ನಾಪೋಕ್ಲು: ಅವಂದೂರು ಗ್ರಾಮದಲ್ಲಿ ನೆಲೆ ನಿಂತಿರುವ ಪುರಾತನ ಇತಿಹಾಸ ಪ್ರಸಿದ್ಧ ಶ್ರೀ ಗೋಪಾಲಕೃಷ್ಣ ದೇವರ ಬಿಂಬ ಪುನರ್ ಪ್ರತಿಷ್ಠೆ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವವು ನೀಲೇಶ್ವರ ಉಚಿಲತ್ತಾಯ ಶ್ರೀ ಪದ್ಮನಾಭ ತಂತ್ರಿ ನೇತೃತ್ವದಲ್ಲಿ ಜರುಗಿತು.
ಅಷ್ಟಬಂಧ ಬ್ರಹ್ಮಕಲಶೋತ್ಸವ ಅಂಗವಾಗಿ ಪ್ರಾರ್ಥನೆ, ಪ್ರಸಾದ ಪರಿಗ್ರಹ, ಬಿಂಬ ಪರಿಗ್ರಹ, ಪ್ರಸಾದ ಶುದ್ಧಿ, ವಾಸ್ತು ರಾಕ್ಷೋಘ್ನ ಹೋಮ, ವಾಸ್ತು ಬಲಿ, ಪೀಠ ಜಲಾಧಿವಾಸ, ಅಕ್ಷತಾ ಹೋಮ, ಗಣಪತಿ ಹೋಮ, ಬಿಂಬ ಶುದ್ಧಿ ಕಲಶ ಪೂಜೆ, ಕಲಶಾಭಿಷೇಕ, ಪ್ರಾಯಶ್ಚಿತ್ತ ಹೋಮ, ಶಾಂತಿ ಹೋಮ, ಹೋಮ ಕಲಶಾಭಿಷೇಕ, ಮಂಟಪ ಸಂಸ್ಕಾರ, ದುರ್ಗಾ ನಮಸ್ಕಾರ ಪೂಜೆ, ಅನುಜ್ಞಾಕಲಶ ಪೂಜೆ, ಅನುಜ್ಞಾ ಕಲಶಾಭಿಷೇಕ, ತತ್ವಹೋಮ, ತತ್ವ ಕಲಶಾಭಿಷೇಕ, ಧ್ಯಾನ ಸಂಕೋಚ, ಶಯ್ಯಾಪೂಜೆ, ಜೀವೋಧ್ವಾಸನೆ, ಜೀವಕಲಶ, ಶಯ್ಯಾಗಮನ, ಶಯನ, ಧ್ಯಾನಾಧಿವಾಸ, ಕುಂಬೇಷ ಕಲಶ ಪೂಜೆ, ಬ್ರಹ್ಮಕಲಶ ಪೂಜೆ, ಪರಿಕಲಶ ಪೂಜೆ, ಅಧಿವಾಸ ಹೋಮ, ಕಲಶಾಧಿವಾಸ, ಪ್ರಸಾದ ಅಧಿವಾಸ, ಪ್ರಸಾದ ಪ್ರತಿಷ್ಠೆ, ಶ್ರೀ ಗೋಪಾಲಕೃಷ್ಣ ದೇವರ ಪೀಠ ಮತ್ತು ಬಿಂಬ ಪ್ರತಿಷ್ಠೆ, ಜೀವ ಕಲಶಾಭಿಷೇಕ, ಅಷ್ಟಬಂಧ ಲೇಪನ, ಶಿಖರ ಪ್ರತಿಷ್ಠೆ, ಪರಿಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಮಂತ್ರಾಕ್ಷತೆ ಮುಂತಾದ ಧಾರ್ಮಿಕ ವಿಧಿ ವಿಧಾನಗಳು ಜರುಗಿದವು.ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನಾ ಸೇವೆ ನಡೆಯಿತು.ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಹಾಸನದ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಶಂಭುನಾಥ ಸ್ವಾಮೀಜಿ ಮತ್ತು ಶ್ರೀಧಾಮ ಮಾಣಿಲದ ಶ್ರೀ ದುರ್ಗಾ ಮಹಾಲಕ್ಷ್ಮೀ ದೇವಸ್ಥಾನದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು.
ವಿಧಾನಸಭೆ ಮಾಜಿ ಸಭಾಧ್ಯಕ್ಷ ಕೆ.ಜಿ. ಬೋಪಯ್ಯ, ನಿವೃತ್ತ ಬ್ಯಾಂಕ್ ಅಧಿಕಾರಿ ಪೊನ್ನಚ್ಚನ ತಮ್ಮಯ್ಯ, ಡಿಸಿಸಿ ಬ್ಯಾಂಕ್ ನ ನಿವೃತ್ತ ವ್ಯವಸ್ಥಾಪಕ ಪಟ್ಟಡ ದೇವಯ್ಯ, ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಅರ್ಚಕ ದಿನೇಶ್ ಭಟ್, ಮಾಜಿ ದೇವ ತಕ್ಕರು ಬೆಳ್ಯನ ನಾಣಯ್ಯ, ಹಾಲಿ ದೇವ ತಕ್ಕರು ಬೆಳ್ಯನ ವಾಸುದೇವ, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಚೊಕ್ಕಾಡಿ ಅಪ್ಪಯ್ಯ, ಕಾರ್ಯದರ್ಶಿ ಪಟ್ಟಡ ಸುಗುಣ ಕುಮಾರ್, ಖಜಾಂಚಿ ಬೆಳ್ಯನ ಚಂದ್ರಪ್ರಕಾಶ್, ಸಮಿತಿ ಸದಸ್ಯರು ಉಪಸ್ಥಿತರಿದ್ದರು.