ಕನ್ನಡಪ್ರಭ ವಾರ್ತೆ ಬೇಲೂರು

ತಾಲೂಕು ಕಚೇರಿ ಆವರಣದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡರ ಸಮ್ಮುಖದಲ್ಲಿ ಜನಸ್ಪಂದನ ಕಾರ್ಯಕ್ರಮಕ್ಕೆ ಭಾರೀ ಸಿದ್ಧತೆ ನಡೆಯುತ್ತಿದ್ದು ತಹಸೀಲ್ದಾರ್‌ ಶ್ರೀಧರ್‌ ಕಂಕಣವಾಡಿ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.ಸ್ಥಳ ಪರಿಶೀಲನೆ ನಡೆಸಿದ ತಹಸೀಲ್ದಾರ್‌ ಶ್ರೀಧರ್‌ ಕಂಕಣವಾಡಿ ಮಾತನಾಡಿ, ಇಂದು (ಏ.10) ಬೆಳಿಗ್ಗೆ 10 ಗಂಟೆಗೆ ತಾಲೂಕು ಕಚೇರಿಯ ಹಿಂಭಾಗದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ಬೆಳಿಗ್ಗೆ 9 ಗಂಟೆಯಿಂದಲೇ ಅರ್ಜಿ ಸ್ವೀಕಾರ ಕೇಂದ್ರದಲ್ಲಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು. ಸ್ಥಳೀಯ ಶಾಸಕರು, ಸಂಸದರು, ಜಿಲ್ಲಾಧಿಕಾರಿಗಳು ಜಿಲ್ಲಾ ಪಂಚಾಯ್ತಿ ಸಿಇಒ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಎಡಿಸಿ, ಎಸಿ ಸೇರಿದಂತೆ ತಾಲೂಕು ಮತ್ತು ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಕಂದಾಯ, ಪಂಚಾಯತ್ ರಾಜ್, ಪುರಸಭೆ, ಕೃಷಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲೇ ಲಭ್ಯವಿದ್ದು, ಮಾನವ-ವನ್ಯಜೀವಿ ಸಂಘರ್ಷದ ಅಹವಾಲುಗಳಿಗೂ ಸ್ಪಂದನೆ ನೀಡಲಾಗುತ್ತದೆ.ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ನೀರು, ಆಸನ ವ್ಯವಸ್ಥೆ ಹಾಗೂ ಮಧ್ಯಾಹ್ನ ಉಪಹಾರದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಹಿಂದಿನ ಹಾಸನ, ಸಕಲೇಶಪುರ ಹಾಗೂ ಚನ್ನರಾಯಪಟ್ಟಣದಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಸಾವಿರಾರು ಅರ್ಜಿಗಳು ಬಂದ ಹಿನ್ನೆಲೆ, ಬೇಲೂರಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಅಹವಾಲುಗಳು ಬರುವ ನಿರೀಕ್ಷೆಯಿದೆ ಎಂದರು.ಪಿಐ ರೇವಣ್ಣ ಮಾತನಾಡಿ, ಸಾರ್ವಜನಿಕರ ಸುಗಮತೆಗೆ ಪೊಲೀಸ್ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದರು. ವಿಐಪಿ ವಾಹನಗಳಿಗೆ ಮಾತ್ರ ಕಚೇರಿ ಆವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಇರಲಿದ್ದು, ಉಳಿದ ವಾಹನಗಳನ್ನು ಎದುರಿನ ಪೊಲೀಸ್ ಮೈದಾನದಲ್ಲಿ ಗೊಂದಲ ತಪ್ಪಿಸಲು ಒಂದೇ ಸಮಯದಲ್ಲಿ 50 ಜನರನ್ನು ಮಾತ್ರ ಸಾಲಿನಲ್ಲಿ ಬಿಡುವ ವ್ಯವಸ್ಥೆ ಮಾಡಲಾಗಿದ್ದು, ಊಟದ ಸ್ಥಳದಲ್ಲಿ ತಳ್ಳಾಟವಾಗದಂತೆ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಅಗತ್ಯ ಪೊಲೀಸ್ ಸಿಬ್ಬಂದಿ ನಿಯೋಜನೆ ಕುರಿತು ಲೆಕ್ಕಾಚಾರ ನಡೆಯುತ್ತಿದೆ ಎಂದರು.ಈ ವೇಳೆ ಪಿಎಸ್ಐ ಎಸ್.ಜಿ. ಪಾಟೀಲ್, ಮುಖ್ಯಾಧಿಕಾರಿ ಬಸವರಾಜು ಶಿಗ್ಗಾಂವಿ, ಆರೋಗ್ಯಾಧಿಕಾರಿ ಲೋಹಿತ್ ಸೇರಿದಂತೆ ಇತರ ಅಧಿಕಾರಿಗಳು ಹಾಜರಿದ್ದರು.