ಸಾರಾಂಶ
ಬೆಂಗಳೂರು : ಅಭಿವೃದ್ಧಿ ಹಾಗೂ ಪಕ್ಷದ ವಿಚಾರದಲ್ಲಿ ಕಾಂಗ್ರೆಸ್ ವಿಧಾನಪರಿಷತ್ ಸದಸ್ಯರನ್ನು ನಿರ್ಲಕ್ಷ್ಯ ಮಾಡುತ್ತಿರುವ ಸಚಿವರ ಮಾಹಿತಿ ನೀಡಿ. ಅಂತಹವರ ಬಗ್ಗೆ ಹೈಕಮಾಂಡ್ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೆವಾಲ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ನ ವಿಧಾನಪರಿಷತ್ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಪರಿಷತ್ ಸದಸ್ಯರ ಅಹವಾಲು ಸ್ವೀಕರಿಸಿದ ಬಳಿಕ ಈ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಮೊದಲಿಗೆ ಕಾಂಗ್ರೆಸ್ನ ಪರಿಷತ್ ಸದಸ್ಯರು ಸರ್ಕಾರದ ಪರ ಬಿಜೆಪಿ ನಾಯಕರನ್ನು ಟೀಕಿಸುವ ಕೆಲಸ ಮಾಡುತ್ತಿಲ್ಲ. ಪರಿಷತ್ನ ವಿರೋಧಪಕ್ಷದ ಮುಖ್ಯಸಚೇತಕ ರವಿಕುಮಾರ್ ಮಹಿಳಾ ಜಿಲ್ಲಾಧಿಕಾರಿಗೆ ಪಾಕಿಸ್ತಾನಿ ಎಂದು ಹೇಳಿದ್ದರೂ ಕಾಂಗ್ರೆಸ್ ಸದಸ್ಯರು ವಿರೋಧ ವ್ಯಕ್ತಪಡಿಸಿಲ್ಲ.
ಬಿಜೆಪಿಯವರು ಸರ್ಕಾರವನ್ನು ಟೀಕಿಸುತ್ತಿದ್ದರೂ ಸರ್ಕಾರವನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ವೇಳೆ ಪರಿಷತ್ ಸದಸ್ಯರು, ನಾವು ಸರ್ಕಾರದ ಪರ ಕೆಲಸ ಮಾಡುತ್ತಿದ್ದೇವೆ. ಸರ್ಕಾರಕ್ಕೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಪರಿಷತ್ನಲ್ಲಿ ಪ್ರಶ್ನೆ ಕೇಳಿದರೆ 1,500ಕ್ಕೂ ಹೆಚ್ಚು ಪ್ರಶ್ನೆಗಳಿಗೆ ಸಚಿವರು ಉತ್ತರವನ್ನೇ ನೀಡಿಲ್ಲ. ನಮ್ಮ ಮನವಿಗಳನ್ನು ಆಲಿಸುವುದಿಲ್ಲ. ನಮಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುವುದಿಲ್ಲ. ಹೀಗಾದರೆ ನಾವು ಸರ್ಕಾರವನ್ನು ಸಮರ್ಥಿಸಿಕೊಳ್ಳುವುದು ಹೇಗೆ? ಎಂದು ಅಸಹಾಯಕತೆ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.
ಇದನ್ನು ಗಂಭೀರವಾಗಿ ಪರಿಗಣಿಸಿದ ಸುರ್ಜೇವಾಲ, ಅಂತಹ ಸಚಿವರ ಮಾಹಿತಿ ನೀಡಿ. ಅಂಕಿ-ಅಂಶ ಹಾಗೂ ಅಗತ್ಯ ಮಾಹಿತಿ ನೀಡಿ ಸಹಕಾರ ನೀಡದ ಸಚಿವರ ಬಗ್ಗೆ ಹೈಕಮಾಂಡ್ ಗಮನಕ್ಕೆ ತರುತ್ತೇನೆ. ಅವರ ಬಗ್ಗೆ ಹೈಕಮಾಂಡ್ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.