ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯನ್ನು ಹೆಚ್ಚಿಸುವ ದೃಷ್ಟಿಯಿಂದ ಪುತ್ತೂರು ತಾಲೂಕು ಮಟ್ಟದಲ್ಲಿ ಆಯೋಜಿಸಿರುವ ದಾಖಲಾತಿ ಆಂದೋಲನಕ್ಕೆ ಚಾಲನೆಯಾಗಿ ಶುಕ್ರವಾರ ಪುತ್ತೂರಿನಲ್ಲಿ ಜಾಥಾ ನಡೆಸಲಾಯಿತು.
ಪುತ್ತೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯನ್ನು ಹೆಚ್ಚಿಸುವ ದೃಷ್ಟಿಯಿಂದ ಪುತ್ತೂರು ತಾಲೂಕು ಮಟ್ಟದಲ್ಲಿ ಆಯೋಜಿಸಿರುವ ದಾಖಲಾತಿ ಆಂದೋಲನಕ್ಕೆ ಚಾಲನೆಯಾಗಿ ಶುಕ್ರವಾರ ಪುತ್ತೂರಿನಲ್ಲಿ ಜಾಥಾ ನಡೆಸಲಾಯಿತು. ಪುತ್ತೂರು ತಹಸೀಲ್ದಾರ್ ಎಸ್. ಬಿ.ಕೂಡಲಜಿ ಹಾಗೂ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಅವರ ಸಮ್ಮುಖದಲ್ಲಿ ತಾಲೂಕು ಆಡಳಿತ ಸೌಧದಲ್ಲಿ ಜಾಥಾಕ್ಕೆ ಚಾಲನೆ ನೀಡಲಾಯಿತು.೫ ಶೇ. ಹೆಚ್ಚು ದಾಖಲಾತಿ ಗುರಿ: ಈ ಸಂದರ್ಭ ಮಾತನಾಡಿದ ಪುತ್ತೂರು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಸಿ. ಅವರು ಆಂದೋಲನದ ಉದ್ದೇಶವನ್ನು ವಿವರಿಸಿ, ಆಂದೋಲನದ ಮೂಲಕ ತಾಲೂಕಿನಲ್ಲಿ ಕಳೆದ ವರ್ಷಕ್ಕಿಂತ ೫ ಶೇ. ಹೆಚ್ಚು ದಾಖಲಾತಿಯ ಗುರಿ ಹೊಂದಲಾಗಿದ್ದು, ಶಾಲೆಯಿಂದ ಹೊರಗುಳಿದಿರುವ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶ ಇರುತ್ತದೆ ಎಂದರು.ಸರ್ಕಾರಿ ಶಾಲೆಗಳಲ್ಲಿ ಸಿಗುವ ಗುಣಮಟ್ಟದ ಶಿಕ್ಷಣದ ಜತೆಗೆ ವಿವಿಧ ಸೌಲಭ್ಯಗಳ ಕುರಿತು ಪೋಷಕರ ಮನವೊಲಿಸಿ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವ ಪ್ರಯತ್ನ ಮಾಡಲಾಗುತ್ತಿದೆ. ರಾಜ್ಯದ ಆಯ್ದ ೧೫ ಜಿಲ್ಲೆಗಳಲ್ಲಿ ದ್ವಿಭಾಷಾ ಬೋಧನಾ ಕಲಿಕೆಯನ್ನು ಸರ್ಕಾರಿ ಜಾರಿ ಮಾಡಿದ್ದು, ದ.ಕ.ಜಿಲ್ಲೆಯ ಎಲ್ಲ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಬೋಧನೆ ಅನುಷ್ಠಾನಗೊಳ್ಳಲಿದೆ ಎಂದು ಹೇಳಿದರು.
ಮುಂದೆ ಕ್ಲಸ್ಟರ್ ಮಟ್ಟದಲ್ಲಿ ಆಂದೋಲನಗಳು ನಡೆದು ಎಲ್ಲ ಕಡೆಯೂ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವ ಪ್ರಯತ್ನ ನಡೆಯಲಿದೆ. ಮೇ ೨೯ರ ವರೆಗೆ ಆಂದೋಲನ ನಡೆದು ಬಳಿಕ ಶಾಲಾರಂಭ, ಪ್ರಾರಂಭೋತ್ಸವಕ್ಕೆ ಸಿದ್ಧತೆ ನಡೆಯುತ್ತದೆ ಎಂದರು. ಕಾರ್ಯಕ್ರಮದಲ್ಲಿ ಪ್ರಭಾರ ಕ್ಷೇತ್ರ ಸಮನ್ವಯಾಧಿಕಾರಿ ನವೀನ್ ಸ್ಟೀಫನ್ ವೇಗಸ್, ಪ್ರಭಾರ ದೈಹಿಕ ಶಿಕ್ಷಣ ಪರಿವೀಕ್ಷಕ ಚಕ್ರಪಾಣಿ ಎ.ವಿ, ಶಿಕ್ಷಣ ಸಂಯೋಜಕ ಹರಿಪ್ರಸಾದ್, ಅಬ್ರಹಾಂ, ಕರುಣಾಕರ ಮಣಿಯಾಣಿ, ಬಿಆರ್ ಪಿ, ಸಿಆರ್ ಪಿ, ಶಿಕ್ಷಕರು ಉಪಸ್ಥಿತರಿದ್ದರು.