ಎಪಿಎಸಿಯಲ್ಲಿ ರೈತರಿಗೆ ವರ್ತಕರಿಗೆ ಅಗತ್ಯ ಸೌಕರ್ಯ ಕಲ್ಪಿಸಿ: ಎಡಿಸಿ ಅಬೀದ್ ಗದ್ಯಾಳ

| Published : Jun 14 2025, 12:57 AM IST / Updated: Jun 14 2025, 12:58 AM IST

ಎಪಿಎಸಿಯಲ್ಲಿ ರೈತರಿಗೆ ವರ್ತಕರಿಗೆ ಅಗತ್ಯ ಸೌಕರ್ಯ ಕಲ್ಪಿಸಿ: ಎಡಿಸಿ ಅಬೀದ್ ಗದ್ಯಾಳ
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆ ಕಚೇರಿ ಸಭಾಂಗಣದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಂಸ್ಥೆಯ ಎಪಿಎಂಸಿ ವರ್ತಕರ ಕುಂದು ಕೊರತೆ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಾಣದಲ್ಲಿ ರೈತರಿಗೆ ಹಾಗೂ ವರ್ತಕರು ವ್ಯಾಪಾರ ವಹಿವಾಟು ಕೈಗೊಳ್ಳಲು ಅಗತ್ಯವಿರುವ ಎಲ್ಲ ರೀತಿಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಸೂಚನೆ ನೀಡಿದರು.

ಅವರು ಶುಕ್ರವಾರ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಕಚೇರಿ ಸಭಾಂಗಣದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಂಸ್ಥೆಯ ಎಪಿಎಂಸಿ ವರ್ತಕರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೈತರು ತಾವು ಬೆಳೆದ ಉತ್ಪನ್ನಗಳನ್ನು ಮಾರಾಟ ಚಟುವಟಿಕೆಗಳನ್ನು ಕೈಗೊಳ್ಳಲು ಸರ್ಕಾರ ಕೃಷಿ ಉತ್ಪನ್ನ ಮಾರುಕಟ್ಟೆಯನ್ನು ನಿರ್ಮಿಸಿದೆ. ಮಾರುಕಟ್ಟೆಗೆ ಆಗಮಿಸುವ ರೈತರು ಹಾಗೂ ವರ್ತಕರು ತಮ್ಮ ಮಾರಾಟ ಕಾರ್ಯಗಳನ್ನು ಕೈಗೊಳ್ಳಲು ಅಗತ್ಯವಿರುವ ಎಲ್ಲ ರೀತಿಯ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕೆಂದರು.

ಕೃಷಿ ಉತ್ಪನ್ನಗಳನ್ನು ಸಂರಕ್ಷಿಸಿ ಇಡಲು ಅನುಕೂಲವಾಗುವಂತೆ ಶೀತಲಗೃಹ ನಿರ್ಮಾಣ, ವೇ ಬ್ರಿಡ್ಜ್ ಹಾಗೂ ರೈತರಿಗೆ ತಂಗಲು ರೈತಭವನವನ್ನು ನಿರ್ಮಿಸಬೇಕು ಎಂದ ಅವರು, ರೈತರಿಗೆ ಕೃಷಿ ಮಾರುಕಟ್ಟೆ ಇಲಾಖೆಯಿಂದ ದೊರೆಯುವ ಯೋಜನೆಗಳು ಹಾಗೂ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಾಗಾರಗಳನ್ನು ಕೈಗೊಳ್ಳುವುದರೊಂದಿಗೆ ಅದರ ಪ್ರಯೋಜನ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.

ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಪರಿಸರದ ರಕ್ಷಣೆಗೆ ಆದ್ಯತೆ ನೀಡಬೇಕು. ಮರ-ಗಿಡಗಳನ್ನು ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದ ಅವರು, ಮಾರುಕಟ್ಟೆ ಪ್ರಾಂಗಣವನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವಂತೆ ವ್ಯಾಪಾರಸ್ಥರು ಸಹಕರಿಸಬೇಕು ಎಂದು ಹೇಳಿದರು.

ಪ್ರಾಂಗಣದಲ್ಲಿ ಎಲ್ಲ ರೀತಿಯ ತ್ಯಾಜ್ಯಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಅನುಕೂಲವಾಗುವಂತೆ ವ್ಯಾಪಾರಸ್ಥರು ಕಸಗಳನ್ನು ವಿಂಗಡಣೆ ಮಾಡಿ, ವಿಲೇವಾರಿಗೆ ಮುಂದಾಗಬೇಕು. ತಪ್ಪಿದ್ದಲ್ಲಿ ಅಂತಹ ವ್ಯಾಪಾರಸ್ಥರಿಗೆ ದಂಡ ವಿಧಿಸಲಾಗುವುದು ಎಂದರು.ಸಭೆಯಲ್ಲಿ ಎಪಿಎಂಸಿ ಕಾರ್ಯದರ್ಶಿ ಗಾಯತ್ರಿ, ರೈತರು, ವರ್ತಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.