ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂದಿನ 4 ದಿನಗಳ ಕಾಲ ನವೆಂಬರ್ 29ರಿಂದ ಡಿಸೆಂಬರ್ 2ರ ವರೆಗೆ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ
ದೊಡ್ಡಬಳ್ಳಾಪುರ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಮುನ್ಸೂಚನೆಯಂತೆ ದೇಶದ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರ ಪರಿಣಾಮವಾಗಿ ರಾಜ್ಯದ ದಕ್ಷಿಣ ಭಾಗದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂದಿನ 4 ದಿನಗಳ ಕಾಲ ನವೆಂಬರ್ 29ರಿಂದ ಡಿಸೆಂಬರ್ 2ರ ವರೆಗೆ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.
ಮುಂಜಾಗ್ರತಾ ಕ್ರಮ:ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದ್ದು,
ಸಾರ್ವಜನಿಕರು ಜಿಲ್ಲೆಯ ಹವಾಮಾನ ಪರಿಸ್ಥಿತಿಯ ಕುರಿತಂತೆ 24×7 ವರದಿಗಳನ್ನು ಜಿಲ್ಲಾಧಿಕಾರಿಗಳ ಸಾಮಾಜಿಕ ಜಾಲತಾಣ ಹಾಗೂ ಸ್ಥಳೀಯ ಸುದ್ದಿ ಪತ್ರಿಕೆಗಳನ್ನು ಪರಿಶೀಲಿಸಬಹುದಾಗಿರುತ್ತದೆ. ಹಾಗೂ ಸಾರ್ವಜನಿಕರು ಯಾವುದೇ ಅನಧಿಕೃತ ವದಂತಿಗಳಿಗೆ ಕಿವಿಗೊಡಬೇಡಿ. ನೀರು ಹರಿಯುವ ತಗ್ಗು ಪ್ರದೇಶ, ಕೆರೆ, ಕಾಲುವೆ ಪ್ರದೇಶಗಳಿಗೆ ಹೋಗದಂತೆ ಸಾರ್ವಜನಿಕರು ಹಾಗೂ ಮುಖ್ಯವಾಗಿ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು. ಕೃಷಿಕರು ಮಳೆಯಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಿಂದ ದೂರವಿರುವುದು ಸಾರ್ವಜನಿಕರು,ಮಕ್ಕಳು, ಕಾರ್ಮಿಕರು ಮಳೆ ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯುವುದು ಅವಶ್ಯ ಎಂದು ಜಿಲ್ಲಾಡಳಿತ ತಿಳಿಸಿದೆ.ಈ ಸಂದರ್ಭದಲ್ಲಿ ಮಕ್ಕಳು, ಸಾರ್ವಜನಿಕರು ಅಪಾಯಕಾರಿ ಮರ, ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರುವುದು. ದುರ್ಬಲವಾದ, ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ, ಮರಗಳ ಕೆಳಗೆ ನಿಲ್ಲಬಾರದು. ಮೇಲಿನ ಅಂಶಗಳನ್ನು ಮಳೆ ಗಾಳಿಯಂತಹ ಸಂದರ್ಭಗಳಲ್ಲಿ ಮೇಲಿನ ಚಾಚೂ ತಪ್ಪದೇ ಕಡ್ಡಾಯವಾಗಿ ಪಾಲಿಸುವುದು ಅಗತ್ಯ ಎಂದು ತಿಳಿಸಿದೆ.
ಸಾರ್ವಜನಿಕರು ತಗ್ಗು ಪ್ರದೇಶದಲ್ಲಿ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಅಥವಾ ಶಿಥಿಲಾವಸ್ಥೆಯಿಂದ ಜಾರುವ ಹಂತದಲ್ಲಿರುವ ಕಾಂಪೌಂಡ್ ಅಥವಾ ಮನೆಯ ಗೋಡೆ, ಇಂತಹ ದುರ್ಬಲವಾದ ಕಟ್ಟಡದಲ್ಲಿ ವಾಸವಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ವಾಸಿಸುವುದು. ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಕಾಲುಸಂಕ, ಕಿರು ಸೇತುವೆ ಇತ್ಯಾದಿಗಳನ್ನು ದಾಟುವ ಮುನ್ನ ಎಚ್ಚರಿಕೆ ವಹಿಸುವುದು. ಸಾರ್ವಜನಿಕರಿಗೆ ಈ ಮೇಲಿನ ಅಂಶಗಳಂತೆ ಶೀಥಿಲಾವಸ್ಥೆಯಿರುವ ಅಥವಾ ಕುಸಿತದ ಹಂತದ ಕಾಂಪೌಂಡ್ ಅಥವಾಮನೆಯಗೋಡೆ ಕಂಡುಬಂದಲ್ಲಿ ಈ ಕೆಳಗಿನ ದೂರವಾಣಿಗೆ ಮಾಹಿತಿ ನೀಡುವುದು.
ಕಂಟ್ರೋಲ್ ರೂಂ ಸ್ಥಾಪನೆ:ಹೆಚ್ಚಿನ ಮಾಹಿತಿಗಾಗಿ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ಸಂಖ್ಯೆ. 080-28388005, ಅರಣ್ಯ ಇಲಾಖೆ ಸಹಾಯವಾಣಿ ಸಂಖ್ಯೆ: 1926 ಹಾಗೂ ಅಗ್ನಿಶಾಮಕ ಇಲಾಖೆ ಸಹಾಯವಾಣಿ ಸಂಖ್ಯೆ: 080-27681101 ಗೆ ಅಥವಾ ಆಯಾ ತಾಲೂಕು ತಹಶೀಲ್ದಾರ ಕಛೇರಿಗೆ ಸಂಪರ್ಕಿಸಲು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.