ಮಂಗಳೂರು: ಮಹಿಳಾ ಮೀಸಲಾತಿ ವಿಧೇಯಕಕ್ಕೆ ಹಿನ್ನಡೆಯಾದ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡಿ ಗೂಬೆ ಕೂರಿಸುತ್ತಿದ್ದಾರೆ. ಇದು ಚುನಾವಣಾ ಲಾಭಕ್ಕಾಗಿ ಮಾಡುತ್ತಿರುವ ಗಿಮಿಕ್ ಎಂದು ಮಾಜಿ ಸಚಿವ ರಮಾನಾಥ ರೈ ಟೀಕಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶೇಷ ಅಧಿವೇಶನದಲ್ಲಿ ಈ ಮಸೂದೆಗೆ ಒಪ್ಪಿಗೆ ಪಡೆಯಲು ಸಂಖ್ಯಾಬಲ ಇಲ್ಲ ಎನ್ನುವುದು ಗೊತ್ತಿದ್ದೂ ವಿಪಕ್ಷಗಳ ಮೇಲೆ ಗೂಬೆ ಕೂರಿಸುವ ಉದ್ದೇಶದಿಂದಲೇ ಈ ಪ್ರಯತ್ನ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಮಹಿಳಾ ವಿರೋಧಿ ಎನ್ನಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಷ್ಟು ಜನ್ಮ ಎತ್ತಿದರೂ ಆಗಲ್ಲ ಎಂದರು.
ಕ್ಷೇತ್ರ ಪುನರ್ ವಿಂಗಡಣೆ ಜಾರಿಗೊಳಿಸಲು ಕೇಂದ್ರ ಸರ್ಕಾರ ಮುಂದಾದಾಗ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಇದನ್ನು ಹೇಗಾದರೂ ಜಾರಿಗೊಳಿಸಿ ಬಿಜೆಪಿ ಪ್ರಾಬಲ್ಯ ಇರುವ ರಾಜ್ಯಗಳಲ್ಲಿ ಸಂಖ್ಯಾಬಲ ಹೆಚ್ಚಿಸಲು ಮಹಿಳಾ ಮೀಸಲಾತಿ ಬಿಲ್ನ್ನು ಅದರೊಂದಿಗೆ ಜೋಡಿಸಿಕೊಂಡಿತ್ತು. ಈಗ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡಿದರೆ ಅವರು ಸಫಲರಾಗಲು ಸಾಧ್ಯವಿಲ್ಲ ಎಂದು ರಮಾನಾಥ ರೈ ಹೇಳಿದರು.ಮಹಿಳೆಯರಿಗೆ ಸಾಮಾಜಿಕ ನ್ಯಾಯ ಕೊಡಿಸಿದ್ದು, ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ನೀಡಿದ್ದು, ವಿಧವಾ ಮಾಸಾಶನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸ್ಥಾಪನೆ, ಅಂಗನವಾಡಿಗಳ ಸ್ಥಾಪನೆ, ಹೆರಿಗೆ ಆಸ್ಪತ್ರೆಗಳು, ಶ್ರೀ ಶಕ್ತಿ ಕಾರ್ಯಕ್ರಮಗಳ ಮೂಲಕ ಕಾಂಗ್ರೆಸ್ ದೊಡ್ಡ ಮಟ್ಟದಲ್ಲಿ ಮಹಿಳೆಯರ ಪರವಾಗಿ ಕೆಲಸ ಮಾಡಿದೆ. ಇದೀಗ ಪಂಚ ಗ್ಯಾರಂಟಿಗಳು ಇರೋದೇ ಹೆಣ್ಮಕ್ಕಳಿಗಾಗಿ. ಕಾಂಗ್ರೆಸ್ ಎಂದೂ ಮಹಿಳೆಯರ ಪರವಾಗಿಯೇ ಕೆಲಸ ಮಾಡಿದೆ ಎಂದು ಹೇಳಿದರು.
ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ ಶೇ.50 ಮಹಿಳಾ ಮೀಸಲಾತಿ ಮಸೂದೆ ಮಂಡಿಸಲಾಗಿತ್ತು. ಆದರೆ ಬಿಜೆಪಿ ವಿರೋಧ ಮಾಡಿದ್ದರಿಂದ ಜಾರಿಯಾಗಿರಲಿಲ್ಲ. ಅದರ ನಂತರ ನರಸಿಂಹ ರಾವ್ ಪ್ರಧಾನಿಯಾದಾಗ ಅದೇ ಮೀಸಲಾತಿ ವಿಧೇಯಕವನ್ನು ಅಂದಿನ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿ ತೋರಿಸಿದೆ ಎಂದು ರೈ ಹೇಳಿದರು.ಕಾಂಗ್ರೆಸ್ ಮುಖಂಡರಾದ ಮಮತಾ ಗಟ್ಟಿ, ಹರಿನಾಥ್ ಬೋಂದೆಲ್, ಅಪ್ಪಿ, ಶುಭೋದಯ ಆಳ್ವ, ಬೇಬಿ ಕುಂದರ್, ಯೋಗೀಶ್ ಮತ್ತಿತರರಿದ್ದರು.