ಹೊಸ ಪೈಪ್‌ಲೈನ್‌ ಕಾಮಗಾರಿಗೆ ₹100 ಕೋಟಿ ನೀಡಿ

| Published : Jun 18 2025, 01:11 AM IST

ಸಾರಾಂಶ

ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ 22 ಕೆರೆಗಳ ಏತ ನೀರಾವರಿ ಯೋಜನೆಯ ಹೊಸ ಪೈಪ್‌ಲೈನ್ ಕಾಮಗಾರಿಗೆ ₹100 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮೂಲಕ ಮುಖ್ಯಮಂತ್ರಿ, ಡಿಸಿಎಂ-ಜಲಸಂಪನ್ಮೂಲ ಸಚಿವರಿಗೆ ಶಾಸಕ ಕೆ.ಎಸ್. ಬಸವಂತಪ್ಪ ಮನವಿ ಸಲ್ಲಿಸಿದ್ದಾರೆ.

- ದಾವಣಗೆರೆಯಲ್ಲಿ ಸಿಎಂ, ಡಿಸಿಎಂಗೆ ಶಾಸಕ ಬಸವಂತಪ್ಪ ಮನವಿ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ 22 ಕೆರೆಗಳ ಏತ ನೀರಾವರಿ ಯೋಜನೆಯ ಹೊಸ ಪೈಪ್‌ಲೈನ್ ಕಾಮಗಾರಿಗೆ ₹100 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮೂಲಕ ಮುಖ್ಯಮಂತ್ರಿ, ಡಿಸಿಎಂ-ಜಲಸಂಪನ್ಮೂಲ ಸಚಿವರಿಗೆ ಶಾಸಕ ಕೆ.ಎಸ್. ಬಸವಂತಪ್ಪ ಮನವಿ ಸಲ್ಲಿಸಿದರು.

ನಗರದ ಹೈಸ್ಕೂಲ್ ಮೈದಾನದಲ್ಲಿ ಸೋಮವಾರ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಅವರಿಗೆ ಅನುದಾನ ಬಿಡುಗಡೆಗೆ ಟೆಂಡರ್ ಕರೆದು ಕಾಮಗಾರಿ ನಡೆಸುವಂತೆ ಕೋರಿದರು.

ಕೆರೆಗಳಿಗೆ ನೀರು ತುಂಬಿಸಲು ಎಲ್ ಅಂಡ್ ಟಿ ಕಂಪನಿಯು ಯೋಜನೆ ಕಾಮಗಾರಿ ನಡೆಸಿತ್ತು. ಕಳಪೆ ಕಾಮಗಾರಿಯಿಂದ ಈವರೆಗೂ ಆ ಕೆರೆಗಳಿಗೆ ನೀರು ತುಂಬಿಲ್ಲ. ಹೊಸ ಕಾಮಗಾರಿ ಕೈಗೊಂಡು ಕೆರೆಗಳಿಗೆ ನೀರು ತುಂಬಿಸಬೇಕೆಂದು ಸಿರಿಗೆರೆ ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಒತ್ತಾಯಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಈ ಹಿಂದೆ ಮನವಿಯೂ ಸಲ್ಲಿಸಲಾಗಿತ್ತು. ನೀರಾವರಿ ನಿಗಮ ಮಂಡಳಿಯಲ್ಲಿ ಕೆರೆಗಳ ಅಭಿವೃದ್ಧಿಗೆ ₹22 ಕೋಟಿ ರೂ.ಮೀಸಲಿಟ್ಟಿದ್ದು, ಇನ್ನು ಹೆಚ್ಚುವರಿ ಸೇರಿದಂತೆ ₹100 ಕೋಟಿ ಅನುದಾನ ಮಾಡಿ ಕಾಮಗಾರಿ ಪೂರ್ಣಗೊಳಿಸಿ ರೈತರ ನೆರವಿಗೆ ಧಾವಿಸಬೇಕೆಂದು ಮನವಿ ಮಾಡಿದರು.

ಶಾಸಕ ಬಸವಂತಪ್ಪ ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವರು ಈ ಬಗ್ಗೆ ಕ್ರಮ ತೆಗೆದುಕೊಂಡು ಕೆರೆಗಳ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

- - -

-17ಕೆಡಿವಿಜಿ38, 39:

ದಾವಣಗೆರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಗತ್ಯ ಅನುದಾನ ಬಿಡುಗಡೆಗೆ ಕೋರಿ ಶಾಸಕ ಕೆ.ಎಸ್.ಬಸವಂತಪ್ಪ ಅವರು ಸಿಎಂ, ಡಿಸಿಎಂ ಅವರಿಗೆ ಮನವಿ ಸಲ್ಲಿಸಿದರು.