ಹಾವೇರಿ: ಭಾರತ ಹಳ್ಳಿಗಳ ದೇಶ, ಗ್ರಾಮೀಣ ಭಾಗದ ಜನರು ಮುಗ್ಧರು, ತಂಬಾಕು ಸೇವನೆಯಿಂದ ಉಂಟಾಗುವ ಹಾನಿಗಳ ತಿಳುವಳಿಕೆ ಇಲ್ಲದೆ ವ್ಯಸನಕ್ಕೆ ಒಳಗಾಗುತ್ತಿದ್ದಾರೆ. ಹಾಗಾಗಿ ಸಾರ್ವಜನಿಕರಿಗೆ ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಎಂ.ಜಿ. ಶಿವಳ್ಳಿ ಹೇಳಿದರು.

ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ಆಸ್ಪತ್ರೆ, ಪೊಲೀಸ್ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ತಂಬಾಕು ಉತ್ಪನ್ನಗಳ ಸೇವನೆಯಿಂದ ಶ್ವಾಸಕೋಶ ಸಮಸ್ಯೆ ಹಾಗೂ ಕ್ಯಾನ್ಸರ್‌ನಂತರ ಗಂಭೀರ ಕಾಯಿಲೆಗೆ ಒಳಗಾಗುತ್ತಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿದ್ದರೂ ಸಹ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಮಾಡುತ್ತಿರುವುದು ವಿಷಾದಕರ ಸಂಗತಿಯಾಗಿದೆ. ಹಣದ ಸಂಪತ್ತಿಗಿಂತ ಆರೋಗ್ಯ ಭಾಗ್ಯ ದೊಡ್ಡದು. ತಂಬಾಕು ಉತ್ಪನ್ನಗಳ ಸೇವನೆ ತಡೆಗೆ ಆರೋಗ್ಯ ಇಲಾಖೆಯೊಂದಿಗೆ ಇತರೆ ಇಲಾಖೆಗಳು ಹಾಗೂ ಸಾರ್ವಜನಿಕರು ಕೈಜೋಡಿಸಬೇಕು ಎಂದು ಹೇಳಿದರು. ದೇಶದಲ್ಲಿ ಸುಮಾರು 27 ಕೋಟಿಗೂ ಅಧಿಕ ಜನ ತಂಬಾಕು ಬಳಕೆದಾರರಿದ್ದು, ಪ್ರತಿವರ್ಷ 13 ಲಕ್ಷಕ್ಕೂ ಹೆಚ್ಚು ಜನರು ತಂಬಾಕು ಸೇವನೆ ಸಂಬಧಿತ ಕಾಯಿಲೆಗಳಿಂದ ಮರಣಹೊಂದುತ್ತಿದ್ದಾರೆ. ವಿಪರ್ಯಾಸವೆಂದರೆ, ಶೇ.48ರಷ್ಟು ತಂಬಾಕು ಬಳಕೆದಾರರು ಗ್ರಾಮೀಣ ಪ್ರದೇಶದವರಾಗಿದ್ದು, ಕರ್ನಾಟಕದಲ್ಲಿ ಶೇ. 22.8ರಷ್ಟು (15 ವರ್ಷಕ್ಕಿಂತ ಮೇಲ್ಪಟ್ಟ) ವ್ಯಕ್ತಿಗಳು ಯಾವುದಾದರು ಒಂದು ರೀತಿಯ ತಂಬಾಕು ಉತ್ಪನ್ನಗಳನ್ನು ಸೇವನೆ ಮಾಡುತ್ತಾರೆ. ಪ್ರಸ್ತುತ ಶೇ.8.8ರಷ್ಟು ಧೂಮಪಾನಿಗಳಿದ್ದು ಹಾಗೂ ಶೇ.16.3 ಜಗಿಯುವ ತಂಬಾಕು ಸೇವನೆ ಮಾಡುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಶೇ.23.9ರಷ್ಟು ಜನ ಪರೋಕ್ಷ ಧೂಮಪಾನಕ್ಕೆ ಬಲಿಯಾಗುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು. ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಶೈಲಜಾ ಎಚ್.ವಿ., ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಸಿದ್ದನಗೌಡ ಎಚ್.ಸಿ., ಕಾರ್ಯದರ್ಶಿ ಪಿ.ಎಸ್. ಹೆಬ್ಬಾಳ, ಜಿಲ್ಲಾ ಶಸ್ತ್ರ ಚಿಕಿತ್ಸಕ ಮತ್ತು ವೈದ್ಯಕೀಯ ಅಧೀಕ್ಷಕ ಡಾ.ಪಿ.ಆರ್. ಹಾವನೂರ, ಜಿಲ್ಲಾ ಜಾರಿ ಅಧಿಕಾರಿ ಹಾಗೂ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ದೇವರಾಜ ಸಾರಥಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಭಾರತಿ ಎಚ್., ಡಾ.ನಿಲೇಶ, ಡಾ.ಪರಸಪ್ಪ ಚುರ್ಚಿಹಾಳ, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ ಹಾಗೂ ಜಿಲ್ಲಾ ಶೂಶ್ರುಷಕ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಸರಸ್ವತಿ ವೈ.ಎಚ್., ಡಾ. ಸಂತೋಷ ದಡ್ಡಿ, ದಾದಾಪೀರ ಇತರರು ಇದ್ದರು. ಗ್ರಾಮೀಣ ಪ್ರದೇಶದಲ್ಲಿ ತಂಬಾಕು ಸೇವನೆಯಿಂದ ಮಾನವನ ದೇಹದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿ, ಕೋಟ್ಪಾ-2003ರ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಗೊಳಿಸಿ, ತಂಬಾಕು ಸೇವನೆ ತ್ಯಜಿಸಲು ಅಗತ್ಯ ಆರೋಗ್ಯ ಚಿಕಿತ್ಸೆ ಹಾಗೂ ಆಪ್ತ ಸಮಾಲೋಚನೆಯ ಮೂಲಕ ತಂಬಾಕು ಸೇವನೆಯನ್ನು ತ್ಯಜಿಸುವಂತೆ ಪ್ರೇರೇಪಿಸಿ, ಯುವ ಸಮುದಾಯವು ತಂಬಾಕು ಸೇವನೆಗೆ ಬಲಿಯಾಗದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಎಂದು ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಎಂ.ಜಿ. ಶಿವಳ್ಳಿ ಹೇಳಿದರು.