ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಫಲಾನುಭಿಗಳನ್ನು ಅನಗತ್ಯವಾಗಿ ಅಲೆದಾಡಿಸುವ ಪದ್ಧತಿ ಬಿಟ್ಟು, ಪ್ರಾಥಮಿಕ ಹಂತದಲ್ಲೇ ದಾಖಲೆಗಳನ್ನು ಪರಿಶೀಲಿಸುವ ಮೂಲಕ ಸಾಲ ಸೌಲಭ್ಯ ಕಲ್ಪಿಸಲು ಮುಂದಾಗಬೇಕು ಎಂದು ಸಂಸದ ಪಿ.ಸಿ.ಗದ್ದಿಗೌಡರ ಸೂಚಿಸಿದರು.ಜಿಲ್ಲಾ ಪಂಚಾಯತಿ ಹಳೆಯ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಲೀಡ್ ಬ್ಯಾಂಕ್ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಯೋಜನೆಯಡಿ ನೀಡಲಾಗುವ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಇಲಾಖೆಯ ಅಧಿಕಾರಿಗಳು ಮತ್ತು ಬ್ಯಾಂಕ್ ಅಧಿಕಾರಿ ಹಾಗೂ ಸಿಬ್ಬಂದಿ ಸೂಕ್ತ ಮಾರ್ಗದರ್ಶನ ನೀಡಿ, ರೈತರ ಮಕ್ಕಳು ಶಿಕ್ಷಣ ಸಾಲ ಸೌಲಭ್ಯಕ್ಕಾಗಿ ಬಂದಲ್ಲಿ ನಿಯಮಾವಳಿಗಳು ಸ್ವಲ್ಪ ಸರಳವಾಗಿರಲಿ. ಯಾವ ಯಾವ ದಾಖಲೆಗಳನ್ನು ಸಲ್ಲಿಸಬೇಕು ಎಂಬುವುದನ್ನು ಫಲಕಗಳಲ್ಲಿ ಪ್ರದರ್ಶಿಸಿ, ತಾಂತ್ರಿಕ ತೊಂದರೆಗಳಿದ್ದಲ್ಲಿ ತಿಳಿಸಿ ಸಾರ್ವಜನಿಕರಿಗೆ ತೊಂದರೆ ಆಗದಂಂತೆ ಕಾರ್ಯನಿರ್ವಹಿಸಬೇಕು ಎಂದರು.ಬ್ಯಾಂಕ್ಗಳಲ್ಲಿ ಕನ್ನಡಿಗರ ಸಂಖ್ಯೆ ಕಡಿಮೆ ಇರುವುದು ಕೂಡ ಅರ್ಹ ಫಲಾನುಭವಿಗಳು ಪರದಾಡಲು ಒಂದು ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಬ್ಯಾಂಕ್ಗಳಿಗೆ ತೆರಳಿ ಆಸಕ್ತಿ ವಹಿಸಿ ವಿವಿಧ ಯೋಜನೆಯಡಿ ಸಿಗುವ ಸಾಲ ಸೌಲಭ್ಯ ದೊರಕಿಸಿಕೊಡಿ, ಸಣ್ಣಪುಟ್ಟ ಕಾರಣಕ್ಕೆ ತಡೆ ಹಿಡಿಸುವ ಕೆಲಸ ಮಾಡಬೇಡಿ ಎಂದು ವಿವಿಧ ನಿಗಮಗಳ ಅಧಿಕಾರಿಗಳನ್ನು ಎಚ್ಚರಿಸಿದರು. ಇಂದಿನ ದಿನಮಾನಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ನಿರುದ್ಯೋಗ ಸಮಸ್ಯೆ ಕಾಡುತ್ತಿರವುದರಿಂದ ಯುವ ಸಮೂಹವನ್ನು ಸ್ವಯಂ ಉದ್ಯೋಗಕ್ಕೆ ಉತ್ತೇಜಿಸಬೇಕಾಗಿದೆ. ಕೃಷಿಗಿಂತ ಇತರೇ ಉದ್ಯಮಗಳತ್ತ ಒಲವು ತೋರುತ್ತಿರುವುದರಿಂದ ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಇಲಾಖೆಗಳಲ್ಲಿರುವ ಯೋಜನೆಗಳ ಬಗ್ಗೆ ಪ್ರಚಾರ ಪಡಿಸಿ ಸೂಕ್ತ ಮಾರ್ಗದರ್ಶನ ನೀಡಿ, ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಿ ಯುವಕರು ನವ ಉದ್ಯಮಿಗಳಾಗಲು ಪ್ರೇರಪಿಸಬೇಕಾಗಿದೆ ಎಂದರು.ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಮಾತನಾಡಿ, ಕೇನರಾ ಬ್ಯಾಂಕ್ನಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭಿಗಳ ಅರ್ಜಿಗಳು ತಿರಸ್ಕೃತಗೊಂಡಿದ್ದು, ಈ ಬಗ್ಗೆ ಬ್ಯಾಂಕ್ ವ್ಯವಸ್ಥಾಪಕರು ಗಮನ ಹರಿಸಬೇಕು. ಯಾವ ಬ್ಯಾಂಕಿನಲ್ಲಿ ಅರ್ಜಿಗಳು ಬಾಕಿ ಉಳಿದಿವೆಯೋ ಅವೆಲ್ಲವೂ ಮುಂದಿನ ಹದಿನೈದು ದಿನದೊಳಗಾಗಿ ವಿಲೆವಾರಿಯಾಗಬೇಕು. ಸ್ವ ಸಹಾಯ ಗುಂಪುಗಳಿಗೆ ಸಾಲ ನೀಡಲು ಪ್ಯಾನ್ ಕಾರ್ಡ್ ಕಡ್ಡಾಯ ಅಂತ ಇರುವುದಿಲ್ಲ. ಈ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ.ಬಾಗಲಕೋಟೆ ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ರಾಜಕುಮಾರ ಹೂಗಾರ ಸೇರಿದಂತೆ ಇತರರು ಇದ್ದರು.