ಕನ್ನಡಪ್ರಭ ವಾರ್ತೆ ನಂಜನಗೂಡು ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಗೆ ಕಾರಣರಾದ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ನಂಜನಗೂಡಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಿದರು.ಪಟ್ಟಣದ ಹುಲ್ಲಹಳ್ಳಿ ವೃತ್ತದ ಬಳಿ ಜಮಾವಣೆಗೊಂಡ ಯುವ ಕಾಂಗ್ರೆಸ್ ಕಾರ್ಯಕರ್ತರು ಊಟಿ-ನಂಜನಗೂಡು-ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ತಡೆದು, ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಅಣಕು ಪ್ರದರ್ಶನ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ್ ಮಾತನಾಡಿ, ಕೇಂದ್ರ ಬಿಜೆಪಿ ಸರ್ಕಾರದ ಅಧೀನದಲ್ಲಿರುವ ಎನ್ಟಿಎ ಏಜೆನ್ಸಿ ಸಂಸ್ಥೆಯು ನೀಟ್ ಪ್ರಶ್ನೆ ಪತ್ರಿಕೆಯನ್ನು ಶ್ರೀಮಂತರಿಗೆ 50 ರಿಂದ 1 ಕೋಟಿವರೆಗೆ ಹರಾಜು ಹಾಕಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ ಬೃಹತ್ ಭ್ರಷ್ಟಾಚಾರ ನಡೆಸಿದೆ, ಇದರಿಂದ ಸುಮಾರು 22.70 ಲಕ್ಷ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ, ಆದ್ದರಿಂದ ಪ್ರಶ್ನೆ ಪತ್ರಿಕೆ ಸೋರಿಕೆಯ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಹೆಗ್ಗಡಹಳ್ಳಿ ಮಹೇಶ್ ಮಾತನಾಡಿ, ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ ಭ್ರಷ್ಟಾಚಾರ ನಡೆಸಿರುವ ಎನ್ಟಿಎ ಏಜೆನ್ಸಿಯನ್ನು ರದ್ದುಗೊಳಿಸಿ, ಬೇರೆ ಸಂಸ್ಥೆಯ ಮೂಲಕ ಪರೀಕ್ಷೆ ನಡೆಸಬೇಕು, ಅಲ್ಲದೆ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾಗಿರುವ ತಪಿತಸ್ತರ ವಿರುದ್ಧ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು. ಚಂದನ್ ಗೌಡ, ವಿನಯ್, ಸುಕುಮಾರ್, ರಫೀಕ್ ಅಲಿ, ಆದರ್ಶ್, ಹರೀಶ, ವಸಂತ, ಪ್ರಕೃತ್, ಮನೋಜ್, ಲೋಕೇಶ್, ವಿನಯ್, ವಿಶಾಂತ್, ಸುನಿಲ್, ರಾಜೇಂದ್ರ, ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.------------------