ಸಾರಾಂಶ
ಹಾವೇರಿ: ಮುಂಬರುವ 2026ರಲ್ಲಿ ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆ ಆರಂಭವಾಗಲಿದ್ದು, ಮತದಾರರ ಪಟ್ಟಿಯು ಕ್ರಮಬದ್ಧವಾಗಿ ಮತ್ತು ನ್ಯಾಯಬದ್ಧವಾಗಿ ತಯಾರಾಗುವಂತೆ ಮಾಡುವಲ್ಲಿ ರಾಜಕೀಯ ಪಕ್ಷಗಳ ಹಾಗೂ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯ ಕೋರ್ಟ್ ಹಾಲ್ನಲ್ಲಿ ಜಿಲ್ಲೆಯ ವಿವಿಧ ರಾಷ್ಟ್ರೀಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪದವೀಧರ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ 2025ಕ್ಕೂ ಮುಂಚೆ ಕನಿಷ್ಠ 3 ವರ್ಷದ ಪದವಿ ಮುಗಿಸಿರಬೇಕು. ಭಾರತದ ಪ್ರಜೆಯಾಗಿರಬೇಕು, ಆಯಾ ಮತಕ್ಷೇತ್ರದೊಳಗಡೆ ವಾಸಿಸುತ್ತಿರುವ ಹಾಗೂ 1ನೇ ನವೆಂಬರ್ 2025ಕ್ಕೂ ಮುಂಚೆ ಕನಿಷ್ಠ ಮೂರು ವರ್ಷ ಮೊದಲು ವಿಶ್ವವಿದ್ಯಾಲಯದ ಪದವೀಧರನಾಗಿರಬೇಕು. ಇಂತಹ ಪ್ರತಿಯೊಬ್ಬ ವ್ಯಕ್ತಿಯೂ ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಅರ್ಹರಾಗಿರುತ್ತಾರೆ ಎಂದರು.ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಮತದಾರರ ಪಟ್ಟಿ ತಯಾರಿಕೆ ಕುರಿತು ಸೂಚನೆಗಳನ್ನು ಹೊರಡಿಸಿದ್ದು, ಅವುಗಳ ಪ್ರತಿ ಎಲ್ಲ ನೋಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ನೀಡಲಾಗಿದೆ. ಈ ಕುರಿತು ಅರ್ಹ ಪದವೀಧರ ಮತದಾರರಲ್ಲಿ ಜಾಗೃತಿ ಮೂಡಿಸಿ, ನಿಯಮಾನುಸಾರ ಮತದಾರರ ಪಟ್ಟಿಗೆ ಸೇರ್ಪಡೆ ಆಗುವಂತೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.ಡಿ.30ಕ್ಕೆ ಅಂತಿಮ ಪಟ್ಟಿ ಸಿದ್ಧ: ಮತದಾರರ ಪಟ್ಟಿ ಸೇರ್ಪಡೆಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸುವ ನಮೂನೆಯನ್ನು ಈಗಾಗಲೇ ಜಿಲ್ಲೆಯ ಎಲ್ಲಾ ತಾಲೂಕು ತಹಸೀಲ್ದಾರ್ ಕಾರ್ಯಾಲಯದಲ್ಲಿ ನಿಯೋಜಿಸಿರುವ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಲಭ್ಯವಿದೆ. ಮತದಾರರ ಪಟ್ಟಿ ತಯಾರಿಕೆ ನಂತರ ನ. 25ರಂದು ಈ ಮತಕ್ಷೇತ್ರದ ಮತದಾರರ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು, ನ. 25ರಿಂದ ಡಿ.10ರ ವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಆಕ್ಷೇಪಣೆಗಳನ್ನು ಡಿ.25ರೊಳಗೆ ವಿಲೇವಾರಿ ಮಾಡಲಾಗುತ್ತದೆ. ಡಿ.30 ರಂದು ಮತದಾರರ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್, ಚುನಾವಣಾ ತಹಸೀಲ್ದಾರ್ ಅಮೃತಗೌಡ ಪಾಟೀಲ, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಜರಿದ್ದರು.