ಸಾರಾಂಶ
ಕುಷ್ಟಗಿ: ಅಪರಾಧಗಳನ್ನು ತಡೆಯುವುದಕ್ಕೆ ಪೊಲೀಸರ ಜೊತೆಗೆ ಸಾರ್ವಜನಿಕರ ಸಹಕಾರವೂ ಬೇಕು ಎಂದು ಪಿಎಸೈ ಮಾನಪ್ಪ ವಾಲ್ಮೀಕಿ ಹೇಳಿದರು.ಪಟ್ಟಣದ ಗವಿಸಿದ್ದೇಶ್ವರ ಪ್ರೌಢಶಾಲೆಯಲ್ಲಿ ನಡೆದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಡಿಸೆಂಬರ್ ಮಾಹೆಯನ್ನು ಅಪರಾಧ ಮಾಸಾಚರಣೆಯನ್ನಾಗಿ ಆಚರಿಸಲಾಗುತ್ತದೆ ಎಂದರು.ಈ ಹಿಂದೆ ಪೋಲಿಸರು ಎಂದರೆ ಭಯವಿತ್ತು. ಆದರೆ ಈಗ ಕರ್ನಾಟಕ ಪೊಲೀಸರು ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪೊಲೀಸರಿಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಅಪರಾಧಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದು, ಅಪರಾಧಗಳು ಆಗದಂತೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅರಿವು ಮೂಡಿಸಲು ಅಪರಾಧ ತಡೆ ಮಾಸಾಚರಣೆ ಆಚರಿಸಲಾಗುತ್ತಿದೆ ಎಂದರು.ಅಪರಾಧಗಳು ನಡೆದ ಮೇಲೆ ತನಿಖೆ ನಡೆಸುವುದಕ್ಕಿಂತ, ಅಪರಾಧ ಆಗದಂತೆ ನೋಡಿಕೊಳ್ಳುವುದು. ಉತ್ತಮ ಯಾವುದೇ ಅಪರಾಧವನ್ನು ಕಂಡಿದ್ದ ಸಂದರ್ಭದಲ್ಲಿ ಧೈರ್ಯವಾಗಿ ಮುಂದೆ ಬಂದು ಸಾಕ್ಷಿ ಹೇಳಬೇಕು. ಒಂದು ವೇಳೆ ಹೀಗಾಗದಿದ್ದರೆ, ಸಾಕ್ಷ್ಯಾಧಾರಗಳ ಕೊರತೆಯಿಂದ ತಪ್ಪಿತಸ್ಥರು ತಪ್ಪಿಸಿಕೊಂಡು ಮತ್ತೆ ಮತ್ತೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಲಿದ್ದಾರೆ ಎಂದರು.ಅಪರಾಧದ ಕುರಿತು ಸಮಗ್ರ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಕರ್ನಾಟಕ ಪೊಲೀಸ್ ಜಾಗೃತಿ ಹಾಗೂ ಉತ್ತಮ ರೀತಿಯಿಂದ ಕಾರ್ಯ ಮಾಡುತ್ತಿದೆ ಎಂದರು.ಈ ಸಂದರ್ಭದಲ್ಲಿ ಶಾಲೆಯ ಮುಖ್ಯಸ್ಥ ಕೆ.ಬಿ. ಸ್ಥಾವರಮಠ, ವರುಣಕುಮಾರ, ರಾಜಾ ಲಮಾಣಿ, ಪ್ರತಿಭಾ ಹಿರೇಮಠ, ಮಹೇಶ ಹಡಪದ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.