ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
ಮಾ.1 ರಿಂದ 22ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ವ್ಯವಸ್ಥಿತ ಮತ್ತು ಸುಸೂತ್ರವಾಗಿ ಪರೀಕ್ಷೆ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಪೂರ್ವಸಿದ್ಧತಾ ಸಭೆ ನಡೆಸಲಾಯಿತು. ಸಭೆಯಲ್ಲಿ ಪರೀಕ್ಷೆಗೆ ಸಂಬಂಧಿಸಿದಂತೆ ನಿಯೋಜಿತ ಅಧಿಕಾರಿಗಳಿಗೆ ಅಪರ ಡಿಸಿ ಸಲಹೆ ಸೂಚನೆಗಳನ್ನ ಕೊಟ್ಟಿದ್ದಾರೆ. ಜಿಲ್ಲೆಯ 59 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಒಟ್ಟು 31,921 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷಾ ದಿನಗಳಂದು ಜಿಲ್ಲಾ ಭದ್ರತಾ ಕೊಠಡಿಯಿಂದ ಗೌಪ್ಯ ಬಂಡಲ್ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ರವಾನಿಸಲು 22 ರೂಟ್ಗಳನ್ನು ಮಾಡಲಾಗಿದೆ. ತಹಶೀಲ್ದಾರರು, ಉಪ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರು, ಹಿರಿಯ ಉಪನ್ಯಾಸಕರನ್ನ ಒಳಗೊಂಡ ತ್ರಿ-ಸದಸ್ಯ ಸಮಿತಿ ರಚಿಸಿಲಾಗಿದೆ. ತ್ರಿ-ಸದಸ್ಯ ಸಮಿತಿ ಸದಸ್ಯರು ತಮಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅವರು ಸೂಚಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ಅನುಕೂಲಕ್ಕಾಗಿ
ಕುಡಿಯುವ ನೀರು, ವಿದ್ಯುತ್ ಸೌಕರ್ಯ, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳ ಕುರಿತು ಮುಂಚಿತವಾಗಿ ಪರಿಶೀಲನೆ ಮಾಡಬೇಕು. ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗಬಾರದು. ಈ ಬಗ್ಗೆ ಮುಂಜಾಗ್ರತಾ ಹೆಚ್ಚಿನ ಕ್ರಮವಹಿಸಬೇಕು ಎಂದು ತಿಳಿಸಿದರು.ಎಲ್ಲ ಕೊಠಡಿಗಳಿಗೆ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಕೊಠಡಿ ಮೇಲ್ವಿಚಾರಕರು ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಪರೀಕ್ಷೆಗಳು ಅತ್ಯಂತ ಸುಸೂತ್ರವಾಗಿ ನಡೆಸಲು ಎಲ್ಲ ಅಗತ್ಯಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಈ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ್ ಮಾರಿಹಾಳ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಕೆ.ಹೊಸಮನಿ, ಪ್ರಾಂಶುಪಾಲ ಕೆ.ಎ.ಉಪ್ಪಾರ, ಜಿಲ್ಲೆಯ ತಹಸೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರಸಮನ್ವಯಾಧಿಕಾರಿಗಳು, ಪ್ರಶ್ನೆ ಪತ್ರಿಕೆ ವಿತರಣಾ ತಂಡದ ಪ್ರಾಚಾರ್ಯರು ಹಾಗೂ ಉಪನ್ಯಾಸಕರು, ಪರೀಕ್ಷಾ ಉಪ ಮುಖ್ಯಅಧೀಕ್ಷಕರು ಉಪಸ್ಥಿತರಿದ್ದರು.ಕೋಟ್....ಪರೀಕ್ಷೆಗಳು ಅತೀ ಸೂಕ್ಷ್ಮವಾದ ಪ್ರಕ್ರಿಯೆ. ಈ ನಿಟ್ಟಿನಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷೆ ಕೇಂದ್ರಗಳಿಗೆ ನಿಗದಿತ ಅವಧಿಯೊಳಗೆ ತಲುಪಿಸಬೇಕು. ಪ್ರಶ್ನೆ
ಪತ್ರಿಕೆಗಳನ್ನು ತೆಗೆದುಕೊಂಡು ಹೋಗುವ ವಾಹನಗಳಿಗೆ ಜಿಪಿಎಸ್ ಅಳವಡಿಕೆ, ನಿಗದಿತ ಮಾರ್ಗದಲ್ಲಿ ಚಲಿಸಿ, ನಿಖರ ಸಮಯಕ್ಕೆ ತಲುಪಿಸಬೇಕು. ಪರೀಕ್ಷೆ ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿ ಮತ್ತು ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಿ, ಪರೀಕ್ಷೆಯ ನಿಗದಿತ ಸಮಯಕ್ಕೆ ಮುಂಚಿತವಾಗಿ ಹಾಜರಿರಬೇಕು. ಪರೀಕ್ಷಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುವವರು ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಿರಬೇಕು.ಮಹಾದೇವ ಮುರಗಿ, ಅಪರ ಜಿಲ್ಲಾಧಿಕಾರಿ.