ಕರ್ನಾಟಕ ರಾಜ್ಯ ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ರಾಜ್ಯ ನಿಯೋಗವು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿ ಮಹೇಶ್ ಅವರನ್ನು ಭೇಟಿ ಮಾಡಿ, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಾಣ ಹಾಗೂ ಶಿಕ್ಷಣ ಇಲಾಖೆಯಲ್ಲಿ ಅಗತ್ಯ ಆಡಳಿತಾತ್ಮಕ ಸುಧಾರಣೆಗಳನ್ನು ಕೈಗೊಳ್ಳುವ ಕುರಿತು ವಿಸ್ತೃತ ಚರ್ಚೆ ನಡೆಸಿತು.

ಕನ್ನಡಪ್ರಭವಾರ್ತೆ ನಾಪೋಕ್ಲು

ಕರ್ನಾಟಕ ರಾಜ್ಯ ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ರಾಜ್ಯ ನಿಯೋಗವು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿ ಮಹೇಶ್ ಅವರನ್ನು ಭೇಟಿ ಮಾಡಿ, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಾಣ ಹಾಗೂ ಶಿಕ್ಷಣ ಇಲಾಖೆಯಲ್ಲಿ ಅಗತ್ಯ ಆಡಳಿತಾತ್ಮಕ ಸುಧಾರಣೆಗಳನ್ನು ಕೈಗೊಳ್ಳುವ ಕುರಿತು ವಿಸ್ತೃತ ಚರ್ಚೆ ನಡೆಸಿತು.

ರಾಜ್ಯದ ಸರ್ಕಾರಿ ಶಾಲೆಗಳ ಪ್ರಸ್ತುತ ಸ್ಥಿತಿ, ಮಕ್ಕಳ ಕಲಿಕಾ ಮಟ್ಟ, ಶಿಕ್ಷಕರ ಮೇಲಿನ ಭೋಧಕೇತರ ಕೆಲಸಗಳ ಒತ್ತಡ, ಪೂರ್ವ ಪ್ರಾಥಮಿಕ ಶಿಕ್ಷಣ, ಶಾಲಾ ಮೂಲಸೌಕರ್ಯ, ದೈಹಿಕ ಶಿಕ್ಷಣ, ವೃತ್ತಿ ಶಿಕ್ಷಣ ಹಾಗೂ ಶಾಲಾ ಆಡಳಿತಕ್ಕೆ ಸಂಬಂಧಿಸಿದಂತೆ ಒಟ್ಟು 33 ಪ್ರಮುಖ ಅಂಶಗಳ ಮನವಿಯನ್ನು ಸಲ್ಲಿಸಲಾಯಿತು.

