ಕನ್ನಡಪ್ರಭ ವಾರ್ತೆ ಬೀದರ್

ರಾಜ್ಯದ ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಬರಪೀಡಿತ ರೈತರ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರ ತೀವ್ರ ನಿರ್ಲಕ್ಷ್ಯ ತೋರುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಬೀದರ್‌ನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪಕ್ಷದ ಕೋರ ಕಮಿಟಿ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೇವಲ ಶೇ.12ರಷ್ಟು ಮಳೆಯಾಗಿದ್ದು, ಪರಿಸ್ಥಿತಿ ತೀರಾ ಹದಗೆಟ್ಟಿದೆ. ಆದ್ದರಿಂದ ಕೃಷಿ ವಲಯಕ್ಕೆ ತಕ್ಷಣವೇ ಆರ್ಥಿಕ ನೆರವು ನೀಡಬೇಕೆಂದು ಆಗ್ರಹಿಸಿದರು.

ಮಳೆ ಕೈಕೊಟ್ಟ ಕಾರಣ ಈ ಭಾಗದಲ್ಲಿ 30 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬಿತ್ತನೆಯೇ ಆಗದೆ ರೈತರು ಪರದಾಡುತ್ತಿದ್ದಾರೆ. ತೊಗರಿ, ಸೂರ್ಯಕಾಂತಿ ಮತ್ತು ಹತ್ತಿಯಂತಹ ಪ್ರಮುಖ ಬೆಳೆಗಳನ್ನು ಬಿತ್ತನೆ ಮಾಡಲು ಸಾಧ್ಯವಾಗದೆ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ ಎಂದರು.

ಮುಂದಿನ ನಾಲ್ಕು ದಿನಗಳ ಕಾಲ ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್‌ಐಆರ್ ಹಾಗೂ ಪಕ್ಷ ಸಂಘಟನೆ ವಿಚಾರವಾಗಿ ಈ ಪ್ರವಾಸ ಹಮ್ಮಿಕೊಂಡಿದ್ದೇವೆ ಎಂದ ಅವರು, ಬೀದರ್ ಜಿಲ್ಲೆಯ ಆಂತರಿಕ ಕಚ್ಚಾಟ ಹಾಗೂ ಒಳ ಒಪ್ಪಂದ ಸೇರಿದಂತೆ ಎಲ್ಲಾ ವಿಚಾರಗಳ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದರು.


ಹಿಂದೆ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರವು ನೂತನ ಅನುಭವ ಮಂಟಪಕ್ಕೆ ₹100 ಕೋಟಿ ಹಾಗೂ ₹200 ಕೋಟಿ ರು. ಗಳನ್ನು ಹಂತ-ಹಂತವಾಗಿ ಬಿಡುಗಡೆ ಮಾಡಿ, ಸುಮಾರು 500 ಕೋಟಿ ರು. ವೆಚ್ಚದ ಯೋಜನೆ ಆರಂಭಿಸಿತ್ತು. ಆದರೆ, ಕಳೆದ ಮೂರು ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರವು ಜನರ ಒತ್ತಾಯದ ನಡುವೆಯೂ ಈ ಯೋಜನೆಯ ಬಗ್ಗೆ ತಲೆಕೆಡಿಸಿಕೊಳ್ಳದೆ ನಿರ್ಲಕ್ಷಿಸಿದೆ ಎಂದು ಆರೋಪಿಸಿದ ವಿಜಯೇಂದ್ರ ಮುಖ್ಯಮಂತ್ರಿಗಳು ಕೂಡಲೇ ಬಾಕಿ ಹಣವನ್ನು ಬಿಡುಗಡೆ ಮಾಡಿ, ಇದರ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಪಕ್ಷದ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ, ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ, ಡಾ.ಸಿದ್ದು ಪಾಟೀಲ, ಶರಣು ಸಲಗರ, ಬಸವರಾಜ ಮತ್ತಿಮೂಡ, ಮಾಜಿ ಸಂಸದ ಭಗವಂತ ಖೂಬಾ, ಮುಖಂಡರಾದ ಪೀರಪ್ಪಾ ಔರಾದೆ, ಈಶ್ವರಸಿಂಗ ಠಾಕೂರ, ಶರಣಪ್ಪಾ ತಳವಾರ, ಬಸವರಾಜ ಆರ್ಯ, ಗುರುನಾಥ ರಾಜಗೀರಾ, ಸಂಗಮೇಶ ನಾಶಿಗಾರ ಇದ್ದರು.

ಸಿಎಂರಿಂದ ಫೋಟೋ ಶೂಟ್

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಇತ್ತೀಚಿನ ಬಸವಕಲ್ಯಾಣ ಭೇಟಿಯನ್ನು ಕೇವಲ ‘ಫೋಟೋ ಶೂಟ್’ ಎಂದು ಟೀಕಿಸಿದ ವಿಜಯೇಂದ್ರ, ಸರ್ಕಾರದಿಂದ ತಳಮಟ್ಟದಲ್ಲಿ ಯಾವುದೇ ವಾಸ್ತವಿಕ ಪರಿಹಾರ ಸಿಕ್ಕಿಲ್ಲ ಎಂದು ದೂರಿದರು. ತೀವ್ರ ಸಂಕಷ್ಟದಲ್ಲಿರುವ ರೈತರ ಕೈಹಿಡಿಯಲು ರಾಜ್ಯ ಸರ್ಕಾರ ಕೂಡಲೇ ಪ್ರತಿ ಎಕರೆಗೆ ಕನಿಷ್ಠ 50 ಸಾವಿರ ರು. ಪರಿಹಾರ ಬಿಡುಗಡೆ ಮಾಡಬೇಕೆಂದು ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.

ಅಧಿಕಾರಿಗಳ ಮೇಲೆ ಒತ್ತಡ

ಈ ಹಿಂದೆ ಎಸ್‌ಐಆರ್‌ಗೆ ಕಾಂಗ್ರೆಸ್ ಪಕ್ಷ ವಿರೋಧ ಮಾಡಿತ್ತು, ಈಗ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು. ಅಕ್ರಮ ವಲಸಿಗರಿಗೆ ಶಾಶ್ವತ ನಿವಾಸ ಪ್ರಮಾಣ ಪತ್ರ ನೀಡುವ ಪ್ರಯತ್ನಕ್ಕೆ ಬಿಜೆಪಿ ತೀವ್ರ ವಿರೋಧ ಮಾಡಿದೆ. ರಾಜ್ಯ ಸರ್ಕಾರದ ಈ ಕ್ರಮ ದೇಶದ್ರೋಹದ ಕೆಲಸ ಎಂದು ವಾಗ್ದಾಳಿ ನಡೆಸಿದ ಅವರು, ಎಸ್‌ಐಆರ್ ಪ್ರಕ್ರಿಯೆಯನ್ನು ಬಿಜೆಪಿ ನಾಯಕರು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಭೀಕರ ಬರದ ನಡುವೆಯೂ‌ ಪುಲ್ ಕ್ಯಾಬಿನೆಟ್ ಇಲ್ಲ. ಕಾಂಗ್ರೆಸ್ ಶಾಸಕರು ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲೇ ಬೀಡು ಬಿಟ್ಟಿದ್ದಾರೆ ಎಂದರು.