ಜಿಲ್ಲೆಯಾದ್ಯಂತ ಇದೇ ಡಿ. 21ರಂದು ಪಲ್ಸ್‌ ಪೊಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಜಿಲ್ಲೆಯಾದ್ಯಂತ ಇದೇ ಡಿ. 21 ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ.

ಇತ್ತೀಚೆಗೆ ವಿಡಿಯೋ ಸಂವಾದ ಮೂಲಕ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಪಲ್ಸ್ ಪೋಲಿಯೋ ಲಸಿಕೆಯು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಇದರ ಯಶಸ್ಸಿಗೆ ಎಲ್ಲಾ ಇಲಾಖೆಗಳು, ಸಂಘ ಸಂಸ್ಥೆಗಳು ಕೈಜೋಡಿಸುವಂತೆ ಕೋರಿದರು.

ಡಿ. 21 ರಂದು ಅಗತ್ಯ ಸಿಬ್ಬಂದಿಗಳ ನಿಯೋಜನೆ, ವಾಹನ ನಿಯೋಜನೆ, ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಪೋಲಿಯೋ ಹನಿ ನೀಡುವ ಕಾರ್ಯಕ್ರಮವನ್ನು ಯಶಸ್ಸುಗೊಳಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.

ಜಿಲ್ಲೆಯಲ್ಲಿ ಒಟ್ಟು 5,80,720 ಜನಸಂಖ್ಯೆ:

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾಹಿತಿ ನೀಡಿ, ಜಿಲ್ಲೆಯಲ್ಲಿ 3 ತಿಂಗಳಿನಿಂದ 5 ವರ್ಷದ ವರೆಗಿನ ಒಟ್ಟು 42,477 ಮಕ್ಕಳಿದ್ದು, ನಗರ ವ್ಯಾಪ್ತಿಯಲ್ಲಿ 4, 400, ಗ್ರಾಮೀಣ ಭಾಗದಲ್ಲಿ 37, 975 ಮಕ್ಕಳಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 5,80,720 ಜನಸಂಖ್ಯೆ ಇದ್ದು, ನಗರ ವ್ಯಾಪ್ತಿಯಲ್ಲಿ 57,727, ಗ್ರಾಮೀಣ ಭಾಗದಲ್ಲಿ 5,24,993 ಜನ ಸಂಖ್ಯೆ ಇದ್ದು, ಇವರಲ್ಲಿ ವಲಸೆ ಜನ ಸಂಖ್ಯೆ 19,164 ಮತ್ತು ಸ್ಥಿರವಾಸಿತ ವಲಸೆ ಜನಸಂಖ್ಯೆಯು 2,05,861 ಇರುತ್ತದೆ. ಇದರಲ್ಲಿ 3 ತಿಂಗಳಿನಿಂದ 5 ವರ್ಷದ ಒಳಗಿನ ವಲಸೆ ಮಕ್ಕಳ ಸಂಖ್ಯೆ 4,608 ಮಕ್ಕಳು ಇದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಡಿ.21 ರಂದು ಬೆಳಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಬೂತ್ ಮಟ್ಟದಲ್ಲಿ ಪೋಲಿಯೋ ಹನಿ ನೀಡಲಾಗುತ್ತದೆ. ಡಿ. 22 ರಿಂದ 24 ರವರೆಗೆ ಮನೆ ಮನೆಗೆ ಭೇಟಿ ನೀಡಿ ಪೋಲಿಯೋ ಹನಿ ನೀಡಲಾಗುತ್ತದೆ ಎಂದು ಹೇಳಿದರು. (ಡಿ.22 ಮತ್ತು 23 ರಂದು ಗ್ರಾಮೀಣ ಪ್ರದೇಶ, ಡಿಸೆಂಬರ್, 22 ರಿಂದ ಮೂರು ದಿನಗಳ ಕಾಲ ನಗರ, ಪಟ್ಟಣ ಪ್ರದೇಶ ಭೇಟಿ ನೀಟಿ ಪೋಲಿಯೋ ಹನಿ ನೀಡಲಾಗುತ್ತದೆ).

ಒಟ್ಟು 464 ಬೂತ್‍:

ಸ್ಥಿರವಾಸಿತ ವಲಸೆ ಮಕ್ಕಳ ಸಂಖ್ಯೆ 13,447 ಇರುತ್ತದೆ. ಜಿಲ್ಲೆಯಲ್ಲಿ ಒಟ್ಟು 1,39,929 ಮನೆಗಳಿದ್ದು, ಈ ಎಲ್ಲಾ ಮಕ್ಕಳಿಗೆ ಲಸಿಕೆ ನೀಡಲು ಜಿಲ್ಲೆಯಲ್ಲಿ ಒಟ್ಟು 464 ಬೂತ್‍ಗಳನ್ನು ಗುರುತಿಸಲಾಗಿದೆ. ಜನನಿಬಿಡ ಪ್ರದೇಶಗಳಲ್ಲಿ 30 ಸಂಚಾರಿ ತಂಡ, 6 ಮೊಬೈಲ್ ಸಂಚಾರಿ ತಂಡ ರಚಿಸಲಾಗಿದೆ. ಒಟ್ಟು 1928 ಲಸಿಕೆದಾರರನ್ನು ಗುರುತಿಸಲಾಗಿದ್ದು, ಮನೆ ಮನೆ ಭೇಟಿ ನೀಡಲು ಒಟ್ಟು 924 ತಂಡಗಳನ್ನು ರಚಿಸಲಾಗಿದೆ. ಒಟ್ಟು 86 ಮೇಲ್ವಿಚಾರಕರನ್ನು ಗುರುತಿಸಲಾಗಿದೆ. ಇವರಿಗೆ ಈಗಾಗಲೇ ಜಿಲ್ಲಾ ಹಾಗೂ ತಾಲೂಕು ಮಟ್ಟದಿಂದ ತರಬೇತಿ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ವಿವರಿಸಿದರು.

