ಸಾರಾಂಶ
ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಬಾಧಿತ ರೈತರ ಜಮೀನಿಗೆ ಹಾಗೂ ಅವರಿಗೆ ದೊರಬೇಕಾಗಿರುವ ಎಲ್ಲ ಸೌಲಭ್ಯಗಳನ್ನು ಶೀಘ್ರವೇ ದೊರಕಿಸಿಕೊಡುವಂತೆ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ. ನವನಗರದಲ್ಲಿರುವ ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ, ಮತ್ತು ಭೂಸ್ವಾಧೀನ ಕಚೇರಿಗೆ ಭೇಟಿ ನೀಡಿದ ಅವರು, ರೈತರಿಗೆ ಎಲ್ಲ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿ ರಮೇಶ ಕಳಸದ ಅವರಿಗೆ ಸೂಚಿಸಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಬಾಧಿತ ರೈತರ ಜಮೀನಿಗೆ ಹಾಗೂ ಅವರಿಗೆ ದೊರಬೇಕಾಗಿರುವ ಎಲ್ಲ ಸೌಲಭ್ಯಗಳನ್ನು ಶೀಘ್ರವೇ ದೊರಕಿಸಿಕೊಡುವಂತೆ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.ನವನಗರದಲ್ಲಿರುವ ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ, ಮತ್ತು ಭೂಸ್ವಾಧೀನ ಕಚೇರಿಗೆ ಭೇಟಿ ನೀಡಿದ ಅವರು, ರೈತರಿಗೆ ಎಲ್ಲ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿ ರಮೇಶ ಕಳಸದ ಅವರಿಗೆ ಸೂಚಿಸಿದರು.
ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಬಾಧಿತ ರೈತರ ಕಷ್ಟ ಕಾರ್ಪಣ್ಯಗಳನ್ನು ರಾಜ್ಯ ಸರ್ಕಾರ ಅರಿತುಕೊಳ್ಳಬೇಕು. ಈ ನಿಟ್ಟಿನಲ್ಲಿ ಯೋಜನೆಗೆ ಬೇಕಾಗಿರುವ ಹಣವನ್ನು ಶೀಘ್ರವೇ ಬಿಡುಗಡೆಗೊಳಿಸುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ ಕಚೇರಿಯ ಸಿಬ್ಬಂದಿ ಕೊರತೆ ನೀಗಿಸಬೇಕು, ಕಚೇರಿಗೆ ಬೇಕಾಗಿರುವ ಎಸ್.ಎಲ್.ಒ ಗಳನ್ನು, ಸಂಬಂಧ ಪಟ್ಟ ಸಿಬ್ಬಂದಿಯನ್ನು ಶೀಘ್ರವೇ ಒದಗಿಸಿಬೇಕೆಂದು ಕೂಡ ಒತ್ತಾಯಿಸಿದರು.ಮೂರನೇ ಹಂತದ ಕಾಮಗಾರಿಗೆ ₹ 51 ಸಾವಿರ ಕೋಟಿ ಅನುದಾನ ಅವಶ್ಯಕತೆಯಿದೆ ಎಂದು ಅಧಿಕಾರಿಗಳು ಸರ್ಕಾರಕ್ಕೆ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಗೊಂಡು ರೈತರ ಕಷ್ಟಕ್ಕೆ ಸ್ಪಂದಿಸಬೇಕಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಮಾತನಾಡಿ, ಅನೇಕ ಗ್ರಾಮಗಳಲ್ಲಿ ರೈತರ ಪರಿಸ್ಥಿತಿ ಹದಗೆಟ್ಟು ಹೋಗಿದೆ. ಅನೇಕರಿಗೆ ಇನ್ನೂ ಪರಿಹಾರದ ಹಣ ಪಾವತಿಯಾಗಿಲ್ಲ ಎಂದು ಹೇಳಿದ ಅವರು, ಸರ್ಕಾರದ ನಿರ್ಲಕ್ಷ್ಯವೇ ಇದಕ್ಕೆ ಸಾಕ್ಷಿ ಎಂದು ದೂರಿದರು.