ಪುತ್ತೂರು: ದಾನಗಳಲ್ಲಿ ಅತಿ ಶ್ರೇಷ್ಠವಾದದ್ದು ರಕ್ತದಾನ. ರಕ್ತಕ್ಕೆ ರಕ್ತವೇ ಪರ್ಯಾಯವಲ್ಲದೆ ಅದನ್ನು ಕೃತಕವಾಗಿ ತಯಾರಿಸುವುದಕ್ಕೆ ಇದುವರೆಗೂ ಸಾಧ್ಯವಾಗಿಲ್ಲ ಎಂದು ಪುತ್ತೂರಿನ ರೋಟರಿ-ಕ್ಯಾಂಪ್ಕೋ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ರಾಮಕೃಷ್ಣ ರಾವ್ ಹೇಳಿದರು.ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ನ ಯೂತ್ ರೆಡ್ಕ್ರಾಸ್ ಮತ್ತು ಎನ್ಎಸ್ಎಸ್ ಘಟಕ ಹಾಗೂ ಪುತ್ತೂರಿನ ರೋಟರಿ ಕ್ಯಾಂಪ್ಕೋ ರಕ್ತನಿಧಿ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ನಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು. ನಿತ್ಯವೂ ನೂರಾರು ರೋಗಿಗಳಿಗೆ ರಕ್ತದ ಆವಶ್ಯಕತೆ ಇರುತ್ತದೆ. ಇಂತಹ ಸಂದರ್ಭದಲ್ಲಿ ರಕ್ತದಾನವು ಸಂಜೀವಿನಿಯಂತೆ ಕೆಲಸ ಮಾಡುತ್ತದೆ. ರಕ್ತದಾನದಿಂದ ಬದುಕಿಗೆ ಸಾರ್ಥಕ್ಯವಾಗುತ್ತದೆ ಎಂದರು.
ಸಂಗ್ರಹಿಸಿದ ರಕ್ತವನ್ನು ನೇರವಾಗಿ ರೋಗಿಗೆ ನೀಡಲು ಸಾಧ್ಯವಿಲ್ಲ ಅದಕ್ಕಾಗಿ ರಕ್ತ ನಿಧಿ ಕೇಂದ್ರಗಳಲ್ಲಿ ಇದನ್ನು ಸೂಕ್ತ ಪರೀಕ್ಷೆಗೊಳಪಡಿಸಿ ಸಂಸ್ಕರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಮಾತನಾಡಿ ರಕ್ತ ದಾನಶ್ರೇಷ್ಟವಾದದ್ದು. ವ್ಯಕ್ತಿಯೊಬ್ಬನ ಜೀವ ಉಳಿಸುವ ಈ ಮಹತ್ಕಾರ್ಯದಲ್ಲಿ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ತೊಡಗಿಸಿಕೊಳ್ಳಬೇಕು. ವಿವೇಕಾನಂದ ಸಂಸ್ಥೆಯು ಸಮಾಜಮುಖೀ ಕಾರ್ಯದಲ್ಲಿ ಮುಂಚೂಣಿಯಲ್ಲಿದ್ದು, ಸಮಾಜಕ್ಕೆ ಒಳಿತನ್ನುಂಟುಮಾಡುವ ಕಾರ್ಯದಲ್ಲಿ ನಿರತವಾಗಿದೆ ಎಂದು ಹೇಳಿದರು.ಕಾಲೇಜಿನ ಎನ್ಎಸ್ಎಸ್ ಘಟಕದ ಸಂಯೋಜಕ ಡಾ.ರಾಜೇಶ್.ಆರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಡಾ.ರಾಜೇಶ್.ಆರ್ ಸ್ವಾಗತಿಸಿ ಪ್ರಸ್ತಾವನೆಗೈದರು. ಎನ್ಎಸ್ಎಸ್ ಘಟಕದ ಸ್ವಯಂಸೇವಕಿಯರಾದ ಹರ್ಷಿತಾ ವಂದಿಸಿದರು. ಅನೂಷಾ ಕಾರ್ಯಕ್ರಮ ನಿರ್ವಹಿಸಿದರು. ಈ ಸಂದರ್ಭದಲ್ಲಿ ಆವಶ್ಯಕತೆಗೆ ತಕ್ಕಂತೆ ಒಟ್ಟು ೫೩ ಯುನಿಟ್ ರಕ್ತ ಸಂಗ್ರಹಿಸಲಾಯಿತು.