ಶನಿವಾರ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ ನೆರವೇರಿತು. ಅಂದು ಬೆಳಗ್ಗೆ ಅಷ್ಟೋತ್ತರದಿಂದ ಆರಂಭವಾದ ಕಾರ್ಯಕ್ರಮದಲ್ಲಿ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಹಾಗೂ ಮಹಾಮಂಗಳಾರತಿ ನೆರವೇರಿಸಲಾಯಿತು.

ಕಲಘಟಗಿ: ಪಟ್ಟಣದ ಎಲೆಪೇಟೆಯಲ್ಲಿರುವ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ಆ. 29ರಿಂದ 31ರ ವರೆಗೆ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಶನಿವಾರ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ ನೆರವೇರಿತು. ಅಂದು ಬೆಳಗ್ಗೆ ಅಷ್ಟೋತ್ತರದಿಂದ ಆರಂಭವಾದ ಕಾರ್ಯಕ್ರಮದಲ್ಲಿ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಹಾಗೂ ಮಹಾಮಂಗಳಾರತಿ ನೆರವೇರಿಸಲಾಯಿತು. ಬಳಿಕ ಕಲಘಟಗಿ ತಾಲೂಕು ಬ್ರಾಹ್ಮಣ ಸಂಘದ ಸಹಯೋಗದಲ್ಲಿ ಅಷ್ಟೋತ್ತರ ಕಾರ್ಯಕ್ರಮ ನಡೆಯಿತು. ವೇಣುಗೋಪಾಲ ಭಜನಾ ಮಂಡಳಿ ಹಾಗೂ ಪರದ ಭಜನಾ ಮಂಡಳಿಯವರಿಂದ ಭಕ್ತಿಗೀತೆ ಮತ್ತು ಸಂಗೀತ ಕಾರ್ಯಕ್ರಮ ಜರುಗಿತು.

ಭಾನುವಾರ ಶ್ರೀ ಪವಮಾನ ಹೋಮ ಹಾಗೂ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಧ್ಯಾರಾಧನೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಆಗಮಿಸಿದ್ದ ನೂರಾರು ಭಕ್ತರಿಗೆ ಅನ್ನಪ್ರಸಾದ ಸೇವೆ ಏರ್ಪಡಿಸಲಾಗಿತ್ತು.

ಆ. 31ರಂದು ಉತ್ತರಾರಾಧನೆ ಕಾರ್ಯಕ್ರಮದೊಂದಿಗೆ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ ಸಂಪನ್ನಗೊಳ್ಳಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

ಈ ಸಂದರ್ಭದಲ್ಲಿ ಶ್ರೀ ಪಂಚಮುಖಿ ಆಂಜನೇಯ ಸ್ವಾಮಿ ಹಾಗೂ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಸನ್ನಿಧಾನದವರು, ಶ್ರೀ ರಾಘವೇಂದ್ರ ಸ್ವಾಮಿ ಟ್ರಸ್ಟ್‌ನ ಪದಾಧಿಕಾರಿಗಳು ಹಾಗೂ ನೂರಾರು ಭಕ್ತರು ಪಾಲ್ಗೊಂಡಿದ್ದರು.