ಸಾರಾಂಶ
ಜಿಪಂ ಹಾಗೂ ತಾಪಂ 15ನೇ ಹಣಕಾಸು ಯೋಜನೆ ಮತ್ತು ಅನಿರ್ಬಂಧಿತ ಅನುದಾನದಡಿ ಅಗತ್ಯ ಕ್ರಿಯಾಯೋಜನೆ ರೂಪಿಸಬೇಕು. ಜೆಜೆಎಂ, ಉದ್ಯೋಗ ಖಾತರಿಯಡಿ ಕೈಗೆತ್ತಿಕೊಂಡ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ ಎಚ್ಚರಿಸಿದರು.
ಕನ್ನಡಪ್ರಭ ವಾರ್ತೆ ಹುಕ್ಕೇರಿ
ಜಿಪಂ ಹಾಗೂ ತಾಪಂ 15ನೇ ಹಣಕಾಸು ಯೋಜನೆ ಮತ್ತು ಅನಿರ್ಬಂಧಿತ ಅನುದಾನದಡಿ ಅಗತ್ಯ ಕ್ರಿಯಾಯೋಜನೆ ರೂಪಿಸಬೇಕು. ಜೆಜೆಎಂ, ಉದ್ಯೋಗ ಖಾತರಿಯಡಿ ಕೈಗೆತ್ತಿಕೊಂಡ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಯೋಜನೆ ಅನುಷ್ಠಾನದಲ್ಲಿ ಕಾಲಹರಣ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ ಎಚ್ಚರಿಸಿದರು.ಇನಾಮಹೊಂಗಲ, ಸವದತ್ತಿ ಮತ್ತಿತರ ಕಡೆಗಳಲ್ಲಿ ಭೇಟಿ ನೀಡಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಯಾವುದೇ ರೀತಿಯ ಕಾಯಿಲೆಗಳು ಹರಡದಂತೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸಬೇಕು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವಂತಾಗಬೇಕು ಎಂದು ಹೇಳಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ದುಂಡಗುಂಟಿ, ವಸತಿ ನಿಲಯದ ಅವ್ಯವಸ್ಥೆ ಕಂಡು ಆಕ್ರೋಶಗೊಂಡರು.ಇದೇ ವೇಳೆ ಆಡಳಿತ ಯಂತ್ರದ ಕಾರ್ಯಕ್ಷಮತೆ ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಸಲಹೆ-ಸೂಚನೆ ನೀಡಿದರು. ಇದರೊಂದಿಗೆ ಆಡಳಿತ ಯಂತ್ರಕ್ಕೆ ಚುರುಕು ನೀಡಿದ್ದಲ್ಲದೆ ಲೆಕ್ಕಕ್ಕೆ ಸಂಬಂಧಿಸಿದ ದಾಖಲೆಗಳ ನಿರ್ವಹಣೆ, ಆಡಳಿತ ಸುಧಾರಣೆ ಕುರಿತು ಮಾರ್ಗದರ್ಶನ ಮಾಡಿದರು. ಈ ವೇಳೆ ಜಿಪಂ ಸಿಬ್ಬಂದಿಗಳಾದ ಶಶಿಕಾಂತ ನೇಸರಗಿ, ಸುವರ್ಣಾ ಮಹೇಂದ್ರಕರ ಮತ್ತಿತರರು ಉಪಸ್ಥಿತರಿದ್ದರು.