ಕೊಪ್ಪಳ ನಗರದ ರೈಲ್ವೆ ನಿಲ್ದಾಣದ ಬಳಿಯ ಶ್ರೀ ರಾಘವೇಂದ್ರ ಮಹಾಸ್ವಾಮಿಗಳ ಮಠದಲ್ಲಿ ಮೂರು ದಿನಗಳಿಂದ ನಡೆಯುತ್ತಿದ್ದ 355ನೇ ರಾಯರ ಆರಾಧನಾ ಮಹೋತ್ಸವ ಸೋಮವಾರ ವೈಭವದ ಉತ್ತರಾರಾಧನೆ ಹಾಗೂ ಮಹಾರಥೋತ್ಸವದೊಂದಿಗೆ ಸಂಪನ್ನಗೊಂಡಿತು.

ಕೊಪ್ಪಳ: ನಗರದ ರೈಲ್ವೆ ನಿಲ್ದಾಣದ ಬಳಿಯ ಶ್ರೀ ರಾಘವೇಂದ್ರ ಮಹಾಸ್ವಾಮಿಗಳ ಮಠದಲ್ಲಿ ಮೂರು ದಿನಗಳಿಂದ ನಡೆಯುತ್ತಿದ್ದ 355ನೇ ರಾಯರ ಆರಾಧನಾ ಮಹೋತ್ಸವ ಸೋಮವಾರ ವೈಭವದ ಉತ್ತರಾರಾಧನೆ ಹಾಗೂ ಮಹಾರಥೋತ್ಸವದೊಂದಿಗೆ ಸಂಪನ್ನಗೊಂಡಿತು.

ಆರಾಧನಾ ಮಹೋತ್ಸವದ ಕೊನೆಯ ದಿನವಾದ ಸೋಮವಾರ ಬೆಳಗ್ಗೆಯಿಂದಲೇ ಮಠದಲ್ಲಿ ಭಕ್ತರ ಸಂಭ್ರಮ ಮನೆಮಾಡಿತ್ತು. ಉತ್ತರಾರಾಧನೆಯ ಅಂಗವಾಗಿ ವಿವಿಧ ಧಾರ್ಮಿಕ ವಿಧಿ-ವಿಧಾನಗಳು, ಹೋಮ, ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು. ಬಳಿಕ ರಾಯರ ಉತ್ಸವ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಿ ಮಠದ ಆವರಣದ ಸುತ್ತಲೂ ಮಹಾರಥೋತ್ಸವ ಜರುಗಿತು.

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ರಾಯರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿ ಪುನೀತರಾದರು. ಮಠದಲ್ಲಿ ಬೆಳಗ್ಗಿನಿಂದಲೇ ಭಕ್ತರ ದಂಡು ಕಂಡುಬಂದಿದ್ದು, ವಿಶೇಷ ಪೂಜಾ ಕಾರ್ಯಕ್ರಮಗಳಲ್ಲಿ ಭಕ್ತರು ಶ್ರದ್ಧೆಯಿಂದ ಭಾಗವಹಿಸಿದರು.

ಸಂಜೆ ಖ್ಯಾತ ಗಾಯಕ ಪುತ್ತೂರು ನರಸಿಂಹ ನಾಯಕ್ ಅವರ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಿತು. ಭಕ್ತಿಗೀತೆಗಳ ಮೂಲಕ ಅವರು ನೆರೆದಿದ್ದ ಭಕ್ತರನ್ನು ಭಕ್ತಿಭಾವದಲ್ಲಿ ತೇಲಿಸಿದರು. ಬಳಿಕ ಪಂ. ವೆಂಕಟನರಸಿಂಹಾಚಾರ್ಯ ಗುಡೆಬೆಲ್ಲೂರು ಅವರಿಂದ ಪ್ರವಚನ ಹಾಗೂ ಫಲಮಂತ್ರಾಕ್ಷತೆ ಕಾರ್ಯಕ್ರಮ ಜರುಗಿತು.

ಉತ್ತರಾರಾಧನೆಯ ಅಂಗವಾಗಿ ಮಠಕ್ಕೆ ಆಗಮಿಸಿದ್ದ ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ್, ಮಾಜಿ ಸಂಸದ ಸಂಗಣ್ಣ ಕರಡಿ, ಮಾಜಿ ಶಾಸಕ ಬಸವರಾಜ ಹಿಟ್ನಾಳ್, ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ, ವಕೀಲ ರಾಘವೇಂದ್ರ ಪಾನಗಂಟಿ ಸೇರಿದಂತೆ ಹಲವು ಗಣ್ಯರು ರಾಯರ ದರ್ಶನ ಪಡೆದರು.

ಮೂರು ದಿನಗಳ ಕಾಲ ನಡೆದ ಆರಾಧನಾ ಮಹೋತ್ಸವದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತರ ಗಮನ ಸೆಳೆದವು.

ಪೋಟೊ31.5

ಕೊಪ್ಪಳ ನಗರದ ಶ್ರೀ ರಾಘವೇಂದ್ರ ಮಹಾಸ್ವಾಮಿಗಳ ಮಠದಲ್ಲಿ ಸೋಮವಾರ ಉತ್ತರಾರಾಧನೆ ಅಂಗವಾಗಿ ರಥೋತ್ಸವ ಜರುಗಿತು.

31.6

ಕೊಪ್ಪಳ ನಗರದ ಶ್ರೀ ರಾಘವೇಂದ್ರ ಮಹಾಸ್ವಾಮಿಗಳ ಮಠದಲ್ಲಿ ಉತ್ತರಾರಾಧನೆ ಅಂಗವಾಗಿ ಅಲಂಕೃತಗೊಂಡ ಶ್ರೀ ರಾಘವೇಂದ್ರ ಮಹಾಸ್ವಾಮಿಗಳ ಉತ್ಸವ ಮೂರ್ತಿ.