ ಶಸ್ತ್ರಚಿಕಿತ್ಸೆ, ಮೂತ್ರಪಿಂಡ, ಗ್ಯಾಸ್ಟ್ರೋ ಎಂಟಾಲಜಿ, ಕ್ಯಾನ್ಸರ್, ಪ್ಲಾಸ್ಟಿಕ್ ಸರ್ಜರಿ ಸೇರಿದಂತೆ ಮಾರಣಾಂತಿಕ ರೋಗ ತಪಾಸಣೆಯ ಹತ್ತು ವಿಶೇಷ ವಿಭಾಗಗಳ ಗಂಭೀರ ಸ್ವರೂಪದ ಆರೋಗ್ಯದ ಸಮಸ್ಯೆಗಳಿಗೆ ಚಿಕಿತ್ಸೆ ಒದಗಿಸಲು ಇಲ್ಲಿ ಸಾಧ್ಯತೆ ಇದ್ದು, ಇಲ್ಲಿ ರೋಗ ತಪಾಸಣೆ ಮತ್ತು ಚಿಕಿತ್ಸೆ ನೀಡಲು ವೈದ್ಯಕೀಯ ವಿಭಾಗಗಳು, ಕ್ಯಾತ್ ಲ್ಯಾಬ್, ಅತ್ಯಂತ ಸುಸಜ್ಜಿತವಾದ ಅತ್ಯುತ್ತಮ ಗುಣಮಟ್ಟದ ವೈದ್ಯಕೀಯ ಸೌಲಭ್ಯಗಳಿರುವ ಪ್ರತ್ಯೇಕ ಶಸ್ತ್ರಚಿಕಿತ್ಸಾ ಘಟಕಗಳನ್ನು ಕೂಡಲೇ ಪ್ರಾರಂಭಿಸಬೇಕು. ನುರಿತ ತಜ್ಞ ವೈದ್ಯರು, ವೈದ್ಯರು, ವೈದ್ಯಕೀಯ ಮತ್ತು ವೈದ್ಯಕೀಯೇತರ ಸಿಬ್ಬಂದಿಯನ್ನು ನೇಮಕ ಮಾಡಿ, ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯ ಕಾರ್ಯಾರಂಭಕ್ಕೆ ಅಗತ್ಯ ಅನುಕೂಲಗಳನ್ನು ತುರ್ತಾಗಿ ಒದಗಿಸಿ, ಕೂಡಲೇ ಸರ್ಕಾರವು ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ಆಗಸ್ಟ್ 15ರಂದು ಹಾಸನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಆವರಣದಲ್ಲಿ ನಡೆಯುವ ಜನಾರೋಗ್ಯದ ಸ್ವಾತಂತ್ರ್ಯಕ್ಕಾಗಿ ಸಾಮೂಹಿಕ ಧರಣಿ ಸತ್ಯಾಗ್ರಹ ನಡೆಯುವ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಮತ್ತು ಜಿಲ್ಲಾಧಿಕಾರಿಯವರು ಆಗಮಿಸಿ ನಮ್ಮ ಹಕ್ಕೊತ್ತಾಯಗಳನ್ನು ಅತ್ಯಂತ ತುರ್ತಾಗಿ ಆದ್ಯತೆಯ ಮೇಲೆ ಈಡೇರಿಸಲು ತ್ವರಿತಗತಿಯಲ್ಲಿ ಕ್ರಮ ವಹಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಂಘಟನೆ ಮುಂಖಡರಾದ ಎಂ. ಸೋಮಶೇಖರ್, ಟಿ.ಆರ್. ವಿಜಯ್ ಕುಮಾರ್, ರಾಜಶೇಖರ್ ಹುಲಿಕಲ್, ಅಂಬುಗ ಮಲ್ಲೇಶ್, ಎಂ.ಜಿ. ಪೃಥ್ವಿ, ಬಿ.ಸಿ ರಾಜೇಶ್, ಹರೀಶ್ ಕಟ್ಟೆ ಕಾರ್ಲೆ, ಜಾವಗಲ್ ಇಂದ್ರೇಶ್, ರಾಜೇಶ್, ರವಿ ಬಸವಾಪುರ, ಮಂಜು ತೇಜೂರ್, ಕೆ.ಎಂ.ಸತೀಶ್, ಪುಟ್ಟರಾಜು ಹಾಗೂ ಇತರರು ಇದ್ದರು..