ದೊಡ್ಡಬಳ್ಳಾಪುರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 100 ಅಂಕಗಳ ಹಿಂದಿ ಭಾಷಾ ಪರೀಕ್ಷೆಯನ್ನು ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಮಾ.11ರಂದು ಬುಧವಾರ ಬೆಳಗ್ಗೆ 11 ಗಂಟೆಗೆ ನಗರದ ತಾಲೂಕು ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಕನ್ನಡಪರ ಸಂಘಟನೆಗಳು ತಿಳಿಸಿವೆ

ದೊಡ್ಡಬಳ್ಳಾಪುರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 100 ಅಂಕಗಳ ಹಿಂದಿ ಭಾಷಾ ಪರೀಕ್ಷೆಯನ್ನು ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಮಾ.11ರಂದು ಬುಧವಾರ ಬೆಳಗ್ಗೆ 11 ಗಂಟೆಗೆ ನಗರದ ತಾಲೂಕು ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಕನ್ನಡಪರ ಸಂಘಟನೆಗಳು ತಿಳಿಸಿವೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 100 ಅಂಕಗಳ ಹಿಂದಿ ಭಾಷಾ ಪರೀಕ್ಷೆಯನ್ನು ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಹಿಂದಿ ಹೇರಿಕೆ ವಿರೋಧಿ ಕರ್ನಾಟಕ ಒಕ್ಕೂಟ ಕರೆ ಕೊಟ್ಡಿರುವ ಪ್ರತಿಭಟನೆಯ ಬಗ್ಗೆ ನಗರದ ಕನ್ನಡ ಜಾಗೃತ ಭವನದಲ್ಲಿ ಕನ್ನಡಪರ ಸಂಘಟನೆಗಳ ಮುಖಂಡರು ಸಭೆ ನಡೆಸಿದರು.

ರಾಜ್ಯ ಶಿಕ್ಷಣ ಪರೀಕ್ಷಾ ಪದ್ಧತಿಯೊಳಗೆ ಹಿಂದಿ ಭಾಷೆಯ ಕಲಿಕೆಯನ್ನು ಬಲವಂತವಾಗಿ ಹೇರುತ್ತಾ ಬರಲಾಗುತ್ತಿದ್ದು, ಇದೀಗ ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿ-ಯುವಜನರ ಶೈಕ್ಷಣಿಕ ಮುನ್ನಡೆಗೆ ತೊಡಕಾಗುವ ಹಂತ ತಲುಪಿದೆ. 2025ನೇ ಸಾಲಿನ ಶೈಕ್ಷಣಿಕ ವರ್ಷದ ಪರೀಕ್ಷೆಯಲ್ಲಿ 1.42 ಲಕ್ಷ ವಿದ್ಯಾರ್ಥಿಗಳನ್ನು ಹಿಂದಿ ಭಾಷಾ ಪರೀಕ್ಷೆಯಲ್ಲಿ ಅನುತ್ತೀರ್ಣಗೊಳಿಸುವ ಮೂಲಕ ರಾಜ್ಯ ಸರಕಾರ, ಕನ್ನಡಿಗರ ಮೇಲೆ ಹಿಂದಿ ಭಾಷೆ ಹೇರುವ ಕೇಂದ್ರದ ಒಕ್ಕೂಟ ಸರಕಾರದ ಭಾಷಾ ದೌರ್ಜನ್ಯ ನೀತಿಗೆ ಕೈಜೋಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಯಾವುದೇ ಹಂತದ ಶಿಕ್ಷಣ ಪಠ್ಯಕ್ರಮದಲ್ಲೂ ಕೂಡ ಹಿಂದಿ ಭಾಷೆಯು ರಾಷ್ಟ್ರ ಭಾಷೆ'''''''' ಎಂದು ಬಿಂಬಿಸುವ ಕಲ್ಪಿತ ವಿಷಯವನ್ನು ತೆಗೆದು ಹಾಕಬೇಕು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಇಲ್ಲದೆಯೂ ಉತ್ತೀರ್ಣ (ಪಾಸ್ ವಿತೌಟ್ ಹಿಂದಿ) ಎಂಬ ನಿಯಮವನ್ನು ಪ್ರಕಟಿಸದಿದ್ದರೆ, ಕನ್ನಡಪರ ಸಂಘಟನೆಗಳು, ದಲಿತ, ರೈತ, ವಿದ್ಯಾರ್ಥಿ ಸಂಘಟನೆಗಳು ಮಾ.30ರಂದು ಹಿಂದಿ ಭಾಷಾ ಪರೀಕ್ಷೆಯ ನಡೆಯುವ ಪರೀಕ್ಷಾ ಕೇಂದ್ರಗಳಿಗೆ ಕನ್ನಡ ಕಾರ್ಯಕರ್ತರು ನುಗ್ಗಲಿದ್ದಾರೆ ಎಂದು ಹೋರಾಟಗಾರರು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ನಗರಸಭೆ ಮಾಜಿ ಅಧ್ಯಕ್ಷ ತ.ನ.ಪ್ರಭುದೇವ್, ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ ನಾಯಕ, ಜಿಲ್ಲಾಧ್ಯಕ್ಷ ಮುನಿಪಾಪಯ್ಯ, ತಾ. ಅಧ್ಯಕ್ಷ ವೆಂಕಟೇಶ್, ಪರಮೇಶ್ ವೆಂಕಟಪ್ಪ, ಕನ್ನಡ ಜಾಗೃತ ಪರಿಷತ್ ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕರವೇ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ, ತಾ.ಅಧ್ಯಕ್ಷ ಹಮಾಮ್ ಎಸ್.ವೆಂಕಟೇಶ್, ಶಿವಕುಮಾರ್, ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘದ ತಾ.ಅಧ್ಯಕ್ಷ ರಮೇಶ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ರಾಜುಸಣ್ಣಕ್ಕಿ ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

8ಕೆಡಿಬಿಪಿ5- ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಿಂದಿ ಕಡ್ಡಾಯ ವಿರೋಧಿಸಿ ದೊಡ್ಡಬಳ್ಳಾಪುರದಲ್ಲಿ ಕನ್ನಡ ಸಂಘಟನೆಗಳ ಮುಖಂಡರು ಸಭೆ ನಡೆಸಿದರು.