ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆ ಪರಿಗಣಿಸಿ ರಾಜ್ಯ ಸರ್ಕಾರದ ‘ಕರ್ನಾಟಕ ರತ್ನʼ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆ ಪರಿಗಣಿಸಿ ರಾಜ್ಯ ಸರ್ಕಾರದ ‘ಕರ್ನಾಟಕ ರತ್ನʼ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕ ಎಸ್‌.ಎಂ.ಕೃಷ್ಣ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ. ಶಾಸಕ, ಸಚಿವ, ಸ್ಪೀಕರ್‌, ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಕೃಷ್ಣ ಅಪಾರವಾಗಿ ಶ್ರಮಿಸಿದ್ದರು ಎಂದು ಹೇಳಿದ್ದಾರೆ.

ರಾಜಧಾನಿ ಬೆಂಗಳೂರಿಗೆ ಸಿಲಿಕಾನ್‌ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆ ಹಾರಿಸಿದ್ದಾರೆ. ಅವರಿಗೆ ನೀಡಿದ ಕೊಡುಗೆ ಗುರುತಿಸಿ ಕರ್ನಾಟಕ ಸರ್ಕಾರದ ವತಿಯಂದ ನೀಡಲಾಗುವ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನʼ ನೀಡುವ ಮೂಲಕ ಗೌರವ ಸಲ್ಲಿಸಬೇಕು ಎಂದು ಅಶೋಕ್‌ ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ್ದಾರೆ.