ತಾಲೂಕಿನ ಗುಡುದೂರು ಹೋಬಳಿ ವ್ಯಾಪ್ತಿಯಲ್ಲಿ ಶನಿವಾರ ತಹಸೀಲ್ದಾರ್ ಮಂಜುನಾಥ ಭೋಗಾವತಿ ನೇತೃತ್ವದಲ್ಲಿ ‘ಪ್ರಜಾ ಸೇವೆ ಆಂದೋಲನ–2026’ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಮಸ್ಕಿ

ತಾಲೂಕಿನ ಗುಡುದೂರು ಹೋಬಳಿ ವ್ಯಾಪ್ತಿಯಲ್ಲಿ ಶನಿವಾರ ತಹಸೀಲ್ದಾರ್ ಮಂಜುನಾಥ ಭೋಗಾವತಿ ನೇತೃತ್ವದಲ್ಲಿ ‘ಪ್ರಜಾ ಸೇವೆ ಆಂದೋಲನ–2026’ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ವಿವಿಧ ಇಲಾಖೆಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಒಟ್ಟು 23 ಕುಂದುಕೊರತೆ ಅರ್ಜಿಗಳನ್ನು ಸ್ವೀಕರಿಸಲಾಯಿತು. ಕಂದಾಯ ಇಲಾಖೆಯ ಸಾಮಾಜಿಕ ಭದ್ರತಾ ಯೋಜನೆಗಳಿಗೆ 4, ಭೂ ದಾಖಲೆ ವಿಭಾಗಕ್ಕೆ 2, ಆರ್‌ಟಿಸಿ ವಿಭಾಗಕ್ಕೆ 1, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 5 ಹಾಗೂ ನೀರಾವರಿ ಇಲಾಖೆಗೆ 10 ಅರ್ಜಿಗಳು ಸಲ್ಲಿಕೆಯಾದವು.

ಸೆ.5ರಂದು ಸಾರ್ವಜನಿಕರಿಂದ ಸ್ವೀಕರಿಸಲಾಗಿದ್ದ ಅರ್ಜಿಗಳ ಕುರಿತು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ, ನಿಯಮಾನುಸಾರ ಅರ್ಜಿಗಳ ವಿಲೇವಾರಿಗೆ ಕ್ರಮ ಕೈಗೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ತಹಸಿಲ್ದಾರ್ ಮಂಜುನಾಥ್ ಭೋಗಾವತಿ ಮಾತನಾಡಿ, ರಾಜ್ಯ ಸರ್ಕಾರ ಜನರ ಸಮಸ್ಯೆಗಳನ್ನು ತ್ವರಿತವಾಗಿ ಸ್ಥಳದಲ್ಲಿಯೇ ಇತ್ಯರ್ಥ ಮಾಡಲು ಪ್ರಜಾ ಸೇವೆಯನ್ನು ಆರಂಭಿಸಿದ್ದು, ಇದರಿಂದ ರೈತರು ಹಾಗೂ ಕೂಲಿ ಕಾರ್ಮಿಕರು ಸೇರಿದಂತೆ ದಿನವಿಡೀ ಕೆಲಸ ಬಿಟ್ಟು ಅಲೆದಾಡುವುದು ತಪ್ಪುತ್ತದೆ. ನಿಮ್ಮ ಗ್ರಾಮದಲ್ಲಿಯೇ ನಿಮ್ಮ ಸಮಸ್ಯೆ ನಿವಾರಣೆಯಾಗಲಿದೆ, ಆದ್ದರಿಂದ ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಮುಂಬರುವ ದಿನಗಳಲ್ಲಿ ತಾಲೂಕಿನಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸುವುದಕ್ಕಾಗಿ ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಇಒ ಶಿವಾನಂದರಡ್ಡಿ, ಗ್ಯಾರಂಟಿ ಸಮಿತಿ ಯೋಜನೆಯ ತಾಲೂಕು ಅಧ್ಯಕ್ಷ ಮಹಬೂಬ್ ಸಾಬ್ ಮುದ್ದಾಪುರ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ದಾವಲಸಾಬ್ ಮುದ್ದಾಪುರ, ನೀರಾವರಿ ಇಲಾಖೆಯ ದಾವುದ್, ಜೆಸ್ಕಾಂ ಇಲಾಖೆಯ ವೆಂಕಟೇಶ್, ಬಳಗಾನೂರು ಠಾಣೆಯ ಪಿಎಸ್ಐ ಯರಿಯಪ್ಪ, ಸೇರಿದಂತೆ ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.