ಶಿಕ್ಷಕರನ್ನು ಬಿಎಲ್ಒ ಹಾಗೂ ಇತರೆ ಬೋಧಕೇತರ ಕರ್ತವ್ಯಗಳಿಂದ ಮುಕ್ತಗೊಳಿಸುವುದು, ಇಲಾಖಾ ಅಧಿಕಾರಿಗಳಿಂದ ಶಾಲಾ ಮಟ್ಟದಲ್ಲಿ ಕಲಿಕಾ ಗುಣಮಟ್ಟದ ಪರಿಣಾಮಕಾರಿ ಮೇಲ್ವಿಚಾರಣೆ, ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಎಸ್‌ಡಿಎಂಸಿ ಪಾತ್ರವನ್ನು ಬಲಪಡಿಸುವುದು, ಪೂರ್ವ ಪ್ರಾಥಮಿಕ ಶಿಕ್ಷಕರು ಮತ್ತು ಆಯಾಗಳಿಗೆ ನೇರವಾಗಿ ಗೌರವಧನ ಜಮಾ ಮಾಡುವುದು, ಕೆಪಿಎಸ್ ಶಾಲೆಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು, ದೈಹಿಕ ಶಿಕ್ಷಣ ಶಿಕ್ಷಕರ ಕೊರತೆಯನ್ನು ನಿವಾರಿಸುವುದು ಹಾಗೂ ವೃತ್ತಿ ಶಿಕ್ಷಣ ಕೋರ್ಸ್‌ಗಳನ್ನು ಪುನರಾರಂಭಿಸುವಂತೆ ಒತ್ತಾಯಿಸಲಾಯಿತು.ಶಾಲೆಗಳಲ್ಲಿ ಸಿಸಿಟಿವಿ ಅಳವಡಿಕೆ, ಅಕ್ಷರ ದಾಸೋಹ ಯೋಜನೆಯ ಸಂಪೂರ್ಣ ಜವಾಬ್ದಾರಿಯನ್ನು ಎಸ್‌ಡಿಎಂಸಿಗೆ ನೀಡುವುದು, ಬಿಇಒ ಹಾಗೂ ಡಿಡಿಪಿಐ ಕಚೇರಿಗಳ ಆಡಳಿತಾತ್ಮಕ ಸುಧಾರಣೆ,ಎಫ್ ಎಲ್ ಎನ್ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನ, ಪಠ್ಯಪುಸ್ತಕಗಳ ಸಮಯೋಚಿತ ವಿತರಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಗಮನ ಸೆಳೆಯಲಾಯಿತು.ಕಳೆದ ಹಲವು ವರ್ಷಗಳಿಂದ ಯಶಸ್ವಿಯಾಗಿ ಆಯೋಜಿಸಲಾಗುತ್ತಿದ್ದ ಥ್ರೋ ಬಾಲ್, ಬಾಲ್ ಬ್ಯಾಡ್ಮಿಂಟನ್ ಹಾಗೂ ಜಂಪ್ ರೋಪ್ ಕ್ರೀಡೆಗಳನ್ನು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿಯೂ ಮುಂದುವರಿಸಲು ಅಗತ್ಯ ನಿರ್ದೇಶನ ನೀಡುವಂತೆ ಮನವಿ ಮಾಡಲಾಯಿತು.

ಸಭೆಯಲ್ಲಿ ಸಲ್ಲಿಸಲಾದ ಅನೇಕ ವಿಷಯಗಳು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿ ಮತ್ತು ಸರ್ಕಾರಿ ಶಾಲೆಗಳ ಬಲವರ್ಧನೆಗೆ ನೇರವಾಗಿ ಸಂಬಂಧಿಸಿದ್ದು, ತಕ್ಷಣ ಜಾರಿಗೊಳಿಸಬಹುದಾದ ವಿಷಯಗಳನ್ನು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿಯೇ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳುವ ಬಗ್ಗೆ ಪ್ರಧಾನ ಕಾರ್ಯದರ್ಶಿಗಳು ಸಕಾರಾತ್ಮಕ ಸ್ಪಂದನೆ ನೀಡಿದರು.ನಿಯೋಗದಲ್ಲಿ ರಾಜ್ಯ ಸಂಚಾಲಕರಾದ ಮೊಯ್ದಿನ್ ಕುಟ್ಟಿ, ರಾಜ್ಯ ನಿರ್ದೇಶಕರಾದ ಉಮ್ಮರ್ ಟೆಕ್ನಿಕ್, ಜಿ.ಎಂ. ಮಹಮ್ಮದ್ ಕುಂಞಿ, ಶರಣ ಬಸಪ್ಪ ದಾನಕೈ, ಸಣ್ಣೇಗೌಡ, ಆಶಾ, ಹೆನ್ರಿ ಏಸುದಾಸ್, ಸಂಘಟನೆ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರಾದ ವೆಂಕಟೇಶ್ ಎಸ್.ಎಲ್.ವಿ., ಪ್ರಧಾನ ಕಾರ್ಯದರ್ಶಿ ಯಶೋದಾ, ಬೆಂಗಳೂರು ಉತ್ತರ ನಿರ್ದೇಶಕರಾದ ಗೀತಾ ಅತ್ತಿಬೆಲೆ, ಗದಗ ನಿರ್ದೇಶಕರಾದ ಹೇಮಂತ್ ಇಟಗಿ, ದಾವಣಗೆರೆಯ ರೂಪ, ರೇಖಾ, ಶಾಕಿರಸಾಗರ , ಶಿವಮೊಗ್ಗದ ನಗೀನ ಹಾಗೂ ಶರೀಫ್ ಕೆಳಿಂಜ ಸೇರಿದಂತೆ ವಿವಿಧ ಜಿಲ್ಲೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.