ಕನ್ನಡಪ್ರಭ ವಾರ್ತೆ ಶಿವಮೊಗ್ಗ

ದಿ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ವಿಭಾಗದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ರಮೇಶ್ ಶಂಕರಘಟ್ಟ, ಪ್ರಧಾನಿಯಾದ ರಾಜೀವ್ ಗಾಂಧಿ ದೇಶಕ್ಕೆ ತಂತ್ರಜ್ಞಾನ ಕ್ರಾಂತಿಯನ್ನು ಪರಿಚಯಿಸಿದರು. ಕಂಪ್ಯೂಟರ್, ಟೆಲಿಕಾಂ ಕ್ರಾಂತಿಗೆ ಮುನ್ನುಡಿ ಬರೆದರು. ಮತದಾನದ ವಯಸ್ಸನ್ನು 21 ರಿಂದ 18ಕ್ಕೆ ಇಳಿಸಿ ಯುವಜನರಿಗೆ ಅಧಿಕಾರ ನೀಡಿದರು. ಪ್ರತಿ ಜಿಲ್ಲೆಯಲ್ಲೂ ನವೋದಯ ವಿದ್ಯಾಲಯ ಆರಂಭಿಸಿ ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದರು. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಿ ಅಧಿಕಾರ ವಿಕೇಂದ್ರೀಕರಣಕ್ಕೆ ಬುನಾದಿ ಹಾಕಿದರು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್ ಮಾತನಾಡಿ, ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಹರಿಕಾರ. ಹಿಂದುಳಿದವರ ನಿಜ ಸ್ಥಿತಿ ಅರಿಯಲು ಹಾವನೂರು ಆಯೋಗ ರಚಿಸಿದರು. ಉಳುವವನೇ ಹೊಲದೊಡೆಯ ಕಾಯ್ದೆ ಜಾರಿಗೆ ತಂದು ಭೂಮಿ ಇಲ್ಲದವರಿಗೆ ಭೂಮಿಯ ಒಡೆತನ ನೀಡಿದರು. ಜೀತ ಪದ್ಧತಿ ನಿರ್ಮೂಲನೆ, ಬಡವರಿಗೆ ಉಚಿತ ನಿವೇಶನ, ಕೊಳಗೇರಿ ನಿರ್ಮೂಲನೆ ಮಂಡಳಿ ರಚನೆ, ಹಿಂದುಳಿದ ವರ್ಗಗಳಿಗಾಗಿ ಪ್ರತ್ಯೇಕ ಇಲಾಖೆ ಸ್ಥಾಪನೆಯಂತಹ ಕ್ರಾಂತಿಕಾರಿ ನಿರ್ಧಾರಗಳಿಂದ ಇಂದಿಗೂ ಹಿಂದುಳಿದ ವರ್ಗಗಳ ಹೃದಯದಲ್ಲಿ ಉಳಿದಿದ್ದಾರೆ ಎಂದು ಸ್ಮರಿಸಿದರು.

ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶ್ವೇತಾ ಬಂಡಿ, ಪ್ರಮುಖರಾದ ಇಸ್ಮಾಯಿಲ್ ಖಾನ್, ಉಮಾಪತಿ, ಎಸ್.ಪಿ.ಶೇಷಾದ್ರಿ, ಜಿ.ಡಿ.ಮಂಜುನಾಥ್ ಮಾತನಾಡಿದರು. ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ, ಚಂದ್ರಶೇಖರ್, ಎಸ್.ಟಿ.ಹಾಲಪ್ಪ, ಎಚ್.ಪಿ.ಗಿರೀಶ್, ಯು.ಶಿವಾನಂದ್, ಗುರುಪ್ರಸಾದ್, ಮಿಥುನ್, ನಾಗೇಂದ್ರ, ರುದ್ರೇಶ್, ಸೈಯದ್ ವಾಹಿದ್ ಅಡ್ಡು ಇತರರಿದ್ದರು.