ಆ. 15ರೊಳಗಾಗಿ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ರುದ್ರಭೂಮಿ ಒದಗಿಸಿ-ಸಚಿವ ಎಚ್‌.ಕೆ. ಪಾಟೀಲ

| Published : May 07 2025, 12:47 AM IST

ಆ. 15ರೊಳಗಾಗಿ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ರುದ್ರಭೂಮಿ ಒದಗಿಸಿ-ಸಚಿವ ಎಚ್‌.ಕೆ. ಪಾಟೀಲ
Share this Article
  • FB
  • TW
  • Linkdin
  • Email

ಸಾರಾಂಶ

ಆ. 15ರೊಳಗಾಗಿ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಸ್ಮಶಾನ ಹಾಗೂ ಖರಬಸ್ತಾನ ರುದ್ರಭೂಮಿಯನ್ನು ಒದಗಿಸುವತ್ತ ಎಲ್ಲಾ ಅಧಿಕಾರಿಗಳು ಗಮನ ಹರಿಸಬೇಕು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಗದಗ: ಆ. 15ರೊಳಗಾಗಿ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಸ್ಮಶಾನ ಹಾಗೂ ಖರಬಸ್ತಾನ ರುದ್ರಭೂಮಿಯನ್ನು ಒದಗಿಸುವತ್ತ ಎಲ್ಲಾ ಅಧಿಕಾರಿಗಳು ಗಮನ ಹರಿಸಬೇಕು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಅವರು ಮಂಗಳವಾರ ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಕೆಡಿಸಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಸ್ಮಶಾನಗಳಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಿ, ಭೂಮಿ ಖರೀದಿ ಮಾಡಬೇಕಾಗಿದ್ದರೂ ಅದನ್ನು ಸಾಧ್ಯವಾದಷ್ಟು ಬೇಗನೇ ಪೂರ್ಣಗೊಳಿಸಿ ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸರಬರಾಜು ಕುರಿತು ಜೂನ್ 20ರೊಳಗೆ ಥರ್ಡ್‌ ಪಾರ್ಟಿಯಿಂದ ವರದಿ ಪಡೆದು ಸಲ್ಲಿಸಬೇಕು. ಏಜೆನ್ಸಿ ಒಪ್ಪಂದ ಪ್ರಕಾರ ನೀಡಬೇಕಾಗಿದ್ದ ಎಂಎಲ್ ಡಿ ನೀರು ನೀಡದೇ ಇದ್ದ ಕಾರಣ ಸಮೀಕ್ಷೆ ನಡೆಸಿ ಒಪ್ಪಂದ ಪ್ರಕಾರ ನೀರು ಪೂರೈಕೆ ಮಾಡದಿದ್ದಲ್ಲಿ ಏಜೆನ್ಸಿಗೆ ದಂಡ ವಿಧಿಸಬೇಕು. ಬೇಸಿಗೆಯಲ್ಲಿ ಜಿಲ್ಲೆಯ ಜನರಿಗೆ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು. ನರಗುಂದ ಶಾಸಕ ಸಿ.