ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರು
ಹೆಚ್ಚು ಮಕ್ಕಳಿದ್ದರೆ ಗುಣಮಟ್ಟದ ಜೀವನ ನೀಡಲು ಕಷ್ಟವಾಗುವುದರಿಂದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಪ್ರತಿಯೊಬ್ಬರಿಗೂ ಜಾಗೃತಿ ಮೂಡಿಸಬೇಕಿದೆ ಎಂದು ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಹೇಳಿದರು.ಬಿಬಿಎಂಪಿ ಪುರಭವನದಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಅಭಿವೃದ್ಧಿಯಲ್ಲಿ ಜನಸಂಖ್ಯೆಯು ಪ್ರಮುಖ ಪಾತ್ರ ವಹಿಸುತ್ತದೆ. ಜನಸಂಖ್ಯೆಯಲ್ಲಿ ವಿಶ್ವದಲ್ಲಿಯೇ ಚೀನಾ ಮೊದಲ ಸ್ಥಾನ, ಭಾರತ ಎರಡನೇ ಸ್ಥಾನದಲ್ಲಿದೆ. ಕಡಿಮೆ ಮಕ್ಕಳು ಇದ್ದರೆ ಉತ್ತಮ ಜೀವನ ರೂಪಿಸಿಕೊಡಬಹುದಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಪೋಷಕರು ಚಿಂತನೆ ನಡೆಸಬೇಕು ಎಂದು ಹೇಳಿದರು.
ಬಹುಮಾನ ವಿತರಣೆ:ವಿಶ್ವ ಜನಸಂಖ್ಯಾ ದಿನದ ಅಂಗವಾಗಿ ಜನಸಂಖ್ಯೆ ನಿಯಂತ್ರಣ, ಕುಟುಂಬ ಯೋಜನೆಗಳು ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಸಾಕ್ಷ್ಯಾ ಚಿತ್ರ, ರೀಲ್ಸ್, ಪೋಸ್ಟರ್ ಸಿದ್ಧಪಡಿಸುವ ಕುರಿತು ಏರ್ಪಡಿಸಿದ್ದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಮುಖ್ಯ ಆರೋಗ್ಯಾಧಿಕಾರಿ ಡಾ। ಸೈಯದ್ ಸಿರಾಜುದ್ದೀನ್ ಮದನಿ, ಡಾ। ನಿರ್ಮಲಾ ಬುಗ್ಗಿ, ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾದ ಅಧ್ಯಕ್ಷೆ ಡಾ। ಪದ್ಮಿನಿ ಪ್ರಸಾದ್, ಗಾಯಕ ಶಶಿಧರ್ ಕೋಟೆ, ನಗೆ ಭಾಷಣಾಗಾರ್ತಿ ಸುಧಾ ಬರಗೂರು ಉಪಸ್ಥಿತರಿದ್ದರು.