ಸಾರಾಂಶ
ನೂತನ ವೃಂದ ನೇಮಕಾತಿ ನಿಯಮಗಳಂತೆ 1 ರಿಂದ 5 ರ ಬೋಧನೆಗೆ ಹಿಂಬಡ್ತಿ ಹೊಂದಿದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನ್ಯಾಯ ಒದಗಿಸಿಕೊಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ ಹಾಗೂ ತಹಸೀಲ್ದಾರ್ ಗುರುಪ್ರಸಾದ್ ಅವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮನವಿ ಸಲ್ಲಿಸಿ ಹಕ್ಕೊತ್ತಾಯಗಳನ್ನು ಮಂಡಿಸಲಾಯಿತು.
ಕನ್ನಡಪ್ರಭ ವಾರ್ತೆ ಹನೂರು
ನೂತನ ವೃಂದ ನೇಮಕಾತಿ ನಿಯಮಗಳಂತೆ 1 ರಿಂದ 5 ರ ಬೋಧನೆಗೆ ಹಿಂಬಡ್ತಿ ಹೊಂದಿದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನ್ಯಾಯ ಒದಗಿಸಿಕೊಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ ಹಾಗೂ ತಹಸೀಲ್ದಾರ್ ಗುರುಪ್ರಸಾದ್ ಅವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮನವಿ ಸಲ್ಲಿಸಿ ಹಕ್ಕೊತ್ತಾಯಗಳನ್ನು ಮಂಡಿಸಲಾಯಿತು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ ಮಾತನಾಡಿ, ಸರ್ಕಾರಿ ನೌಕರರ ವೃತ್ತಿ ಜೀವನದಲ್ಲಿ ಮುಂಬಡ್ತಿಗಳಾಗುವುದು ಸಹಜ ಪ್ರಕ್ರಿಯೆ. ಆದರೆ ಪ್ರಾಥಮಿಕ ಶಾಲಾ ಶಿಕ್ಷಕರು ಹಿಂಬಡ್ತಿ ಅನುಭವಿಸಿ ಅವಮಾನದಲ್ಲಿ ಕೆಲಸ ನಿರ್ವಹಿಸುತ್ತಿರುವುದು ಶೋಚನೀಯ ಎಂದರು.
ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ವಿದ್ಯೆ ಕಲಿಸುವ ಗುರುಗಳಿಗೆ ನ್ಯಾಯ ನೀಡಬೇಕು ಎಂದು ಮನವಿ ಮಾಡಿದರು. ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣೇಗೌಡ ಮಾತನಾಡಿ, ನೌಕರರ ಬೇಡಿಕೆಗಳು ಈಡೇರುವವರೆಗೆ ಎಲ್ಲಾ ಸಂಘಗಳು ಒಗ್ಗಟ್ಟಿನಿಂದ ಹೋರಾಡಬೇಕಾಗುತ್ತದೆ. ಶಿಕ್ಷಕರಿಗೆ ಆಗಿರುವ ಅನ್ಯಾಯ ಸರಿಪಡಿಸಿ ಕೊಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು.ಈ ಸಂದರ್ಭದಲ್ಲಿ ಪದವೀಧರ ಶಿಕ್ಷಕರ ಸಂಘದ ಅಧ್ಯಕ್ಷ ಮಾದೇಶ್, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶಿವಮಲ್ಲು, ಗ್ರಾಮೀಣ ಶಿಕ್ಷಕರ ಸಂಘದ ಅಧ್ಯಕ್ಷ ಮಾದೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಎಲ್ಲಾ ಪದಾಧಿಕಾರಿಗಳು ಶಿಕ್ಷಕರು ಭಾಗವಹಿಸಿದ್ದರು.