ಸಿ. ಪಾಟೀಲ ಮಾತನಾಡಿ, ನರಗುಂದ ಕ್ಷೇತ್ರದಲ್ಲಿರುವ ತಾಂಡಾಗಳಿಗೆ ವಸತಿ ಶಾಲೆ ಪ್ರಾರಂಭಿಸಲು ಸಲ್ಲಿಸಲು ತಿಳಿಸಲಾಗಿತ್ತು ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಈಗಾಗಲೇ ಪ್ರಸ್ತಾವನೆಗಳನ್ನು ಸಲ್ಲಿಸಿದೆ ಎಂದರು. ಸಚಿವ ಎಚ್.ಕೆ. ಪಾಟೀಲ ಮಾತನಾಡಿ, ಪ್ರಸ್ತಾವನೆಗಳನ್ನು ಸಲ್ಲಿಸಿದ ಕೂಡಲೇ ಒಂದು ಪ್ರತಿಯನ್ನು ಸಂಬಂಧಪಟ್ಟ ಶಾಸಕರಿಗೆ ಕಳುಹಿಸಬೇಕು ಎಂದು ಅಧಿಕಾರಿಗೆ ನಿರ್ದೇಶಿಸಿದರು. ವಿಪ ಶಾಸಕ ಎಸ್.ವಿ. ಸಂಕನೂರ ಮಾತನಾಡಿ, ಈ ಹಿಂದೆ ಪಿಯುಸಿಯಲ್ಲಿ ಜಿಲ್ಲೆಯು ಕೊನೆಯ ಸ್ಥಾನ ಪಡೆದಿತ್ತು. ಈ ಬಾರಿ 25ನೇ ಸ್ಥಾನಕ್ಕೇರಿದ್ದು ಅಭಿನಂದನೀಯ, ನಾವು ಅದು ಕೊಂಡ ನಿರೀಕ್ಷೆಗೆ ತಕ್ಕಂತೆ ಫಲಿತಾಂಶ ಬಂದಿಲ್ಲ ಇದಕ್ಕೆ ಅಧಿಕಾರಿಗಳು ಇನ್ನು ಹೆಚ್ಚಿನ ಆಸಕ್ತಿಯಿಂದ ಕಾರ್ಯ ನಿರ್ವಹಿಸಬೇಕು ಎಂದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಎಚ್.ಕೆ. ಪಾಟೀಲ ಮಾತನಾಡಿ, ಎಲ್ಲಾ ಕಾಲೇಜು ಪ್ರಾಚಾರ್ಯರ ಸಭೆ ಕರೆದು ಶೈಕ್ಷಣಿಕ ವರ್ಷದ ಪ್ರಾರಂಭದಿಂದಲೇ ಕಾಲೇಜು ವಾರು ಗುರಿ ನಿಗದಿ ಮಾಡಿ ಕಾರ್ಯಗಾರ ಮಾಡಬೇಕು ಎಂದು ಸಿಇಓ ಅವರಿಗೆ ಸೂಚನೆ ನೀಡಿದರು. ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಮಾತನಾಡಿ, ನರೇಗಾ ಕಾಮಗಾರಿಯಲ್ಲಿ ಸರ್ಕಾರಿ ಶಾಲಾ ಕಾಲೇಜುಗಳ ಮೂಲಭೂತ ಅಭಿವೃದ್ಧಿಗೆ ಪೂರಕವಾದ ಕಾಮಗಾರಿಗೆ ಸೇರಿದಂತೆ ರೈತರ ಬದು ನಿರ್ಮಾಣ ಕಾಮಗಾರಿಗಳಿಗೆ ಅನುಮತಿ ಮಾಡಿಕೊಡಬೇಕು ಎಂದು ಸೂಚಿಸಿದರು. ಶಾಸಕ ಚಂದ್ರು ಲಮಾಣಿ ಮಾತನಾಡಿ, ಲಕ್ಷ್ಮೇಶ್ವರ ತಾಲೂಕಿಗೆ ತುಂಗಭದ್ರ ನದಿ ನೀರನ್ನು ಪೂರೈಸುವ ಪೈಪು ಪದೇ ಪದೇ ದುರಸ್ತಿ ಆಗುತ್ತಿದ್ದು, ಅದಕ್ಕೆ ಅಧಿಕಾರಿ ಶಾಶ್ವತ ಪರಿಹಾರ ಒದಗಿಸಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು ಸೂರಣಗಿಯಿಂದ ಲಕ್ಷ್ಮೇಶ್ವರ ವರೆಗಿನ ಪೈಪ್ ದುರಸ್ತಿ ಕಾರ್ಯ ಈಗಾಗಲೆ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಿದ್ದು, ಶೀಘ್ರವೇ ಕಾಮಗಾರಿ ಪ್ರಾರಂಭವಾಗಲಿದೆ ಎಂದು ತಿಳಿಸಿದರು.