ಸಾರಾಂಶ
ಹಾವೇರಿ: ಕೀಟ ಮತ್ತು ಕೀಟ ಬಾಧೆಗೆ ಸರಿಯಾದ ಪರಿಹಾರವನ್ನು ಒದಗಿಸುವಲ್ಲಿ ಕೃಷಿ ಪರಿಕರ ಮಾರಾಟಗಾರರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್. ಪಾಟೀಲ ಹೇಳಿದರು.ತಾಲೂಕಿನ ದೇವಿಹೊಸೂರಿನ ದಾನವೀರ ಶಿರಸಂಗಿ ಲಿಂಗರಾಜ ದೇಸಾಯಿ ತೋಟಗಾರಿಕಾ ಅಭಿಯಾಂತ್ರಿಕ ಮತ್ತು ಆಹಾರ ತಂತ್ರಜ್ಞಾನ ಮಹಾವಿದ್ಯಾಲಯದಲ್ಲಿ ಶಿರಸಂಗಿ ಲಿಂಗರಾಜ ಸ್ಮಾರಕ ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಹನುಮನಮಟ್ಟಿ ಕೃಷಿ ಮಹಾವಿದ್ಯಾಲಯ, ಕೃಷಿ ವಿಜ್ಞಾನ ಕೇಂದ್ರ ಹಾಗೂ ವಿವಿಧ ವಿಶ್ವವಿದ್ಯಾಲಯಗಳ ಸಹಯೋಗದೊಂದಿಗೆ ಶನಿವಾರ ಹಮ್ಮಿಕೊಂಡಿದ್ದ ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯ ಡಿಪ್ಲೋಮಾ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರೈತರಿಗೆ ಯೋಗ್ಯ ದರದಲ್ಲಿ ಉತ್ತಮ ಗುಣಮಟ್ಟದ ಕೃಷಿ ಪರಿಕರಗಳನ್ನು ಸರಿಯಾದ ಸಮಯದಲ್ಲಿ ಪೂರೈಸಲು ಕಾಳಜಿ ವಹಿಸಬೇಕು. ಸಸ್ಯ ಪ್ರಚೋದಕಗಳ ಕುರಿತು ರೈತರಲ್ಲಿ ಅರಿವು ಮೂಡಿಸಲು ಸಲಹೆ ನೀಡುವುದರ ಜೊತೆಗೆ ಕಾರ್ಯಾಗಾರದ ಸದುಪಯೋಗವನ್ನು ಪಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಜಂಟಿ ಕೃಷಿ ನಿರ್ದೇಶಕ ಡಾ.ಮಲ್ಲಿಕಾರ್ಜುನ ಕೆ. ಮಾತನಾಡಿ, ಕೃಷಿ ಇಲಾಖೆ ಹಾಗೂ ರೈತರ ನಡುವೆ ಕೃಷಿ ಪರಿಕರ ಮಾರಾಟಗಾರರು ಕೊಂಡಿಯಾಗಿ ಕೆಲಸ ನಿರ್ವಹಿಸುವುದು ಬಹಳ ಅಗತ್ಯವಿದೆ. ಕೃಷಿ ಪರಿಕರ ಮಾರಾಟಗಾರರು ಅಧಿಕೃತ ಪರವಾನಗಿಯನ್ನು ಪಡೆದುಕೊಂಡು, ನಿಗದಿತ ಬೆಲೆಗೆ ಕೃಷಿ ಪರಿಕರಗಳನ್ನು ರೈತರಿಗೆ ನೇರವಾಗಿ ಮಾರಾಟ ಮಾಡಬೇಕು. ರೈತರ ಜೊತೆಗೆ ಸಂಯಮದಿಂದ ವರ್ತಿಸಬೇಕು ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ವಿದ್ಯಾಧಿಕಾರಿ ಡಾ.ಲಕ್ಷ್ಮಣ ಕುಕನೂರು ಸ್ವಾಗತಿಸಿ, ದೇಸಿ ತರಬೇತಿ ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಮಾತನಾಡಿದರು.ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಸಮಿತಿ ವಿಸ್ತರಣಾ ನಿರ್ದೇಶಕ ಡಾ.ಎಂ.ವಿ. ಮಂಜುನಾಥ, ಹನುಮನಮಟ್ಟಿ ಕೃಷಿ ಮಹಾವಿದ್ಯಾಲಯದ ವಿದ್ಯಾಧಿಕಾರಿ ಡಾ.ಕೆ.ವಿ. ಬಸವಕುಮಾರ, ರಾಜ್ಯ ನೋಡೆಲ್ ಅಧಿಕಾರಿ ಡಾ.ಎಸ್.ಎನ್. ಜಾಧವ, ರಾಣಿಬೆನ್ನೂರಿನ ಉಪ ಕೃಷಿ ನಿರ್ದೇಶಕ ಕರಿಯಲ್ಲಪ್ಪ ಕೊರಚರ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.