ಶಿರಹಟ್ಟಿ: ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದರಿಂದ ತಾಲೂಕು ಬರಪೀಡಿತವಾಗಿದೆ. ಕೆಲಸ ಅರಸಿ ಗ್ರಾಮೀಣ ಪ್ರದೇಶದಿಂದ ಜನ ನಿತ್ಯ ನಗರ ಪ್ರದೇಶಗಳತ್ತ ಗುಳೆ ಹೋಗುತ್ತಿದ್ದಾರೆ. ಅಧಿಕಾರಿಗಳು ಇದನ್ನು ಗಮನಿಸುತ್ತಿಲ್ಲ. ಜವಾಬ್ದಾರಿ ಅರಿತು ದುಡಿಯುವ ವರ್ಗಕ್ಕೆ ಸಮಸ್ಯೆ ಎದುರಾಗದಂತೆ ಒಂದು ವಾರದೊಳಗೆ ವಿಬಿ ಜಿ ರಾಮ್‌ ಜಿ ಯೋಜನೆಯಡಿ ತುರ್ತು ಕೆಲಸ ನೀಡಬೇಕು ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಸೂಚಿಸಿದರು.ಸೋಮವಾರ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಜರುಗಿದ ವಿಪತ್ತು ನಿರ್ವಹಣೆಯ ಟಾಸ್ಕ್‌ಫೋರ್ಸ್‌ ಕಮಿಟಿ ಸಭೆಯ ಅಧ್ಯಕ್ಷತೆ ವಹಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಬರಪೀಡಿತ ಪ್ರದೇಶಗಳ ಜನರು ಉದ್ಯೋಗಕ್ಕಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗದಂತೆ ಪಂಚಾಯಿತಿ ಮಟ್ಟದಲ್ಲಿ ಬೇಡಿಕೆಗಳನ್ನು ಸ್ವೀಕರಿಸಿ, ವಿಳಂಬವಿಲ್ಲದೆ ಕೆಲಸ ಆರಂಭಿಸಬೇಕು. ಉದ್ಯೋಗ ಕೇಳಿದ ಪ್ರತಿಯೊಬ್ಬ ಅರ್ಹ ಕೂಲಿ ಕಾರ್ಮಿಕನಿಗೂ ಕಾನೂನುಬದ್ಧವಾಗಿ ಕೆಲಸ ಒದಗಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದರು.

ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಉದ್ಯೋಗ ಸೇರಿದಂತೆ ಬರ ಪರಿಹಾರದ ಎಲ್ಲ ಕ್ರಮಗಳನ್ನು ಸಮನ್ವಯದಿಂದ ಜಾರಿಗೊಳಿಸಬೇಕು. ಗ್ರಾಮಗಳಿಗೆ ಭೇಟಿ ನೀಡಿ ಸ್ಥಳೀಯ ಸಮಸ್ಯೆಗಳನ್ನು ಪರಿಶೀಲಿಸಿ, ಜನರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಬೇಕು. ಯಾವುದೇ ನಿರ್ಲಕ್ಷ್ಯ ಅಥವಾ ವಿಳಂಬ ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.ಜವಾಬ್ದಾರಿಯಿಂದ ಕೆಲಸ ಮಾಡಬೇಕು: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮೀಣ ಪ್ರದೇಶದಲ್ಲಿ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಪಂಚಾಯಿತಿವಾರು ಕೆಲಸ ಕೈಗೊಂಡ ಬಗ್ಗೆ ಒಂದು ವಾರದೊಳಗೆ ಸಮಗ್ರ ಮಾಹಿತಿ ನೀಡಬೇಕು. ಯಾವುದೇ ಸಬೂಬು ಹೇಳಿ ಜಾರಿಕೊಳ್ಳುವ ಅಧಿಕಾರಿಗಳ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಜತೆಗೆ ನಿಮ್ಮ ನಿಮ್ಮ ಕೆಲಸ ಕಾರ್ಯ ಗಮನಿಸಿ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದರೆ ಅಂತಹ ಪಿಡಿಒಗಳ ವಿರುದ್ಧ ಸಚಿವರಿಗೆ ದೂರು ನೀಡಿ ನಿಮ್ಮ ಮೇಲೆ ಕ್ರಮ ಜರುಗಿಸಲು ವರದಿ ನೀಡುವುದಾಗಿ ಎಚ್ಚರಿಸಿದರು.ತಹಸೀಲ್ದಾರ್ ಕೆ. ರಾಘವೇಂದ್ರ ರಾವ್, ತಾಪಂ ಇಒ ರಾಮಪ್ಪ ದೊಡ್ಡಮನಿ, ಕೃಷಿ ಇಲಾಖೆಯ ಶಿವಕುಮಾರ ಕಾಶಪ್ಪನವರ, ಮಲ್ಲಿಕಾರ್ಜುನ ಪಾಟೀಲ, ಕಂದಾಯ ನಿರೀಕ್ಷಕ ಬಸವರಾಜ ಕಾತ್ರಾಳ ಹಾಗೂ ಪಿಡಿಒಗಳು ಇದ್ದರು.