ನರಮೇಧ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ

| Published : Apr 24 2025, 12:03 AM IST

ಸಾರಾಂಶ

ಜಮ್ಮು-ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ರಾಜ್ಯಾದ್ಯಂತ ಬುಧವಾರ ಪ್ರತಿಭಟನೆಗಳು ನಡೆದವು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಜಮ್ಮು-ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ರಾಜ್ಯಾದ್ಯಂತ ಬುಧವಾರ ಪ್ರತಿಭಟನೆಗಳು ನಡೆದವು. ಉಗ್ರರಿಗೆ ಗುಂಡಿಕ್ಕಿ, ಇಲ್ಲವೇ ಅವರನ್ನು ಸೆರೆ ಹಿಡಿದು ಗಲ್ಲು ಶಿಕ್ಷೆ ವಿಧಿಸಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಇದೇ ವೇಳೆ, ಬೆಂಗಳೂರು, ಬಾಗಲಕೋಟೆ, ಮೈಸೂರು, ಹುಬ್ಬಳ್ಳಿ, ಕೊಪ್ಪಳ ಸೇರಿ ಕೆಲವೆಡೆ ಸಂಜೆ ಮೊಂಬತ್ತಿ ಬೆಳಗಿ, ಮೃತರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಕಚೇರಿ ಬಳಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕ್ಯಾಂಡಲ್ ಮಾರ್ಚ್ ನಡೆಸಿದರು. ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಸಂಸದ ಪಿ.ಸಿ.ಮೋಹನ್, ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ನಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಯಿತು.

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದಲ್ಲಿ ಬೆಳಗ್ಗೆ 11-12ರವರೆಗೆ ಒಂದು ತಾಸು ಸ್ವಯಂಪ್ರೇರಿತ ಬಂದ್ ಆಚರಿಸಲಾಯಿತು. ಪುತ್ತೂರಿನಲ್ಲಿ ಮಾತೃಭೂಮಿ ಸಂರಕ್ಷಣಾ ವೇದಿಕೆಯ ನೇತೃತ್ವದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ, ಬಿಜೆಪಿಯ ಸಹಯೋಗದಲ್ಲಿ ಗಾಂಧಿ ಕಟ್ಟೆಯ ಬಳಿ ಶ್ರದ್ದಾಂಜಲಿ ಹಾಗೂ ಪ್ರತಿಭಟನಾ ಸಭೆ ಆಯೋಜಿಸಲಾಗಿತ್ತು. ಧಾರವಾಡದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಕಾರ್ಗಿಲ್‌ ಸ್ಥೂಪದಲ್ಲಿ ಮೌನಾಚರಣೆಯೊಂದಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ಎಬಿವಿಪಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಹುಬ್ಬಳ್ಳಿಯಲ್ಲಿ ಎಬಿವಿಪಿಯಿಂದ ಬಿವಿಬಿ ಕಾಲೇಜಿನ ಬಳಿ ಪ್ರತಿಭಟನೆ ನಡೆಸಲಾಯಿತು. ಮಾನವ ಸರಪಳಿ ನಿರ್ಮಿಸಿ ಭಯೋತ್ಪಾದಕರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಹಾವೇರಿ, ಹುಬ್ಬಳ್ಳಿಯಲ್ಲಿ ಬಿಜೆಪಿಯಿಂದ ಹಾಗೂ ಕಾಂಗ್ರೆಸ್‌ನಿಂದ ಕೃತ್ಯ ಖಂಡಿಸಿ ಪ್ರತ್ಯೇಕವಾಗಿ ಮೇಣದ ಬತ್ತಿ ಪ್ರತಿಭಟನೆ ನಡೆಯಿತು. ಕೊಪ್ಪಳದಲ್ಲಿ ಬಸವೇಶ್ವರ ದೇವಸ್ಥಾನದಿಂದ ಅಶೋಕ ವೃತ್ತದವರೆಗೆ ಮೇಣದ ಬತ್ತಿ ಮೆರವಣಿಗೆ ನಡೆಸಲಾಯಿತು. ಗಂಗಾವತಿಯಲ್ಲಿ ಕರವೇ ವತಿಯಿಂದ ಪ್ರತಿಭಟನೆ ನಡೆಸಿ, ಕೃತ್ಯವನ್ನು ಖಂಡಿಸಲಾಯಿತು.

ಬಾಗಲಕೋಟೆ ಬಸವೇಶ್ವರ ವೃತ್ತದಲ್ಲಿ ಬಿಜೆಪಿಯ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ನೇತೃತ್ವದಲ್ಲಿ ಮೇಣದ ದೀಪ ಬೆಳಗುವ ಮೂಲಕ ಮೃತರಿಗೆ ಶೃದ್ಧಾಂಜಲಿ ಸಲ್ಲಿಸಲಾಯಿತು. ಪಹಲ್ಗಾಂ ಉಗ್ರರ ದಾಳಿ ಖಂಡಿಸಿ ಮಡಿಕೇರಿಯಲ್ಲಿ ಹಿಂದೂಪರ ಸಂಘಟನೆಗಳಿಂದ ಬುಧವಾರ ರಾತ್ರಿ ಪಂಜು ಹಿಡಿದು ಪ್ರತಿಭಟನೆ ನಡೆಸಲಾಯಿತು. ಜನರಲ್ ತಿಮ್ಮಯ್ಯ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಯೋತ್ಪಾದಕರ ವಿರುದ್ಧ ಘೋಷಣೆ ಕೂಗಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.ಇದೇ ವೇಳೆ, ಶಿವಮೊಗ್ಗ, ಕಲಬುರಗಿ, ರಾಯಚೂರು, ಮಂಗಳೂರು, ರಾಮನಗರ, ಶಿರಸಿ ಸೇರಿ ರಾಜ್ಯದ ಇತರೆಡೆಯೂ ಪ್ರತಿಭಟನೆಗಳು ನಡೆದವು.