ಉಡುಪಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೂ ಮುನ್ನ ಬೋರ್ಡ್ ಹೈಸ್ಕೂಲ್ ನಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ಭುವನೇಶ್ವರಿ ದೇವಿಯ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಈ ಮರವಣಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೂ ಮುನ್ನ ಬೋರ್ಡ್ ಹೈಸ್ಕೂಲ್ ನಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ಭುವನೇಶ್ವರಿ ದೇವಿಯ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಈ ಮರವಣಿಗೆಯನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು, ಸ್ಥಬ್ದಚಿತ್ರಗಳು ಭಾಗವಹಿಸಿದ್ದವು. ಈ ಸ್ತಬ್ದಚಿತ್ರಗಳಲ್ಲಿ ಕೆ.ಆರ್.ಐ.ಡಿ.ಎಲ್. ಪ್ರಥಮ ಸ್ಥಾನ, ನಿರ್ಮಿತಿ ಕೇಂದ್ರ ದ್ವಿತೀಯ ಸ್ಥಾನ ಹಾಗೂ ನಗರಸಭೆ ತೃತೀಯ ಸ್ಥಾನ ಪಡೆದಿದೆ.ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅಂಬಲಪಾಡಿ ಕಿದಿಯೂರು ವಿದ್ಯಾ ಸಮುದ್ರ ಆಂಗ್ಲಮಾಧ್ಯಮ ಶಾಲೆ ಪ್ರಥಮ ಸ್ಥಾನ, ಮಲ್ಪೆ ನಾರಾಯಣ ಗುರು ಪ್ರೌಢಶಾಲೆ ದ್ವಿತೀಯ ಸ್ಥಾನ ಹಾಗೂ ಇಂದ್ರಾಳಿ ಆಂಗ್ಲ ಮಾಧ್ಯಮ ಶಾಲೆ ತೃತೀಯ ತಮ್ಮದಾಗಿಸಿಕೊಂಡಿದೆ. ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಡೆದ ಪಥ ಸಂಚಲನದಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಉಡುಪಿಯ ಒಳಕಾಡು ಸರಕಾರಿ ಪ್ರೌಢಶಾಲೆ ಪ್ರಥಮ, ಮಣಿಪಾಲದ ಮಾಧವ ಕೃಪಾ ಪ್ರೌಢಶಾಲೆ ದ್ವಿತೀಯ ಹಾಗೂ ಉಡುಪಿಯ ಸೈಂಟ್ ಸಿಸಿಲಿ ಪ್ರೌಢಶಾಲೆ (ಹುಡುಗರು) ತೃತೀಯ ಸ್ಥಾನ ಮತ್ತು ಕಾಲೇಜು ವಿಭಾಗದಲ್ಲಿ ಉಡುಪಿಯ ಪೂರ್ಣಪ್ರಜ್ಞ ಕಾಲೇಜು ಎನ್.ಸಿ.ಸಿ ಆರ್ಮಿ ಪ್ರಥಮ, ಉಡುಪಿಯ ಪೂರ್ಣಪ್ರಜ್ಞ ಕಾಲೇಜು ಎನ್.ಸಿ.ಸಿ ನೇವಿ ದ್ವಿತೀಯ ಹಾಗೂ ಕುಂಜಿಬೆಟ್ಟು ಮಹಾತ್ಮಾ ಗಾಂಧಿ ಕಾಲೇಜು ತೃತೀಯ ಸ್ಥಾನ ಪಡೆಯಿತು.