ಸಾರಾಂಶ
ಕನ್ನಡಪ್ರಭವಾರ್ತೆ ಬಾಗಲಕೋಟೆ
ಯಾವುದೇ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಕ್ರಿಯಾಯೋಜನೆ ರೂಪಿಸುವಲ್ಲಿ ಸಾರ್ವಜನಿಕರ ಅಭಿಪ್ರಾಯ ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಹೇಳಿದರು.ಜಿಲ್ಲಾ ಪಂಚಾಯತಿ ನೂತನ ಸಭಾಭವನದಲ್ಲಿ ಶನಿವಾರ ಸಾಮಾಜಿಕ ಪರಿಶೋಧನೆ ನಿರ್ದೇಶನಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಪಂಚಾಯತಿ ಸಹಯೋಗದಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮಸಭೆಯ ಅಧ್ಯಕ್ಷತೆ ವಹಿಸುವ ಅಧಿಕಾರಿಗಳಿಗೆ ಹಮ್ಮಿಕೊಂಡ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ತೆಗೆದುಕೊಳ್ಳಬೇಕಾಗುತ್ತದೆ. ಇದಕ್ಕೆ ಸಾರ್ವಜನಿಕರ ಅಭಿಪ್ರಾಯ ಮುಖ್ಯವಾಗುತ್ತದೆ ಎಂದರು.
ರಸ್ತೆ ಸೇರಿದಂತೆ ಇತರೆ ವಿಶೇಷ ಕಾಮಗಾರಿಗಳ ಅನುಷ್ಠಾನದಲ್ಲಿ ಲೋಪದೋಷ ಕಂಡುಬರದಂತೆ ನೋಡಿಕೊಳ್ಳಬೇಕು. ಕಾಮಗಾರಿ ಅನುಷ್ಠಾನದಲ್ಲಿನ ನೂನ್ಯತೆ ಹಾಗೂ ದಾಖಲೆಗಳ ನಿರ್ವಹಣೆಯಲ್ಲಿ ಲೋಪವಾಗಬಾರದು. ಸರ್ಕಾರದ ಪ್ರತಿಯೊಂದು ಯೋಜನೆಗಳ ಜಾರಿಯಲ್ಲಿ ಪಾರದರ್ಶಕತೆ ಅನುಸರಿಸಬೇಕು. ಹಾಗಾದರೆ ಮಾತ್ರ ಯೋಜನೆಗಳು ಸಫಲತೆ ಹೊಂದಲು ಸಾಧ್ಯವಾಗಲಿದೆ. ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಮುನ್ನ ಗ್ರಾಮಸಭೆಗಳಲ್ಲಿ ಕೈಗೊಳ್ಳುವ ಕಾಮಗಾರಿ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ ಪಡೆಯಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮಸಭೆ ಅಧ್ಯಕ್ಷತೆ ವಹಿಸುವ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿದ್ದು, ತರಬೇತಿಯ ಪೂರ್ಣಪ್ರಮಾಣದ ಲಾಭ ಪಡೆದುಕೊಳ್ಳಬೇಕೆಂದರು.ಜಿಪಂ ಉಪಕಾರ್ಯದರ್ಶಿ ಅಮರೇಶ ನಾಯಕ ಎಂ.ಜಿ.ಎನ್.ಆರ್.ಇ.ಜಿ.ಎ ಯೋಜನೆಯ ಮಾರ್ಗಸೂಚಿ, ಕೂಲಿ ಕಾರ್ಮಿಕರ ಹಕ್ಕು ಮತ್ತು ಆಯವ್ಯಯ, ಕಾಮಗಾರಿ ಪ್ರದರ್ಶನಗಳು, ಕಡ್ಡಾಯವಾಗಿ ಪಾಲಿಸಬೇಕಾದ ಅಂಶಗಳು, ಸಾಮಾಜಿಕ ಪರಿಶೋಧನಾ ನಿಯಮಗಳ ಬಗ್ಗೆ ತಿಳಿಸಿಕೊಟ್ಟರೆ, 15ನೇ ಹಣಕಾಸು ಆಯೋಗದ ಅನುದಾನ ಮಾರ್ಗಸೂಚಿಗಳು ಮತ್ತು ನಿಯಮಾವಳಿಗಳ ಬಗ್ಗೆ ಜಿಪಂ ಮುಖ್ಯ ಯೋಜನಾಧಿಕಾರಿ ಬಿ.ಆರ್. ಪುನಿತ್ ತಿಳಿಸಿಕೊಟ್ಟರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದೇಶಕ ಬಿ.ಕೆ. ನಂದನೂರ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಮಾರ್ಗಸೂಚಿಗಳು ಮತ್ತು ನಿಯಮಾವಳಿ, ಪಿಎಂ ಪೋಷಣ್ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಕೇಶವ ಪೆಟ್ಲೂರ, ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಯೋಜನೆ ಮಾರ್ಗಸೂಚಿ ಮತ್ತು ನಿಯಮಾವಳಿ ಬಗ್ಗೆ ತಿಳಿಸಿಕೊಟ್ಟರು.ಗ್ರಾಮಸಭೆ ಅಧ್ಯಕ್ಷತೆ ವಹಿಸುವ ನೋಡಲ್ ಅಧಿಕಾರಿಗಳ ಪಾತ್ರ ಮತ್ತು ಜವಾಬ್ದಾರಿಗಳ ಬಗ್ಗೆ ಜಿಪಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಬಸವರಾಜ ಔರಸಂಗ ವಿವರಿಸಿದರು.
ಪಶುಪಾಲನೆ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಪಂಚಾಯತ್ ರಾಜ್ ಇಲಾಖೆ, ಅಕ್ಷರ ದಾಸೋಹ, ಗ್ರಾಮೀಣ ಕುಡಿಯುವ ನೀರು ಯೋಜನೆ, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಗ್ರಾಮೀಣ ಉದ್ಯೋಗ ಸೇರಿದಂತೆ ಸಾಮಾಜಿಕ ಅರಣ್ಯ, ತೋಟಗಾರಿಕೆ, ರೇಷ್ಮೆ, ಕೃಷಿ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು. ಬಸವರಾಜ ರಾಜಾಪೂರ ಸ್ವಾಗತಿಸಿದರು. ಬಸವರಾಜ ಔರಸಂಗ ಕಾರ್ಯಕ್ರಮ ನಿರೂಪಿಸಿದರು.ಯು.ಆರ್. ಗೋನಾಳ ಪ್ರಾರ್ಥನೆ ಗೀತೆ ಹಾಡಿದರು.