ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಸ್ಥಾಪನೆಗೊಂಡಿದ್ದು, ಇದೀಗ ಏಳನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಪುತ್ತೂರಿನ ನೆಹರು ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ ವಿಸ್ತರಿತ ಕಟ್ಟಡದ ಉದ್ಘಾಟನಾ ಸಮಾರಂಭ ಮಾ. ೨೫ರಂದು ನಡೆಯಲಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷೆ ವಸಂತಿ ಕೆ. ತಿಳಿಸಿದ್ದಾರೆ. ಸೋಮವಾರ ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಬಿಎಸ್ಇ ಮಂಡಳಿಯಲ್ಲಿ ಸಂಯೋಜನೆ ಹೊಂದಿರುವ ಸಂಸ್ಥೆಯು ಸಿಬಿಎಸ್ಇ ಪಠ್ಯಕ್ರಮ ಹೊಂದಿದೆ. ಪ್ರಸ್ತುತ ಶಾಲೆಯಲ್ಲಿ ೬೦೦ಕ್ಕಿಂತ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶಾಲಾ ಕಟ್ಟಡದ ೨ನೇ ಅಂತಸ್ತಿನ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಲೋಕಾರ್ಪಣೆಗೆ ಸಿದ್ಧಗೊಂಡಿದೆ ಎಂದರು.
ಮಾ. ೨೫ರಂದು ಬೆಳಗ್ಗೆ ನೂತನ ಕಟ್ಟಡದಲ್ಲಿ ಗಣಪತಿ ಹೋಮ ಸಹಿತ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಅಪರಾಹ್ನ ೩ ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ದ.ಕ. ಅಧ್ಯಕ್ಷ ಡಾ. ಕೆ.ಎಂ. ಶಾಂತಾರಾಮ ಶೆಟ್ಟಿ ಮುಖ್ಯ ಅತಿಥಿಗಳಾಗಿರುತ್ತಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ. ಕೃಷ್ಣ ಭಟ್, ಉಪಾಧ್ಯಕ್ಷ ಸತೀಶ್ ರಾವ್ ಗೌರವ ಉಪಸ್ಥಿತರಿರುತ್ತಾರೆ.ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಮತ್ತು ಉತ್ತಮ ವಿದ್ಯಾಭ್ಯಾಸಕ್ಕೆ ಎಲ್ಲ ರೀತಿಯ ಅನುಕೂಲತೆಗಳನ್ನು ಸಂಸ್ಥೆ ಹೊಂದಿದೆ. ಹೆಚ್ಚುತ್ತಿರುವ ವಿದ್ಯಾರ್ಥಿಗಳ ಅನುಕೂಲತೆಗಳನ್ನು ಗಮನದಲ್ಲಿಟ್ಟುಕೊಂಡು ೨ನೇ ಮಹಡಿ ನಿರ್ಮಿಸಲಾಗಿದೆ ಎಂದು ತಿಳಿಸಿದರು.
ಸುದ್ಧಿಗೋಷ್ಠಿಯಲ್ಲಿ ಸಂಸ್ಥೆಯ ಸಂಚಾಲಕ ಭರತ್ ಪೈ, ಪ್ರಾಂಶುಪಾಲರಾದ ಸಿಂಧು ವಿ.ಜಿ., ಉಪ ಪ್ರಾಂಶುಪಾಲರಾದ ಶ್ರೀದೇವಿ ಹೆಗಡೆ ಉಪಸ್ಥಿತರಿದ್ದರು.