ಗ್ರಾಪಂ ಪ್ರತಿನಿಧಿಗಳು ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಬೇಕು ಮತ್ತು ರಾಜಕೀಯ ರಹಿತವಾಗಿ ಸಾರ್ವಜನಿಕರಿಗೆ ಸೌಲಭ್ಯಗಳನ್ನು ಒದಗಿಸಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ಗ್ರಾಪಂ ಪ್ರತಿನಿಧಿಗಳು ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಬೇಕು ಮತ್ತು ರಾಜಕೀಯ ರಹಿತವಾಗಿ ಸಾರ್ವಜನಿಕರಿಗೆ ಸೌಲಭ್ಯಗಳನ್ನು ಒದಗಿಸಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದ್ದಾರೆ.ಕುಂದಚೇರಿ ಗ್ರಾಪಂ ಚೆಟ್ಟಿಮಾನಿ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ಡಿಜಿಟಲ್ ಗ್ರಂಥಾಲಯ, ಅರಿವು ಕೇಂದ್ರ, ಅಂಚೆ ಕಚೇರಿ ಮತ್ತು ಸಂಜೀವಿನಿ ಒಕ್ಕೂಟದ ಕಟ್ಟಡ ಉದ್ಘಾಟಿಸಿ ಮಾತನಾಡಿದ ಶಾಸಕರು ಗ್ರಾಪಂ ಪ್ರತಿನಿಧಿಗಳು ಅತ್ಯಂತ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದರು.ಕ್ಷೇತ್ರದಾದ್ಯಂತ ನೂತನ ಕಟ್ಟಡಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಎಲ್ಲ ಗ್ರಾಪಂ ವ್ಯಾಪ್ತಿಯಲ್ಲೂ ಸರ್ಕಾರಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಒದಗಿಸಲಾಗುತ್ತಿದೆ. ಇದನ್ನು ಪಂಚಾಯಿತಿ ಪ್ರತಿನಿಧಿಗಳು ಸದುಪಯೋಗಪಡಿಸಿಕೊಂಡು ಜನರಿಗೆ ಅನುಕೂಲ ಕಲ್ಪಿಸಬೇಕು. ತಾವು ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಗುರಿ ಹೊಂದಿದ್ದು, ಸರ್ವರೂ ಕೈಜೋಡಿಸಬೇಕು ಎಂದು ಪೊನ್ನಣ್ಣ ಮನವಿ ಮಾಡಿದರು.ಪ್ರಾಸ್ತಾವಿಕವಾಗಿ ಮಾತನಾಡಿದ ಕುಂದಚೇರಿ ಗ್ರಾಪಂನ ಹಿರಿಯ ಸದಸ್ಯ ಹ್ಯಾರಿಸ್ ಅವರು 1982ರಲ್ಲಿ ಪಂಚಾಯ್ತಿಯ ಹಳೆಯ ಕಟ್ಟಡ ನಿರ್ಮಾಣಗೊಂಡಿತು. ಅಂದಿನಿಂದ ಇಂದಿನವರೆಗೆ ನೂತನ ಕಟ್ಟಡದ ನಿರ್ಮಾಣಕ್ಕೆ ಸಹಕರಿಸಿದ ಸರ್ವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುತ್ತಿರುವ ಹಾಲಿ ಶಾಸಕ ಎ.ಎಸ್. ಪೊನ್ನಣ್ಣ, ಮಾಜಿ ಶಾಸಕರು, ಗ್ರಾಪಂನ ಉಪಾಧ್ಯಕ್ಷರು, ಆಡಳಿತ ಮಂಡಳಿ, ಸರ್ವಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು, ಮಾಜಿ ಪ್ರತಿನಿಧಿಗಳು, ಈಗಿನ ಮತ್ತು ಹಿಂದಿನ ಜಿಲ್ಲಾಧಿಕಾರಿಗಳು, ದಾನಿಗಳು, ಜಿಪಂ, ತಾಪಂ, 1994ರಿಂದ ರಚನೆಗೊಂಡ ಆರು ಆಡಳಿತ ಮಂಡಳಿ ಸೇರಿದಂತೆ ಸರ್ವರ ಆಸಕ್ತಿಯಿಂದ ನೂತನ ಕಟ್ಟಡ ನಿರ್ಮಾಣಗೊಂಡು ಇಂದು ಉದ್ಘಾಟನೆಗೊಂಡಿದೆ ಎಂದರು. ಕುಂದಚೇರಿ ಗ್ರಾಪಂ ಅಧ್ಯಕ್ಷ ಪಿ.ಬಿ. ದಿನೇಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಶಾಸಕ ಪೊನ್ನಣ್ಣ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ನೆರವಂಡ ಉಮೇಶ್, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ತಾಪಂ ಕಾರ್ಯನಿರ್ವಹಣಾಧಿಕಾರಿ ಶೇಖರ್, ಗ್ರಾಪಂ ಅಧ್ಯಕ್ಷ ಪಿ.ಬಿ. ದಿನೇಶ್, ಉಪಾಧ್ಯಕ್ಷೆ ಬೇಬಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಎಂ.ಎಸ್. ಗಂಗಮ್ಮ, ತಾಲೂಕು ಎ.ಡಿ. ಹೇಮಂತ್ ಹಾಗೂ ಗುತ್ತಿಗೆದಾರ ಇಸ್ಮಾಯಿಲ್ ಕಾನಾವು ಅವರನ್ನು ಸನ್ಮಾನಿಸಲಾಯಿತು.