ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ವಿಜಯಪುರ ನಗರದ ಅಲ್ ಅಮೀನ್ ಮೆಡಿಕಲ್ ಕಾಲೇಜ್ ಹಿಂಭಾಗದ ನಮೋ ನಗರ ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿರುವ ಜಿ+೧ ಮಾದರಿಯ ೧,೪೯೩ ಗುಂಪು ಮನೆಗಳ ಪೈಕಿ, ಈಗಾಗಲೇ ನಿರ್ಮಾಣಗೊಂಡ ೩೦೦ ಫಲಾನುಭವಿಗಳಿಗೆ ಅಂತಿಮ ಹಕ್ಕುಪತ್ರ ನೀಡಲಾಗಿದೆ. ಫಲಾನುಭವಿಗಳ ಅನುಕೂಲಕ್ಕಾಗಿ ಅಗತ್ಯ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಸಮರ್ಪಕ ವಿದ್ಯುತ್ ಸಂಪರ್ಕ ವ್ಯವಸ್ಥೆ ಕಲ್ಪಿಸುವುದು, ಬೀದಿ ದೀಪ ಹಾಗೂ ಒಳಚರಂಡಿ ವ್ಯವಸ್ಥೆಯನ್ನು ತ್ವರಿತವಾಗಿ ಒದಗಿಸಲು ಕ್ರಮಕೈಗೊಳ್ಳಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿ ಆವಾಸ ಯೋಜನೆಯಡಿ ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಿಎಂಎವೈ ಯೋಜನೆಯಡಿ ಮನೆಗಳ ಹಂಚಿಕೆ ಮತ್ತು ಮೂಲಭೂತ ಸೌಲಭ್ಯಗಳ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ೪೩೯ ಫಲಾನುಭವಿಗಳಿಗೆ ತಾತ್ಕಾಲಿಕ ಹಕ್ಕುಪತ್ರ ನೀಡಲಾಗಿದ್ದು, ಈ ಯೋಜನೆಯಡಿ ನಿರ್ಮಾಣ ಕಾಮಗಾರಿ ಹಾಗೂ ಮೂಲಭೂತ ಸೌಕರ್ಯ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು.
ನಮೋ ನಗರ ಪ್ರದೇಶಕ್ಕೆ ಶುದ್ದ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲು ಆರ್.ಒ ಘಟಕ ಸ್ಥಾಪಿಸಲು ಕ್ರಮಕೈಗೊಳ್ಳುವಂತೆ ಆಯುಕ್ತರು ಮಹಾನಗರ ಪಾಲಿಕೆ ಹಾಗೂ ಕನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಅಧಿಕಾರಿಗಳಿಗೆ ತಿಳಿಸಿದರು.ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಮಾತನಾಡಿ, ಯೋಗಾಪೂರ, ಗಾಂಧಿ ನಗರ, ಬಸವ ನಗರ ಹಾಗೂ ಹಮಾಲ ಕಾಲೋನಿಯ ಆಶ್ರಯ ಬಡಾವಣೆಯಲ್ಲಿ ಹಕ್ಕು ಪತ್ರ ಇರದೇ ಹಲವಾರು ವರ್ಷಗಳಿಂದ ವಾಸಿಸುತ್ತಿರುವವರಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು. ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಗುನ್ನಾಪೂರ ರಸ್ತೆಯ ಗಾಂಧಿ ನಗರದಲ್ಲಿ ನಿರ್ಮಿಸಲಾದ ಜಿ+೧ ಗುಂಪು ಮನೆಗಳನ್ನು ಫಲಾನುಭವಿಗಳಿಗೆ ಅಂತಿಮ ಹಕ್ಕು ಪತ್ರದಂತೆ ಹಂಚಿಕೆ ಮಾಡಿದ್ದು, ಈ ಕೂಡಲೇ ಸ್ಥಳ ಪರಿಶೀಲನೆ ಮಾಡಿ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಹೇಳಿದರು.
ಈ ವೇಳೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ, ನಗರದಲ್ಲಿ ನಿರ್ಮಿಸಲಾಗಿರುವ ವಿವಿಧ ವಸತಿ ಗೃಹಗಳಲ್ಲಿ ಈವರೆಗೆ ವಸತಿ ಗೃಹಗಳ ಹಕ್ಕು ಪತ್ರ ವಿತರಣೆ ಮಾಡಿದ ಸಮಗ್ರ ಮಾಹಿತಿ ಹಾಗೂ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ, ಇಇ ಗೋವಿಂದ, ಇಇ ಪ್ರಹ್ಲಾದ ಪಾಟೀಲ, ಅಧೀಕ್ಷಕ ಅಭಿಯಂತರ ತಿಮ್ಮಪ್ಪ, ಹೆಸ್ಕಾಂ ಸಹಾಯಕ ಕಾರ್ಯ ಪಾಲಕ ಅಭಿಯಂತರ ಚನಗೊಂಡ, ಪಾಲಿಕೆಯ ಎಇಇ ಕೋಟೆನ್ನವರ, ಕಾವ್ಯಶ್ರೀ ಇಂಗಳೇಶ್ವರ, ವೈ.ಎಮ್.ಹಳ್ಳಿ ಮುಂತಾದವರು ಉಪಸ್ಥಿತರಿದ್ದರು.ಬಾಕ್ಸ್
ಸಾಲ ಸೌಲಭ್ಯ ಒದಗಿಸಲು ಸೂಚನೆಈ ವಸತಿ ಗೃಹಗಳಲ್ಲಿ ವಾಸಿಸುವ ಕುಟುಂಬಗಳಿಗೆ ಅನುಕೂಲವಾಗುವಂತೆ ಅಂಗನವಾಡಿ ಕೇಂದ್ರ, ಮಾರುಕಟ್ಟೆ, ದಿನಸಿ ಅಂಗಡಿ, ಶುದ್ಧ ಕುಡಿಯುವ ನೀರಿನ ಘಟಕ, ಸಮರ್ಪಕ ವಿದ್ಯುತ್ ಸೌಲಭ್ಯ, ಒಳಚರಂಡಿ ಹಾಗೂ ಇತರೇ ಮೂಲಭೂತ ಸೌಕರ್ಯ ಒದಗಿಸಲು ಪ್ರಥಮ ಆದ್ಯತೆ ನೀಡಬೇಕು. ವಿಶೇಷಚೇತನ ಫಲಾನುಭವಿಗಳಿದ್ದಲ್ಲಿ ಅವರಿಗೆ ಕೆಳಮಹಡಿ ಮನೆ ದೊರೆಯುವ ನಿಟ್ಟಿನಲ್ಲಿ ಆದ್ಯತೆ ನೀಡಬೇಕು. ಈ ಆಶ್ರಯ ಮನೆಗಳಿಗೆ ಅರ್ಜಿ ಸಲ್ಲಿಸಿ, ವಂತಿಕೆ ಹಣ ಭರಿಸಲು ಸಾಧ್ಯವಾಗದೇ ಇರುವ ಫಲಾನುಭವಿಗಳಿಗೆ ವಿವಿಧ ರಾಷ್ಟ್ರೀಕೃತ ಬ್ಯಾಂಕಗಳಿಂದ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೂಚನೆ ನೀಡಿದರು.