ಸಾರಾಂಶ
ಕನ್ನಡಪ್ರಭ ವಾರ್ತೆ, ತುಮಕೂರುಜಿಲ್ಲೆಯಲ್ಲಿ ಮಳೆ-ಗಾಳಿಯಿಂದ ಹಾನಿಗೊಳಗಾದ ಮನೆಗಳನ್ನು ತಹಶೀಲ್ದಾರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸಬೇಕು. ಹಾನಿಗೊಳಗಾದ ಮನೆ ಮಾಲೀಕರಿಗೆ ತಕ್ಷಣ ಪರಿಹಾರ ನೀಡಲು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದರು.ಗಾಳಿಯಿಂದ 268 ವಿದ್ಯುತ್ ಕಂಬಗಳು ಹಾನಿಗೊಳಗಾಗಿರುವ ಬಗ್ಗೆ ವರದಿಯಾಗಿದ್ದು, ಹಾನಿಗೊಳಗಾದ ವಿದ್ಯುತ್ ಕಂಬಗಳನ್ನು ಕೂಡಲೇ ದುರಸ್ತಿಪಡಿಸಬೇಕು. ವಿದ್ಯುತ್ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ ದೂರು ಬಂದಲ್ಲಿ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ ಅವರಿಗೆ ಸೂಚನೆ ನೀಡಿದರು. ಮಳೆ ಹಾನಿ, ಕುಡಿಯುವ ನೀರು ಸಮಸ್ಯೆ ಸೇರಿದಂತೆ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ದೂರುಗಳನ್ನು ಸ್ವೀಕರಿಸಲು ಸ್ಥಾಪಿಸಿರುವ ಸಹಾಯವಾಣಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳು ಪ್ರತಿ ದಿನ ಪರಿಶೀಲಿಸಬೇಕೆಂದು ಸೂಚಿಸಿದರು. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಮುನ್ನ ಕಡ್ಡಾಯವಾಗಿ ಕ್ಲೋರಿನೇಷನ್ ಮಾಡಬೇಕೆಂದು ಸೂಚನೆ ನೀಡಿದರು. ಜನರಿಗೆ ಕುಡಿಯಲು ಸರಬರಾಜು ಮಾಡುವ ನೀರನ್ನು ಪ್ರತೀ ದಿನ ಕ್ಲೋರಿನೇಷನ್ ಮಾಡಬೇಕು. ಕ್ಲೋರಿನೇಷನ್ ಮಾಡದೆ ನೀರಿನಿಂದ ಸಾಂಕ್ರಾಮಿಕ ರೋಗಗಳು ಹರಡಿದ ಬಗ್ಗೆ ಪ್ರಕರಣಗಳು ವರದಿಯಾದಲ್ಲಿ ಸಂಬAಧಿಸಿದ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗುವುದು ಎಂದು ಖಡಕ್ ನಿರ್ದೇಶನ ನೀಡಿದರು.ಜಿಲ್ಲೆಯಲ್ಲಿ ಸಾಕಷ್ಟು ನೀರಿನ ಮೂಲಗಳಿದ್ದರೂ ಜನರಿಗೆ ಪ್ರತಿ ದಿನ ಕುಡಿಯುವ ನೀರು ಸರಬರಾಜು ಮಾಡಲು ಅಧಿಕಾರಿಗಳು ಮುಂದಾಗುತ್ತಿಲ್ಲ. ಕಳೆದ ವರ್ಷ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿರುವುದರಿಂದ ಕುಡಿಯುವ ನೀರಿಗೆ ತೊಂದರೆಯುAಟಾಗಿಲ್ಲ. ಆದರೂ ಅಧಿಕಾರಿಗಳು ಸಕಾಲದಲ್ಲಿ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕೆಲವು ಪ್ರದೇಶದಲ್ಲಿ ನೀರಿನ ಸಮಸ್ಯೆ ಬಗ್ಗೆ ದೂರುಗಳು ಬಂದಿವೆ. ಕೊಳವೆ ಬಾವಿಯಲ್ಲಿ ಇಳುವರಿ ಕಡಿಮೆ, ಪೈಪ್ ಲೈನ್ ಅಳವಡಿಕೆ, ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಮತ್ತಿತರ ಕಾರಣಗಳಿಂದ ನೀರಿನ ಸಮಸ್ಯೆ ಕಂಡು ಬಂದ ಪ್ರದೇಶಗಳಲ್ಲಿ ಕೂಡಲೇ ಪರಿಹಾರ ಒದಗಿಸಬೇಕು ಎಂದು ಸೂಚನೆ ನೀಡಿದರು. ಎಲ್ಲಾ ನೀರಿನ ಮೂಲಗಳ ಮಾದರಿಯನ್ನು 15 ದಿನಕ್ಕೊಮ್ಮೆ ಪ್ರಯೋಗಾಲಯದಲ್ಲಿ ಪರೀಕ್ಷೆಗೊಳಪಡಿಸಬೇಕು. ಪ್ರಯೋಗಾಲಯದ ವರದಿಯನ್ವಯ ಕಂಡು ಬಂದ ಕುಡಿಯಲು ಯೋಗ್ಯವಲ್ಲದ ನೀರನ್ನು ಬಳಸದಂತೆ ಸ್ಥಳೀಯ ಅಧಿಕಾರಿಗಳು ಜನರಲ್ಲಿ ಮನವಿ ಮಾಡಬೇಕು ಎಂದು ಸೂಚಿಸಿದರು. ಜಿಲ್ಲೆಯಲ್ಲಿ ಜಾನುವಾರು ಮೇವಿನ ದಾಸ್ತಾನು ಬಗ್ಗೆ ಮಾಹಿತಿ ಕೇಳಿದಾಗ ಉತ್ತರಿಸಿದ ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ: ಗಿರೀಶ್ಬಾಬು ರೆಡ್ಡಿ ಮುಂದಿನ 29 ವಾರಗಳಿಗಾಗುವಷ್ಟು ಮೇವು ದಾಸ್ತಾನಿದ್ದು, ಯಾವುದೇ ಮೇವಿನ ಸಮಸ್ಯೆ ಇರುವುದಿಲ್ಲ ಎಂದು ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿಗಳಾದ ಗೋಟೂರು ಶಿವಪ್ಪ ಹಾಗೂ ಸಪ್ತಶ್ರೀ, ಜಂಟಿ ಕೃಷಿ ನಿರ್ದೇಶಕ ರಮೇಶ್, ತೋಟಗಾರಿಕೆ ಉಪನಿರ್ದೇಶಕ ಶಾರದಮ್ಮ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಯೋಗಾನಂದ, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.