ಒಟ್ಟು 40 ಶೀತಲ ಸರಪಳಿ ಕೇಂದ್ರಗಳಿದ್ದು, ಈ ಕಾರ್ಯಕ್ರಮಕ್ಕಾಗಿ ಸನ್ನದ್ಧ ಮಾಡಲಾಗಿದೆ. ಇತರೆ ಯಾವುದೇ ಲಸಿಕೆಗಳು ಮಿಶ್ರವಾಗದಂತೆ ಬೇರೆ ಬೇರೆಯಾಗಿ ಇಟ್ಟು ಶೀತಲ ಸರಪಳಿ ನಿರ್ವಹಣೆ ಮಾಡಲು ಎಲ್ಲಾ ಶೀತಲ ಸರಪಳಿ ನಿರ್ವಾಹಕರಿಗೆ ತರಬೇತಿ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆ ಜಾಗೃತಿ ಜಾಥಾ ಏರ್ಪಡಿಸುವುದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮೂಲಕ ಗ್ರಾಮ ಮಟ್ಟದಲ್ಲಿ ಅರಿವು ಮೂಡಿಸುವುದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಪಡೆಯುವಂತೆ ಮಾಹಿತಿ ನೀಡುವುದು. ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ಮೂಲಕ ಸ್ಥಳೀಯ ನಗರ, ಪಟ್ಟಣ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಲಸಿಕೆ ಪಡೆಯುವಂತಾಗಲು ಜನ ಜಾಗೃತಿ ಮೂಡಿಸುವುದು, ಪ್ರಾದೇಶಿಕ ಸಾರಿಗೆ ಇಲಾಖೆ ಮೂಲಕ ಅಗತ್ಯ ವಾಹನಗಳ ನಿಯೋಜನೆ ಮಾಡುವುದು, ಬಸ್ ನಿಲ್ದಾಣಗಳಲ್ಲಿ ಹಾಗೂ ಇತರೆ ಸ್ಥಳಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆ ಪಡೆಯಲು ಅರಿವು ಮೂಡಿಸುವುದು, ಕಾರ್ಮಿಕ ಇಲಾಖೆ ಮೂಲಕ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಪಡೆಯುವಂತೆ ಮಾಹಿತಿ ನೀಡುವುದು.

ವೈದ್ಯಕೀಯ ಶಿಕ್ಷಣ ಇಲಾಖೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೊತೆ ಕೈಜೋಡಿಸುವುದು, ರೋಟರಿ ಕ್ಲಬ್, ರೋಟರಿ ಮಿಸ್ಟಿ ಹಿಲ್, ಲಯನ್ಸ್ ಕ್ಲಬ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಗಳು ಪಲ್ಸ್ ಪೋಲಿಯೋ ಯಶಸ್ಸಿಗೆ ಕೈಜೋಡಿಸುವುದು, ಹಾಗೆಯೇ ವಿವಿಧ ಧಾರ್ಮಿಕ ಮುಖಂಡರು ಸಹ ಪಲ್ಸ್ ಪೋಲಿಯೋ ಲಸಿಕೆ ಮಹತ್ವ ಬಗ್ಗೆ ಜಾಗೃತಿ ಮೂಡಿಸುವುದು. ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಸಂಚಾರಿ ಘಟಕಕ್ಕೆ ಸ್ಥಳಾವಕಾಶ ನೀಡಿ ಲಸಿಕೆ ಪಡೆಯಲು ಅವಕಾಶ ಮಾಡುವುದು. ಹೀಗೆ ವಿವಿಧ ಇಲಾಖೆಗಳು ಅಗತ್ಯ ಸಹಕಾರ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಅವರು ಕೋರಿದರು.

ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಆರ್‍ಸಿಎಚ್ ಅಧಿಕಾರಿ ಡಾ.ಮಧುಸೂದನ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಲೋಕೇಶ್, ಆರ್‍ಟಿಒ ಅಧಿಕಾರಿ ಸತೀಶ, ಕೆಎಸ್‍ಆರ್‍ಟಿಸಿ ಡಿಪೋ ವ್ಯವಸ್ಥಾಪಕರಾದ ಈರಸಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಪ್ರಸನ್ನ ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜು, ಡಿಯುಡಿಸಿ ಬಿ.ಬಸಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಚಿದಾನಂದ ಕುಮಾರ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶೇಖರ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಡಾ.ಕೃಷ್ಣಮೂರ್ತಿ, ಕಾರ್ಮಿಕ ಅಧಿಕಾರಿ ಕಾವೇರಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ದೀಪಕ್, ವಿವಿಧ ಇಲಾಖೆ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಇತರರು ಇದ್ದರು.