ಸಾರಾಂಶ
ಮೂಡುಬಿದಿರೆ : ಮುಖ್ಯಮಂತ್ರಿಯ ಫೋಟೋ ಬಳಸಿ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಕ್ರಂ ಟಿವಿ ಸಂಸ್ಥಾಪಕ ಮಹೇಶ್ ವಿಕ್ರಮ್ ಹೆಗ್ಡೆಯನ್ನು ಮೂಡುಬಿದಿರೆ ಪೊಲೀಸರು ಶುಕ್ರವಾರ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಮೂಡುಬಿದಿರೆ ಪಿಎಸ್ಸೈ ಕೃಷ್ಣಪ್ಪ ಅವರ ದೂರಿನಡಿ ಸ್ವಯಂಪ್ರೇರಿತ ಎಫ್ಐಆರ್ ದಾಖಲಿಸಲಾಗಿತ್ತು. ಬಂಧಿತ ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಸ್ಥಳೀಯ ಕೋರ್ಟ್ಗೆ ಹಾಜರುಪಡಿಸಿದ್ದು, ಸೋಮವಾರದವರೆಗೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರ ಫೋಟೋವನ್ನು ಎಡಿಟ್ ಮಾಡಿ, ಕೋಮು ಪ್ರಚೋದನೆ ಎಸಗಿದ ಆರೋಪ ಇವರ ಮೇಲಿದೆ. ‘ಮಾನ್ಯ ಮುಖ್ಯಮಂತ್ರಿಗಳೇ, ಒಂದೇ ಒಂದು ಬಾರಿ ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ ಮಸೀದಿಯ ಮೇಲೆ ಬುಲ್ಡೋಜರ್ ನುಗ್ಗಿಸುವ ಧೈರ್ಯ ಮಾಡಿ ನೋಡಿ. ಮುಂದಿನ ವರ್ಷ ರಾಜ್ಯದ ಯಾವ ಮೂಲೆಯಲ್ಲೂ ಇಂತಹ ಪ್ರಕರಣ ಮರುಕಳಿಸಲ್ಲ’ ಎಂದು ಪೋಸ್ಟ್ ಹಾಕಿದ್ದರು.
ಈ ಪೋಸ್ಟ್, ಎರಡು ಧರ್ಮಗಳ ನಡುವೆ ವೈರತ್ವ ಮತ್ತು ದ್ವೇಷ ಭಾವನೆ ಮೂಡಿಸಿ ಕೋಮುಗಲಭೆ ಸೃಷ್ಟಿಸುವ ಹಾಗೂ ಸಮಾಜದ ಶಾಂತಿ ಸುವ್ಯವಸ್ಥೆಯನ್ನು ಹದಗೆಡಿಸುವ ಉದ್ದೇಶ ಹೊಂದಿದೆ ಎಂದು ಆರೋಪಿಸಲಾಗಿದೆ. ಇದರನ್ವಯ ಅವರ ವಿರುದ್ಧ ಬಿಎನ್ಎಸ್ 353(2) ಅಡಿ ಸೆ.9 ರಂದು ಮೂಡುಬಿದಿರೆ ಠಾಣೆಯಲ್ಲಿ ಕೇಸು ದಾಖಲಿಸಲಾಗಿತ್ತು.