ರೈತರಿಗೆ ಗುಣಮಟ್ಟದ ರಸಗೊಬ್ಬರ ನೀಡಿ: ಶಾಸಕ ರಮೇಶ ಬಂಡಿಸಿದ್ದೇಗೌಡ

| Published : Jun 17 2025, 04:23 AM IST

ಸಾರಾಂಶ

ರೈತರಿಗೆ ಕೊಟ್ಟ ಸಾಲವನ್ನು ಅಷ್ಟೆ ಜಾಗ್ರತೆ ವಹಿಸಿ ವಸೂಲು ಮಾಡಿ ಸಂಸ್ಥೆಗೆ ನಷ್ಟವಾಗದಂತೆ ಎಚ್ಚರಿಕೆ ವಹಿಸಬೇಕು. ಮುಂದಿನ ದಿನಗಳಲ್ಲಿ ಸಹಕಾರ ಸಂಸ್ಥೆಗಳಿಗೆ ಸರ್ಕಾರ ಇನ್ನಷ್ಟು ಹಣ ನೀಡಿ ಉತ್ತಮಗೊಳಿಸಲು ಮುಂದಾಗಿದೆ. ಈಗಾಗಲೇ ಮುಖ್ಯ ಮಂತ್ರಿಗಳು ಸಚಿವರುಗಳೊಂದಿಗೆ ಚರ್ಚೆ ಮಾತುಕತೆ ನಡೆಸಿದ್ದಾರೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಸಗಟು ರಸಗೊಬ್ಬರ ಮಾರಾಟ ಮಳಿಗೆ ತೆರೆಯುವ ಜೊತೆಗೆ ರೈತರಿಗೆ ಗುಣಮಟ್ಟದ ರಸಗೊಬ್ಬರ ನೀಡಬೇಕು ಎಂದು ಸೆಸ್ಕ್ ಅಧ್ಯಕ್ಷ, ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು.

ಪಟ್ಟಣದ ಟಿಎಪಿಸಿಎಂಎಸ್ ಕಚೇರಿ ಆವರಣದಲ್ಲಿ ಸಗಟು ರಸಗೊಬ್ಬರ ಮಾರಾಟ ಮಳಿಗೆ ಉದ್ಘಾಟಿಸಿ ಮಾತನಾಡಿ, ರೈತರಿಗೆ ಸಮಯಕ್ಕೆ ಸರಿಯಾಗಿ ಸಾಲವನ್ನು ನೀಡಿ ಕಡಿಮೆ ಬಡ್ಡಿ ದರದಲ್ಲಿ ಗೊಬ್ಬರದ ವಹಿವಾಟು ನಡೆಸಿ ರೈತರಿಗೆ ಅನುಕೂಲ ಮಾಡಬೇಕು ಎಂದರು.

ರೈತರಿಗೆ ಕೊಟ್ಟ ಸಾಲವನ್ನು ಅಷ್ಟೆ ಜಾಗ್ರತೆ ವಹಿಸಿ ವಸೂಲು ಮಾಡಿ ಸಂಸ್ಥೆಗೆ ನಷ್ಟವಾಗದಂತೆ ಎಚ್ಚರಿಕೆ ವಹಿಸಬೇಕು. ಮುಂದಿನ ದಿನಗಳಲ್ಲಿ ಸಹಕಾರ ಸಂಸ್ಥೆಗಳಿಗೆ ಸರ್ಕಾರ ಇನ್ನಷ್ಟು ಹಣ ನೀಡಿ ಉತ್ತಮಗೊಳಿಸಲು ಮುಂದಾಗಿದೆ. ಈಗಾಗಲೇ ಮುಖ್ಯ ಮಂತ್ರಿಗಳು ಸಚಿವರುಗಳೊಂದಿಗೆ ಚರ್ಚೆ ಮಾತುಕತೆ ನಡೆಸಿದ್ದಾರೆ ಎಂದರು.

ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ನಂದೀಶ್ ಮಾತನಾಡಿ, ತಾಲೂಕಿನ ರೈತರ ಆರ್ಥಿಕ ಅಭಿವೃದ್ಧಿ ಹಾಗೂ ಪ್ರಗತಿಗಾಗಿ ಸಹಕಾರಿ ತತ್ವದ ಮೂಲಕ ಸಂಘ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಸಹಕಾರ ಇಲಾಖೆಯಲ್ಲಿ ಉತ್ತಮ ಸಂಸ್ಥೆಯಾಗಿ ಉಳಿದಿದೆ ಎಂದರು.

ಈ ಸಂಸ್ಥೆಯಲ್ಲಿ ಎರಡು ಬಾರಿ ಅಧ್ಯಕ್ಷರಾಗಿದ್ದ ದಿ.ಎ.ಎಸ್. ಬಂಡಿಸಿದ್ದೇಗೌಡರು, ಎರಡು ಬಾರಿ ಕ್ಷೇತ್ರದ ಶಾಸಕರಾಗಿ ಹಾಗೂ ರಾಜ್ಯ ಸರ್ಕಾರದ ಉಗ್ರಾಣ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಹಲವರು ಸಂಸ್ಥೆಗಳ ಅಧ್ಯಕ್ಷರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಅವರ ನೆನಪಿಗಾಗಿ ಅಮೃತ ಭವನ ನಿರ್ಮಾಣ ಮಾಡಲು ಶಾಸಕರ ಅನುದಾನ ನೀಡಿ ನೆರವಾಗಬೇಕು ಎಂದು ಮನವಿ ಮಾಡಿದರು.

ಈ ವೇಳೆ ಸಂಸ್ಥೆ ಕಾರ್ಯದರ್ಶಿ ಶಂಕರ್, ಸಹಾಯಕ ಕೃಷಿ ನಿರ್ದೇಶಕಿ ಪ್ರಿಯದರ್ಶಿನಿ, ಪುರಸಭಾ ಮುಖ್ಯಾಧಿಕಾರಿ ಎಂ.ರಾಜಣ್ಣ, ಸೊಸೈಟಿ ನಿರ್ದೇಶಕರು, ಷೇರುದಾರರು, ಸಿಬ್ಬಂದಿ ಸೇರಿದಂತೆ ಇತರರು ಇದೇ ವೇಳೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರನ್ನು ಸನ್ಮಾನಿಸಲಾಯಿತು.