ಕೊಪ್ಪಳ: ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಸ್ಥಳದ ಮೇಲೆ ಏಕಾಏಕಿ ಕೊಪ್ಪಳ ಎಸ್ಪಿ ಡಾ.ರಾಮ್ ಎಲ್ ಅರಸಿದ್ದಿ ನೇತೃತ್ವದ ತಂಡ ದಾಳಿ ನಡೆಸಿ ವಾಹನ ಜಪ್ತಿ ಮಾಡಿ ಪ್ರಕರಣ ದಾಖಲಿಸಿದ ಘಟನೆ ಸೋಮವಾರ ನಡೆದಿದೆ.

ತಾಲೂಕಿನ ಬಂಡಿ ಹರ್ಲಾಪುರ ವ್ಯಾಪ್ತಿಯಲ್ಲಿ ಬರುವ ಸರ್ವೆ ನಂ.133 ಹಾಗೂ 134ನಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಎಸ್ಪಿ ಡಾ.ರಾಮ್ ಎಲ್.ಅರಸಿದ್ದಿ ತಮ್ಮ ತಂಡದೊಂದಿಗೆ ದಾಳಿ ನಡೆಸುವ ಮೂಲಕ ಜೆಸಿಬಿ, ಕ್ರೇನ್ ಹಾಗೂ ಟ್ರಕ್ ಮತ್ತು ಟ್ರ್ಯಾಕ್ಟರ್‌ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂಡಿ ಹರ್ಲಾಪುರ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎನ್ನುವ ದೂರು ಕೇಳಿ ಬಂದಿದ್ದು, ಅಷ್ಟೆ ಅಲ್ಲದೆ ಅಕ್ರಮ ಗಣಿಗಾರಿಕೆ ಕುರಿತಂತೆ ಎಸ್ಪಿ ಹಾಗೂ ಐಜಿಪಿಗೂ ದೂರು ಸಲ್ಲಿಕೆಯಾಗಿದ್ದವು.

ಈ ಹಿನ್ನೆಲೆಯಲ್ಲಿ ಎಸ್ಪಿ ಡಾ. ರಾಮ್ ಎಲ್.ಅರಸಿದ್ದಿ ಹಾಗೂ ಹೆಚ್ಚುವರಿಎಸ್ಪಿ ಹೇಮಂತಕುಮಾರ ನೇತೃತ್ವದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸುಮಾರು 30 ಸಿಬ್ಬಂದಿಗಳ ಜಂಟಿಯಾಗಿ ದಾಳಿ ನಡೆಸಿದ್ದಾರೆ.

ದಾಳಿ ನಡೆದ ಸಂದರ್ಭದಲ್ಲಿ 12 ಟ್ರಕ್‌ಗಳು ಸಿಕ್ಕಿದ್ದು, ಅದರಲ್ಲಿ 3 ಟ್ರಕ್ ನಲ್ಲಿ ಕಲ್ಲು ಲೋಡ್ ಆಗಿದ್ದವು. 16 ಟ್ರ್ಯಾಕ್ಟರ್‌, 13 ಜೆಸಿಬಿ, ಹಿಟಾಚಿ, 2 ಕ್ರೇನ್‌ ದೊರೆತಿದ್ದು, ಅವುಗಳನ್ನು ಸೀಜ್ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಪ್ಪಳ ತಾಲೂಕಿನ ಬಂಡಿ ಹರ್ಲಾಪೂರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯ ಮೇಲೆ ದಾಳಿ ಮಾಡಲಾಗಿದ್ದು, ಈ ಕುರಿತು ಮುನಿರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ ಎಂದು ಕೊಪ್ಪಳ ಎಸ್ಪಿ ಡಾ.ರಾಮ್ ಎಲ್ ಅರಸಿದ್ದಿ ತಿಳಿಸಿದ್ದಾರೆ.