ಕನ್ನಡಪ್ರಭ ವಾರ್ತೆ ರಾಯಚೂರು
ಜಿಲ್ಲೆಯ ಸಿರವಾರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಕ್ರಾಣಿ ಗ್ರಾಮದ ಅಶ್ವಿನಿ ಯುವತಿ ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿಗೆ ಸೂಚನೆ ನೀಡಿರುವುದಾಗಿ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಧರ್ಮಸಿಂಗ್ ತಿಳಿದ್ದಾರೆ.ಈ ದುರದೃಷ್ಟಕರ ಘಟನೆಯ ವಿಷಯ ತಿಳಿಯುತ್ತಿದಂತೆ, ಡಿಸಿ ಹಾಗೂ ಎಸ್ಪಿ ಜತೆಗೆ ತಕ್ಷಣವೆ ದೂರವಾಣಿ ಮುಖಾಂತರ ಮಾತಾನಾಡಿ ಈ ಘಟನೆಯನ್ನು ಗಂಭಿರವಾಗಿ ಪರಿಗಣಿಸಿ ತುರ್ತು ಕ್ರಮ ಕೈಗೊಳ್ಳಲು ಸೂಚಿಸಿದ್ದು, ಈಗಾಗಲೇ ಪ್ರಕರಣ ದಾಖಲಾಗಿ ಮೂರು ಆರೋಪಿಗಳನ್ನು ಬಂಧಿಸಲಾಗಿದೆ. ಜತೆಗೆ ತನಿಖೆ ಪ್ರಗತಿಯಲ್ಲಿದೆ.
ಈ ಪ್ರಕರಣವು ಅತ್ಯಂತ ಅಮಾನವೀಯ ಘಟನೆಯಾಗಿದ್ದು, ಇದರಲ್ಲಿ ಯಾರೇ ತಪ್ಪು ಮಾಡಿದ್ದರೂ, ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಂತ್ರಸ್ತ ಯುವತಿಯ ಪಾಲಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಯುವತಿ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದ್ದು, ಸರ್ಕಾರ ಸದಾ ಕಾಲ ಈ ಸಂಕಷ್ಟದಲ್ಲಿರುವವರ ಬೆಂಬಲಕ್ಕಿದೆ. ದುಷ್ಕರ್ಮಿಗಳ ವಿರುದ್ಧ ಅತ್ಯಂತ ಕಠಿಣ ಕ್ರಮ ವಹಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದ್ದಾರೆ.ಪ್ರಕರಣದ ಸಂಪೂರ್ಣ ತನಿಖೆಯನ್ನು ಶೀಘ್ರವಾಗಿ ಕೈಗೊಂಡು ಆರೋಪಿಗಳಿಗೆ ಕಠಿಣ ಶಿಕ್ಷೆ ಕೈಗೊಳ್ಳಬೇಕಾಗಿ ಹಾಗೂ ಕೈಗೊಂಡ ಕ್ರಮಗಳ ಬಗ್ಗೆ ತಿಳಿಸುವಂತೆ ನಿರ್ದೇಶನ ನೀಡಲಾಗಿದ್ದು, ಮುಂದೆ ಜಿಲ್ಲೆಯಲ್ಲಿ ಇಂತಹ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನಚ್ಚರಿಕೆ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ವಿಧಾನಸಭೆ ಅಧಿವೇಶನ ಹಾಗೂ ವಿಧಾನ ಪರಿಷತ್ತಿನ ಅಧಿವೇಶನ ನಿಮಿತ್ಯ ಬರಲು ಸಾಧ್ಯವಾಗಿಲ್ಲ. ಶೀಘ್ರದಲ್ಲಿಯೇ ಗ್ರಾಮಕ್ಕೆ ಭೇಟಿ ನೀಡುವೆ. ಸಂತ್ರಸ್ತೆಯ ಕುಟುಂಬದೊಂದಿಗೆ ಸರ್ಕಾರ ಮತ್ತು ಜಿಲ್ಲಾಡಳಿತ ಇದೆ. ಸರ್ಕಾರದಿಂದ ದೊರಕುವ ಸವಲತ್ತುಗಳನ್ನು ಕೊಡಿಸಲು ಎಲ್ಲಾ ಪ್ರಯತ್ನಗಳನ್ನು ನಾನು ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಅಜಯ್ ಧರ್ಮಸಿಂಗ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
