ಜನಸ್ಪಂದನ ಕಾರ್ಯಕ್ರಮ: 108 ಅರ್ಜಿಗಳು ಸ್ವೀಕಾರ

| Published : Jun 21 2024, 01:05 AM IST

ಸಾರಾಂಶ

ವಿಧವೆಯರು, ವೃದ್ಧರು ಹಾಗೂ ವಿಶೇಷಚೇತನರಿಗೆ ಸಂಬಂಧಿಸಿದ ಪಿಂಚಣಿ ದೊರೆಯುವಂತೆ ಸಂಬಂಧ ಅಗತ್ಯ ಕ್ರಮ ವಹಿಸಬೇಕು. ಮೈಸೂರು ಜಿಲ್ಲೆಯ ಸ್ವಚ್ಛತೆಗೆ ಸಂಬಂಧಿಸಿದಂತೆ ಅಧಿಕಾರಿಗಳು ತುರ್ತಾಗಿ ಕ್ರಮ ವಹಿಸಬೇಕು ಹಾಗೂ ಸಾರ್ವಜನಿಕರಿಗೆ ಯಾವುದೇ ಸರ್ಕಾರಿ ಯೋಜನೆಯನ್ನು ನೀಡುವುದಕ್ಕೂ ಮೊದಲು ಅಗತ್ಯ ದಾಖಲೆಗಳನ್ನು ಕೂಲಂಕುಶವಾಗಿ ಪರಿಶೀಲಿಸಿ, ಅರ್ಹ ಫಲಾನುಭವಿಗಳಿಗೆ ಯೋಜನೆಗಳು ದೊರಕುವಂತೆ ಮಾಡಬೇಕು.

ಕನ್ನಡಪ್ರಭ ವಾರ್ತೆ ಮೈಸೂರು

ಮೈಸೂರು ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆತಿದ್ದು, 108 ಅರ್ಜಿಗಳನ್ನು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಖುದ್ದು ಸ್ವೀಕರಿಸಿ, ಒಂದು ವಾರದ ಒಳಗೆ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ವಹಿಸಬೇಕು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸಿದ್ದಾರ್ಥನಗರದಲ್ಲಿರುವ ತಮ್ಮ ಕಚೇರಿಯ ಆವರಣದಲ್ಲಿ ಗುರುವಾರ ನಡೆದ ಮೈಸೂರು ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಕುಂದು ಕೊರತೆಗಳ ಅರ್ಜಿಯನ್ನು ಪರಿಶೀಲಿಸಿ ಮಾತನಾಡಿದ ಅವರು, ಕೆಲವು ಸ್ಮಶಾನಗಳನ್ನು ಕೆರೆಗಳಾಗಿ ಮಾರ್ಪಾಡು ಮಾಡಲಾಗಿದ್ದು, ಅಂತಹ ಸ್ಮಶಾನಗಳಿಗೆ ಪರ್ಯಾಯ ಸ್ಥಳವನ್ನು ನಿಗದಿ ಮಾಡಿ ಕೆರೆಯನ್ನು ರಕ್ಷಿಸುವ ಕೆಲಸ ಆಗಬೇಕು. ಯಾವುದೇ ಸರ್ಕಾರಿ ಕಟ್ಟಡಗಳನ್ನು ಕೆಡವಲು ಮಾಡುವ ಮೊದಲು ಕಟ್ಟಡದ ಕುಂದು ಕೊರತೆಯನ್ನು ತಿಳಿಸಿ, ತಾಂತ್ರಿಕ ಇಲಾಖೆಯಿಂದ ಅನುಮತಿಯನ್ನು ಪಡೆದು ನಂತರದಲ್ಲಿ ಕೆಡವಲು ಮುಂದಾಗಬೇಕು ಎಂದು ಸೂಚಿಸಿದರು.

ಧಾರಾಕಾರ ಮಳೆಯಿಂದ ಹಾನಿಯಾಗಿ ನಷ್ಟ ಅನುಭವಿಸಿದ್ದ ಸಾರ್ವಜನಿಕರಿಗೆ ಈಗಾಗಲೇ ಸಹಾಯಧನವನ್ನು ತಲುಪಿಸುವ ಕಾರ್ಯ ನಡೆಯುತ್ತಿದ್ದು, ಶೀಘ್ರದಲ್ಲಿಯೇ ಸಹಾಯಧನ ಅರ್ಹ ಸಾರ್ವಜನಿಕರಿಗೆ ತಲುಪಲಿದೆ ಎಂದರು.

