ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ ಶನಿವಾರ ಪ್ರಜಾಸೇವಾ ಇಲಾಖೆ, ಕೊಪ್ಪಳ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ಸಹಯೋಗದಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆ ನಡೆಯಿತು.

ಕೊಪ್ಪಳ: ಸಾರ್ವಜನಿಕರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ, ಸ್ಥಳದಲ್ಲಿಯೇ ಸಾಧ್ಯವಾದಷ್ಟು ಸಮಸ್ಯೆಗಳನ್ನು ಇತ್ಯರ್ಥಪಡಿಸಬೇಕು ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದ್ದಾರೆ.

ತಾಲೂಕಿನ ಹಿಟ್ನಾಳ ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ ಶನಿವಾರ ಪ್ರಜಾಸೇವಾ ಇಲಾಖೆ, ಕೊಪ್ಪಳ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ಸಹಯೋಗದಲ್ಲಿ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜನರು ಎದುರಿಸುತ್ತಿರುವ ಸಮಸ್ಯೆಗಳು ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ್ದಾಗಿದ್ದು, ಅವುಗಳನ್ನು ಆದ್ಯತೆಯ ಮೇರೆಗೆ ಬಗೆಹರಿಸುವುದು ಅಧಿಕಾರಿಗಳ ಮುಖ್ಯ ಜವಾಬ್ದಾರಿಯಾಗಿದೆ. ಪ್ರಜಾಸೇವಾ ಆಂದೋಲನವು ಸಾರ್ವಜನಿಕರು ಮತ್ತು ಆಡಳಿತದ ನಡುವೆ ನೇರ ಸಂಪರ್ಕ ಕಲ್ಪಿಸುವ ಉತ್ತಮ ವೇದಿಕೆಯಾಗಿದೆ. ಗ್ರಾಮಸ್ಥರು ಯಾವುದೇ ಹಿಂಜರಿಕೆಯಿಲ್ಲದೆ ತಮ್ಮ ವೈಯಕ್ತಿಕ ಸಮಸ್ಯೆ ಹಾಗೂ ಅಹವಾಲುಗಳನ್ನು ಮುಕ್ತವಾಗಿ ಸಲ್ಲಿಸಬೇಕು ಎಂದರು.

ಸಭೆಯಲ್ಲಿ ಸ್ಥಳೀಯವಾಗಿ ಇತ್ಯರ್ಥಪಡಿಸಬಹುದಾದ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕು. ತಾಲೂಕು ಅಥವಾ ಜಿಲ್ಲಾ ಮಟ್ಟದಲ್ಲಿ ಪರಿಹರಿಸಬೇಕಾದ ದೀರ್ಘಕಾಲೀನ ಬೇಡಿಕೆಗಳಿದ್ದಲ್ಲಿ ಅವುಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ತ್ವರಿತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಅಧಿಕಾರಿಗಳಿಂದ ಅಹವಾಲು ಸ್ವೀಕಾರ: ಸಭೆಯಲ್ಲಿ ಹಿಟ್ನಾಳ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ತಮ್ಮ ಕುಂದುಕೊರತೆ ಹಾಗೂ ಅಹವಾಲುಗಳನ್ನು ಸಲ್ಲಿಸಿದರು. ಕಂದಾಯ, ಗ್ರಾಮೀಣಾಭಿವೃದ್ಧಿ, ಕುಡಿಯುವ ನೀರು, ರಸ್ತೆ, ವಿದ್ಯುತ್ ಸೇರಿದಂತೆ ವಿವಿಧ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಲಾಯಿತು.

ಸಾರ್ವಜನಿಕರಿಂದ ಸ್ವೀಕರಿಸಿದ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪರಿಶೀಲಿಸಿ, ನಿಯಮಾನುಸಾರ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

ಕೊಪ್ಪಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಾಲಚಂದನ್, ತಹಸೀಲ್ದಾರ್ ಬಸವರಾಜ ತನ್ನಳ್ಳಿ, ತಾಪಂ ಇಒ ಗುಂಡಪ್ಪ ತುರಾದಿ ಉಪಸ್ಥಿತರಿದ್ದರು.