ಸಾರಾಂಶ
ಬಳ್ಳಾರಿ ನಗರದ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ಜನಸ್ಪಂದನೆ ಸಭೆಯಲ್ಲಿ ವಿವಿಧ ಇಲಾಖೆಗೆ ಸೇರಿದಂತೆ 130 ಅರ್ಜಿ ಸ್ವೀಕರಿಸಲಾಯಿತು.
ಬಳ್ಳಾರಿ: ಸಾರ್ವಜನಿಕರು ತಮ್ಮ ಸಮಸ್ಯೆಗಳ ತ್ವರಿತ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ರೂಪಿಸಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು. ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಅಹವಾಲುಗಳಿದ್ದಲ್ಲಿ ಸಲ್ಲಿಸಿ, ಪರಿಹಾರ ಕಂಡುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.
ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬಳ್ಳಾರಿ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರದ ನಿರ್ದೇಶನದಂತೆ ತಿಂಗಳಿಗೆ ಎರಡು ಬಾರಿ ಜನಸ್ಪಂದನ ಕಾರ್ಯಕ್ರಮವನ್ನು ಜಿಲ್ಲಾಡಳಿತ ಹಮ್ಮಿಕೊಳ್ಳುತ್ತಿದೆ. ತಾಲೂಕು ಮಟ್ಟದಲ್ಲಿ ಗ್ರಾಮೀಣ ಭಾಗದ ಸಮಸ್ಯೆಗಳನ್ನು ಪರಿಶೀಲಿಸಿ ಪರಿಹಾರ ನೀಡಲಾಗುತ್ತಿದೆ. ಸಮಸ್ಯೆಗಳಿರುವ ಸಾರ್ವಜನಿಕರು ಜನಸ್ಪಂದನ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ, ಇದರ ಸದುಪಯೋಗಪಡೆದುಕೊಳ್ಳಬೇಕು ಎಂದರು.ಜನಸ್ಪಂದನ ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಸಮಸ್ಯೆಗಳ ಅಹವಾಲುಗಳನ್ನು ಸ್ವೀಕರಿಸಿ, ಕೂಲಂಕಷವಾಗಿ ಪರಿಶೀಲಿಸಿ, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಡನೆ ಚರ್ಚಿಸಿ, ತ್ವರಿತವಾಗಿ ಪರಿಹಾರ ನೀಡಲಾಗುವುದು ಎಂದು ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.130 ಅರ್ಜಿ ಸಲ್ಲಿಕೆ: ತಾಲೂಕು ಕಚೇರಿಯ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ, ಸಾರ್ವಜನಿಕರಿಂದ ಒಟ್ಟು 130 ಅರ್ಜಿಗಳು ಸ್ವೀಕೃತಗೊಂಡವು.ಕಂದಾಯ ಇಲಾಖೆ 54, ಭೂ ದಾಖಲೆ ಉಪನಿರ್ದೇಶಕರ ಕಚೇರಿ 21, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 14, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ 1, ಬಳ್ಳಾರಿ ಮಹಾನಗರ ಪಾಲಿಕೆ 1, ಗ್ರಾಮೀಣ ಕುಡಿಯುವ ನೀರು ಒಳಚರಂಡಿ ವಿಭಾಗ 4, ಅರಣ್ಯ ಇಲಾಖೆ 1, ಸಮಾಜ ಕಲ್ಯಾಣ ಇಲಾಖೆ 1, ಗಣಿ ಮತ್ತು ಭೂ ವಿಜ್ಞಾನ 2, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 2, ಕೃಷಿ ಇಲಾಖೆ 2, ಲೋಕೋಪಯೋಗಿ ಇಲಾಖೆ 2, ನೀರಾವರಿ ನಿಗಮ ಮತ್ತು ಸಣ್ಣ ನೀರಾವರಿ 2, ಎನ್ಇಕೆಎಸ್ಆರ್ಟಿಸಿ 4, ಕಾರ್ಮಿಕ ಇಲಾಖೆ 2, ಕೆಎಸ್ಟಿಐಡಿಸಿ 1, ಪೊಲೀಸ್ ಇಲಾಖೆ 1, ಮಾಲಿನ್ಯ ನಿಯಂತ್ರಣ ಮಂಡಳಿ 1, ಜೆಸ್ಕಾಂ 1, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ 1 ಪಶು ಸಂಗೋಪನೆ ಇಲಾಖೆ 1 ಸೇರಿದಂತೆ ಒಟ್ಟು 130 ಅರ್ಜಿ ಸ್ವೀಕಾರಗೊಂಡವು.ಕಾರ್ಯಕ್ರಮದಲ್ಲಿ ಅಹವಾಲು ಸ್ವೀಕಾರ ಮಾಡಲು 15 ಕೌಂಟರ್ ವ್ಯವಸ್ಥೆ ಮಾಡಲಾಗಿತ್ತು. 60 ವರ್ಷ ಮೇಲ್ಪಟ್ಟ ವಯಸ್ಕರಿಗೆ ಮಾಸ್ಕ್ ವಿತರಿಸಿ ಮುಂಜಾಗ್ರತೆ ಕ್ರಮ ವಹಿಸಲಾಗಿತ್ತು.
ಎಡಿಸಿ ಮೊಹಮ್ಮದ್ ಝುಬೇರ್, ತಹಸೀಲ್ದಾರ್ ಗುರುರಾಜ ಹಾಗೂ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.