ಪಿಂಚಣಿಗೆ ಕ್ರಮ ವಹಿಸಿ:

ಶಾಸಕ ತನ್ವೀರ್ ಸೇಠ್ ಮಾತನಾಡಿ, ವಿಧವೆಯರು, ವೃದ್ಧರು ಹಾಗೂ ವಿಶೇಷಚೇತನರಿಗೆ ಸಂಬಂಧಿಸಿದ ಪಿಂಚಣಿ ದೊರೆಯುವಂತೆ ಸಂಬಂಧ ಅಗತ್ಯ ಕ್ರಮ ವಹಿಸಬೇಕು. ಮೈಸೂರು ಜಿಲ್ಲೆಯ ಸ್ವಚ್ಛತೆಗೆ ಸಂಬಂಧಿಸಿದಂತೆ ಅಧಿಕಾರಿಗಳು ತುರ್ತಾಗಿ ಕ್ರಮ ವಹಿಸಬೇಕು ಹಾಗೂ ಸಾರ್ವಜನಿಕರಿಗೆ ಯಾವುದೇ ಸರ್ಕಾರಿ ಯೋಜನೆಯನ್ನು ನೀಡುವುದಕ್ಕೂ ಮೊದಲು ಅಗತ್ಯ ದಾಖಲೆಗಳನ್ನು ಕೂಲಂಕುಶವಾಗಿ ಪರಿಶೀಲಿಸಿ, ಅರ್ಹ ಫಲಾನುಭವಿಗಳಿಗೆ ಯೋಜನೆಗಳು ದೊರಕುವಂತೆ ಮಾಡಬೇಕು ಎಂದು ತಿಳಿಸಿದರು.

ವೇಗವಾಗಿ ಬೆಳೆಯುತ್ತಿರುವ ನಗರವಾಗಿರುವ ಮೈಸೂರು ಅಭಿವೃದ್ಧಿಯ ಕಾರ್ಯಗಳಿಂದ ರಾಜ್ಯಕ್ಕೆ ಮಾದರಿಯಾಗಬೇಕು. ಯಾವುದೇ ಸಮಸ್ಯೆಯಾದರೂ ದೀರ್ಘಾವಧಿಯವರೆಗೆ ಮುಂದುವರೆಯದಂತೆ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಬೇಕು. ಈ ವಿಷಯವಾಗಿ ಸರ್ಕಾರ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಹಕಾರ ಇರುತ್ತದೆ ಎಂದು ಅವರು ಹೇಳಿದರು.

ಶಾಸಕರಾದ ಜಿ.ಟಿ.ದೇವೇಗೌಡ, ಸಿ.ಎನ್. ಮಂಜೇಗೌಡ, ಕೆ.ವಿವೇಕಾನಂದ, ಜಿಪಂ ಸಿಇಒ ಕೆ.ಎಂ. ಗಾಯತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಅಶಾದ್ ಉರ್ ರೆಹಮಾನ್ ಶರೀಫ್, ಡಿಸಿಪಿ ಎಸ್. ಜಾಹ್ನವಿ ಮೊದಲಾದವರು ಇದ್ದರು.ಜಿಲ್ಲೆಯಲ್ಲಿ ಎಲ್ಲಾ ಅಧಿಕಾರಿಗಳು ತಮ್ಮ ಕೆಲಸವನ್ನು ನಿಷ್ಠೆಯಿಂದ ನಿರ್ವಹಿಸಿದರೆ ಸಮಸ್ಯೆಗಳನ್ನು ಬೇಗನೆ ಬಗೆಹರಿಸಬಹುದಾಗಿದೆ. ಹೀಗಾಗಿ, ಪ್ರತಿಯೊಬ್ಬ ಅಧಿಕಾರಿಯೂ ಬಹಳ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಇಲ್ಲವಾದರೆ ಮುಂದಿನ ಪರಿಣಾಮಕ್ಕೆ ಸ್ವತಃ ಅಧಿಕಾರಿಗಳೇ ಜವಾಬ್ದಾರರಾಗಿರುತ್ತಾರೆ.

- ತನ್ವೀರ್ ಸೇಠ್, ಶಾಸಕ

ಗೊಂದಲದ ಗೂಡಾದ ಜನಸ್ಪಂದನ

ಮೈಸೂರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ನಡೆದ ಮೈಸೂರು ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವು ಕೆಲಕಾಲ ಗೊಂದಲದ ಗೂಡಾಗಿತ್ತು.

ಕಾರ್ಯಕ್ರಮ ಆರಂಭದಲ್ಲಿ ಶಾಸಕ ತನ್ವೀರ್ ಸೇಠ್ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತಿದ್ದರು. ಈ ವೇಳೆ ತನ್ವೀರ್ ಸೇಠ್ ಕೈಯಲ್ಲಿದ್ದ ಮೈಕ್ ಕಿತ್ತುಕೊಂಡ ಶಾಸಕ ಜಿ.ಟಿ. ದೇವೇಗೌಡ ಅವರು, ಜನರು ತಮ್ಮ ಸಮಸ್ಯೆ ಹೇಳಿಕೊಳ್ಳಲು ಬಂದಿದ್ದಾರೆ. ನಾವಿಲ್ಲಿ ನಮ್ಮದೇ ಭಾಷಣ ಮಾಡುತ್ತಾ ಕುಳಿತರೆ ಹೇಗೆ? ನಮ್ಮ ಮಾತು ಕೇಳಲಿಕ್ಕೆ ಜನ ಬಂದಿಲ್ಲ. ಜನ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲಿಕ್ಕೆ ಬಂದಿದ್ದಾರೆ ಎಂದರು. ಅಲ್ಲದೆ, ಜನರ ಸಮಸ್ಯೆ ಕೇಳಿ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರಿಗೆ ಗದರಿದರು.