ಜೂನ್ ತಿಂಗಳಲ್ಲಿ ಸಂಪೂರ್ಣ ಕೈಕೊಟ್ಟಿದ್ದ ಮಳೆ ಇದೀಗ ಜುಲೈ ಆರಂಭದಲ್ಲಿ ಬಿರುಸು ಪಡೆದುಕೊಂಡಿದ್ದು, ಕಳೆದೆರಡು ದಿನಗಳಲ್ಲಿ ಉತ್ತಮ ಮಳೆಯಾಗಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಜೂನ್ ತಿಂಗಳಲ್ಲಿ ಸಂಪೂರ್ಣ ಕೈಕೊಟ್ಟಿದ್ದ ಮಳೆ ಇದೀಗ ಜುಲೈ ಆರಂಭದಲ್ಲಿ ಬಿರುಸು ಪಡೆದುಕೊಂಡಿದ್ದು, ಕಳೆದೆರಡು ದಿನಗಳಲ್ಲಿ ಉತ್ತಮ ಮಳೆಯಾಗಿದೆ.

ಗುರುವಾರ ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಹಲವು ಕಡೆಗಳಲ್ಲಿ ಬೆಳಗ್ಗಿನಿಂದ ಉತ್ತಮವಾಗಿ ಮಳೆ ಸುರಿದಿದ್ದು, ಜಲ ಮೂಲಗಳಲ್ಲಿ ನೀರಿನ ಮಟ್ಟದಲ್ಲಿ ಏರಿಕೆ ಕಂಡಿದೆ.

ಭಾರಿ ಮಳೆ ಸುರಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ‌ ಹೆದ್ದಾರಿ 275ರ ಕೆದಕಲ್ ಸಮೀಪದಲ್ಲಿ ಭಾರಿ ಗಾತ್ರದ ಮರ ಬಿದ್ದಿದೆ.‌ ಬೆಳಗ್ಗೆ 6 ಗಂಟೆ ಸಮಯಕ್ಕೆ ಭಾರಿ ಗಾತ್ರದ ಮರ ಬಿದ್ದು ಸಂಚಾರಕ್ಕೆ ತೊಡಕುಂಟಾಯಿತು. ಒಂದು ಗಂಟೆಗೂ ಹೆಚ್ಚು ಸಮಯ ಸಂಚಾರ ಸ್ಥಗಿತವಾಗಿತ್ತು. ಬಳಿಕ ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಇದರ ಪರಿಣಾಮವಾಗಿ ಜಿಲ್ಲೆಯ ಪ್ರಮುಖ ಜಲಾಶಯಗಳಲ್ಲಿ ಒಂದಾದ ಹಾರಂಗಿ ಜಲಾಶಯಕ್ಕೆ ನೀರಿನ ಒಳ ಹರಿವಿನ ಪ್ರಮಾಣದಲ್ಲಿ ಕೊಂಚ ಮಟ್ಟಿಗೆ ಏರಿಕೆ ಕಂಡುಬಂದಿದೆ.

ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಜಲಾಶಯಕ್ಕೆ ಒಟ್ಟು 858 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಸದ್ಯ ಜಲಾಶಯದ ನೀರಿನ ಮಟ್ಟ ಮತ್ತು ಗರಿಷ್ಠ ಸಂಗ್ರಹ ಸಾಮರ್ಥ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಜಲಾಶಯದಿಂದ 180 ಕ್ಯೂಸೆಕ್ ನೀರನ್ನು ನದಿಗೆ ಹೊರ ಹರಿಸುತ್ತಿದ್ದಾರೆ.