ಸಾರಾಂಶ
ಕನ್ನಡಪ್ರಭ ವಾರ್ತೆ ಭದ್ರಾವತಿ
ಪ್ರಪಂಚದಲ್ಲಿ ಯಾವುದೇ ಸರ್ಕಾರ ರೂಪಿಸದ ಜನಪರ ಯೋಜನೆಗಳನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ರೂಪಿಸಿದ್ದು, ಸರ್ಕಾರದ 5 ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ಬಿ.ಕೆ. ಸಂಗಮೇಶ್ವರ್ ಮನವಿ ಮಾಡಿದರು.ಬುಧವಾರ ತಾಪಂ ಆವರಣದಲ್ಲಿ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಹಾಗೂ ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷರ, ಸದಸ್ಯರ ಕಚೇರಿ ಉದ್ಘಾಟಿಸಿ ಮಾತನಾಡಿದರು.
ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗುವ ನಿಟ್ಟಿನಲ್ಲಿ ನೂತನ ಕಛೇರಿ ಆರಂಭಿಸಲಾಗಿದ್ದು, ಸರ್ಕಾರದ ಮಾರ್ಗ ಸೂಚಿಗಳ ಅನುಸಾರವಾಗಿ ಯೋಜನೆಗಳು ಪ್ರತಿಯೊಬ್ಬ ಅರ್ಹರಿಗೂ ತಲುಪಬೇಕೆಂದರು.ದೇಶದಲ್ಲಿ ಬಿಜೆಪಿ ಸರ್ಕಾರ ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದಿಸುವ ಬದಲು ಶ್ರೀಮಂತರ ಪರವಾಗಿ ಶ್ರಮಿಸುತ್ತಿದ್ದು, ಅಲ್ಲದೆ ಕೋಮುವಾದಿ ಆಡಳಿತದ ಮೂಲಕ ದೇಶದಲ್ಲಿ ಆಶಾಂತಿ ವಾತಾವರಣ ಉಂಟು ಮಾಡುತ್ತಿದೆ. ಇಂತಹ ಸರ್ಕಾರಕ್ಕೆ ಜನರು ಭವಿಷ್ಯದಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಹಾಗೂ ಬಗರ್ ಹುಕುಂ ಸಮಿತಿ ತಾಲೂಕು ಅಧ್ಯಕ್ಷ ಎಸ್. ಮಣಿಶೇಖರ್ ಮಾತನಾಡಿ, ಕ್ಷೇತ್ರದಾದ್ಯಂತ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಕುರಿತು ಪ್ರತಿಯೊಬ್ಬರಿಗೂ ಮಾಹಿತಿ ತಲುಪಿಸುವ ಜೊತೆಗೆ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಹೆಚ್ಚಿನ ಶ್ರಮವಹಿಸಲಾಗುವುದು. ಇದೆ ರೀತಿ ಬಗರ್ ಹುಕುಂ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ ಸಾಗುವಳಿ ಚೀಟಿ ಹೊಂದಿಲ್ಲದ ರೈತರಿಗೆ ಸಾಗುವಳಿ ಚೀಟಿ ನೀಡಲು ಹೆಚ್ಚಿನ ಗಮನ ಹರಿಸಲಾಗುವುದು ಎಂದರು.ವಿಧಾನಪರಿಷತ್ ಸದಸ್ಯೆ ಬಲ್ಕೀಶ್ ಬಾನು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಂದ್ರಭೂಪಾಲ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ.ಗಂಗಣ್ಣ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನಟರಾಜ್, ಡಿಎಸ್ಎಸ್ ಮುಖಂಡರಾದ ಸತ್ಯ ಭದ್ರಾವತಿ, ಚಿನ್ನಯ್ಯ, ಕೆ. ರಂಗನಾಥ್, ಮುಖಂಡರಾದ ಅರುಣ್ ಕುಮಾರ್, ಎಚ್. ರವಿಕುಮಾರ್, ಮುಸ್ವೀರ್ ಬಾಷಾ, ಮುರುಗೇಶ್, ಎಸ್. ಮಂಜುನಾಥ್, ಕೃಷ್ಣನಾಯ್ಕ, ಅಮೀರ್ ಜಾನ್ ಹಾಗೂ ನಗರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.