ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಸಚಿವ ರಾಮಲಿಂಗಾರೆಡ್ಡಿ ಅವರನ್ನು ತಾತ್ಕಾಲಿಕವಾಗಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ. ಮುಂದಿನ ದಿನಗಳಲ್ಲಿ ನಮ್ಮ ಜಿಲ್ಲೆಯ ಶಾಸಕರೇ ಸಚಿವರಾಗಿ ಜಿಲ್ಲಾ ಉಸ್ತುವಾರಿ ಸಚಿವರಾಗಲಿದ್ದಾರೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಸಮೀಪದ ಮಠದದೊಡ್ಡಿ ಹಾಗೂ ಮಡೇನಹಳ್ಳಿ ಗ್ರಾಮಗಳಲ್ಲಿ ಲೋಕೋಪಯೋಗಿ ಇಲಾಖೆಯಿಂದ ಸುಮಾರು 60 ಲಕ್ಷ ರು. ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ಮುಂದುವರಿಸಲು ತಾತ್ಕಲಿಕವಾಗಿ ಮುಖ್ಯಮಂತ್ರಿ ಅವರು ಉಸ್ತುವಾರಿ ಸಚಿವರನ್ನು ತಾತ್ಕಲಿಕವಾಗಿ ನೇಮಕ ಮಾಡಿದ್ದಾರೆ. ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾದ ಸಂದರ್ಭದಲ್ಲಿ ಜಿಲ್ಲೆಯಿಂದ ಒಬ್ಬರು ಸಚಿವರಾಗುವುದು ಖಚಿತ. ಉಳಿದಂತೆ ಇನ್ನೊಂದು ಸ್ಥಾನದ ಬಗ್ಗೆ ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ತೀರ್ಮಾನಿಸುತ್ತಾರೆ ಎಂದರು.

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿರುವ ಹಿನ್ನೆಲೆಯಲ್ಲಿ ತಾಲೂಕಿಗೆ ವಿಶೇಷ ಕಾಳಜಿ ವಹಿಸಿ ವಿಶೇಷ ಪ್ಯಾಕೇಜ್ ನೀಡಲಿದ್ದಾರೆ. ಇನ್ನು ಸಾವಿರಾರು ಕೋಟಿ ಅನುದಾನ ನೀಡುವ ನಿರೀಕ್ಷೆ ಇದೆ. ಕ್ಷೇತ್ರದ ಸವಾಂಗೀಣ ಅಭಿವೃದ್ಧಿಗೆ ಸರ್ಕಾರದ ಹೆಚ್ಚಿನ ಸಹಕಾರ ನಿರೀಕ್ಷೆ ಇದೆ ಎಂದು ಅಭಿಪ್ರಾಯಿಸಿದರು.


ಬಿಡದಿ ಟೌನ್ ಶಿಪ್ ಪ್ರಾರಂಭ ಮಾಡಲು ಹೊರಟಿದ್ದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದ ಮೇಲೆ ಅದಕ್ಕೆ ಮತ್ತಷ್ಟು ವೇಗ ನೀಡಿದ್ದಾರೆ. ಇಂತಹ ಅಭಿವೃದ್ಧಿ ಕಾರ್ಯವನ್ನು ಎಚ್.ಡಿ. ಕುಮಾರಸ್ವಾಮಿ ಕೈಯಲ್ಲಿ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ ಎಂದು ಕಿಡಿಕಾರಿದರು.

ಬಿಡದಿ ಟೌನ್ ಶಿಪ್‌ ಅಭಿವೃದ್ಧಿಯಾದರೇ ಡಿ.ಕೆ.ಶಿವಕುಮಾರ್ ಹೆಸರು ತೆಗೆದುಕೊಳ್ಳುತ್ತಾರೆ ಅಂತ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ. ಬೇರೆ ತಾಲೂಕಿನ ಕಾರ್ಯಕರ್ತರನ್ನು ಕರೆಸಿ ಪ್ರತಿಭಟನೆ ಮಾಡಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದು ಆರೋಪಿಸಿದರು.

ಈ ವೇಳೆ ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ರಾಜೀವ್, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಜೋಗಿಗೌಡ, ನಿರ್ದೇಶಕ ಸಂದರ್ಶ, ಡಿಸಿಸಿ ಬ್ಯಾಂಕ್ ಮಾಜಿ ಮೇಲ್ವಿಚಾರಕ ಪುಟ್ಟಸ್ವಾಮಿ, ಮುಖಂಡರಾದ ಮಠದದೊಡ್ಡಿ ವಿರೇಂದ್ರ, ಶಿವಲಿಂಗ, ಮಧು, ಮಡೇನಹಳ್ಳಿ ಸಿದ್ದಲಿಂಗಪ್ರಸಾದ್, ಎಂ.ಎಸ್.ರುದ್ರಮಣಿ, ರುದ್ರಮುನಿ, ವಿಜಯ್ ಕುಮಾರ್, ಮಹೇಶ್, ಜಗದೀಶ್, ಶಿವಪ್ರಸಾದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.