ಸಾರಾಂಶ
ಗೃಹ ಬಳಕೆ ಗ್ಯಾಸ್ಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿರುವು ಮಾಹಿತಿ ಬಂದಿದೆ. ಅಧಿಕಾರಿಗಳು ಕೂಡಲೇ ಆ ಸ್ಥಳಗಳ ಮೇಲೆ ದಾಳಿ ಮಾಡಿ ಅಕ್ರಮಕ್ಕೆ ಬ್ರೇಕ್ ಹಾಕಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚಿಸಿದರು.
ಕನ್ನಡಪ್ರಭ ವಾರ್ತೆ ವಿಜಯಪುರ
ಗೃಹ ಬಳಕೆ ಗ್ಯಾಸ್ಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿರುವು ಮಾಹಿತಿ ಬಂದಿದೆ. ಅಧಿಕಾರಿಗಳು ಕೂಡಲೇ ಆ ಸ್ಥಳಗಳ ಮೇಲೆ ದಾಳಿ ಮಾಡಿ ಅಕ್ರಮಕ್ಕೆ ಬ್ರೇಕ್ ಹಾಕಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ನಗರದ ವಿವಿಧೆಡೆ ಗೃಹಬಳಕೆ ಸಿಲಿಂಡರ್ ಗ್ಯಾಸ್ ಅಕ್ರಮವಾಗಿ ಮಾರಾಟವಾಗುತ್ತಿರುವುದನ್ನು ಕಂಡು ಬಂದಿದ್ದು, ಇಂತಹ ಸ್ಥಳಗಳನ್ನು ಗುರುತಿಸಿ, ದಾಳಿ ನಡೆಸಿ ಎಂದು ಸೂಚನೆ ನೀಡಿದರು.
ಅಕ್ರಮವಾಗಿ ಗೃಹ ಬಳಕೆಯ ಸಿಲಿಂಡರ್ಗಳನ್ನು ಪಡೆದು, ರಿಫಿಲಿಂಗ್ ಮಾಡಲಾಗುತ್ತಿದೆ. ಇದೊಂದು ಅತ್ಯಂತ ಅಪಾಯಕಾರಿ ಕೆಲಸ ಅಲ್ಲದೇ ಗೃಹ ಬಳಕೆ ಗ್ಯಾಸ್ ಸಿಲೆಂಡರ್ನ್ನು ಆಟೋ, ಕಾರ್ಗಳಿಗೆ ತುಂಬಿಸಲಾಗುತ್ತಿದೆ. ಇಂತಹ ರಿಫಿಲಿಂಗ್ ಸ್ಥಳಗಳನ್ನು ಪತ್ತೆ ಹಚ್ಚಿ, ವಿವಿಧ ಇಲಾಖೆ ಅಧಿಕಾರಿಗಳನ್ನೊಳಗೊಂಡ ತಂಡವನ್ನು ರಚಿಸಿಕೊಂಡು ಸೂಕ್ತ ಯೋಜನೆ ರೂಪಿಸಿಕೊಂಡು ಇಂತಹ ಸ್ಥಳಗಳ ಮೇಲೆ ದಾಳಿ ನಡೆಸಿ, ಸಿಲಿಂಡರ್ಗಳನ್ನು ವಶಪಡಿಸಿಕೊಂಡು ಕ್ರಮ ಜರುಗಿಸಬೇಕು. ಗ್ಯಾಸ್ ತುಂಬುವವರಿಗೆ ಸಿಲಿಂಡರ್ ಸರಬರಾಜಾಗುತ್ತಿರುವ ಮೂಲವನ್ನು ಪತ್ತೆ ಹಚ್ಚಿ, ಅಕ್ರಮವಾಗಿ ಸಿಲಿಂಡರ್ಗಳನ್ನು ಸರಬರಾಜು ಮಾಡುತ್ತಿರುವವರ ಮೇಲೆ ಸೂಕ್ತ ನಿಗಾ ಇಡಬೇಕು. ಅಕ್ರಮ ಸಿಲಿಂಡರ್ಗಳು ಪತ್ತೆಯಾದಲ್ಲಿ ಸಂಬಂಧಿಸಿದ ಏಜೆನ್ಸಿಗಳ ಮೇಲೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.ಗ್ಯಾಸ್ ರಿಫೀಲಿಂಗ್ ಮಾಡಲು ಬಳಸುತ್ತಿರುವ ಎಲ್ಲ ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಂಡು ಸಂಬಂಧಿಸಿದವರ ಮೇಲೆ ಕ್ರಮವಹಿಸಬೇಕು. ಅಕ್ರಮವಾಗಿ ಗೃಹಬಳಕೆಯ ಗ್ಯಾಸ್ನ್ನು ತುಂಬಿಸುವ ವಾಹನಗಳನ್ನು ತಪಾಸಣೆ ನಡೆಸಿ, ಪ್ರಕರಣ ದಾಖಲಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಿಲಿಂಡರ್ ರಿಫೀಲಿಂಗ್ ಮಾಡುವವರ ಮೇಲೆ ಕ್ರಮ ವಹಿಸಿ ಸಿಲಿಂಡರ್ಗಳನ್ನು ವಶಕ್ಕೆ ಪಡೆದುಕೊಳ್ಳಬೇಕು. ಇಂತಹ ಕೇಂದ್ರಗಳನ್ನು ಪಾಲಿಕೆ ಆಯುಕ್ತರು ಸೀಜ್ ಮಾಡಬೇಕು ಎಂದು ತಿಳಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ ಸೋನಾವಣೆ ಮಾತನಾಡಿ, ಅಕ್ರಮವಾಗಿ ಸಿಲಿಂಡರ್ ಬಳಕೆ ಮಾಡುತ್ತಿರುವ ಸ್ಥಳಗಳಿಗೆ ಪೊಲೀಸ್ರೊಂದಿಗೆ ನಿಯಮಿತವಾಗಿ ದಾಳಿ ನಡೆಸಿ, ಸಂಬಂಧಿಸಿದವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಸೂಚನೆ ನೀಡಿದರು.ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಆಹಾರ ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮಬಾಬಾ ಮುದ್ದೇಬಿಹಾಳ, ವಿಜಯಪುರ ತಹಸೀಲ್ದಾರ್ ಪ್ರಕಾಶ ಚನಗೊಂಡ ಮುಂತಾದವರು ಇದ್ದರು.